ಬೆಂಗಳೂರಿನಲ್ಲಿ ಮೋದಿ : ಮೋದಿಯ ಟಾಪ್ 10 ಹೇಳಿಕೆಗಳು!
Recommended Video
ಬೆಂಗಳೂರು, ಫೆಬ್ರವರಿ 04 : 'ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಕೊಡುಗೆ ಏನು?'. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದ ಪ್ರಶ್ನೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರ್ನಾಟಕದ ನೆಲದಲ್ಲಿಯೇ ಈ ಪ್ರಶ್ನೆಗೆ ಉತ್ತರ ನೀಡಿದರು. ಅಂಕಿ ಸಂಖ್ಯೆಗಳಲ್ಲಿಯೇ ತಮ್ಮ ಭಾಷಣ ಮುಗಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನವ ಕರ್ನಾಟಕ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭ ನಡೆಯಿತು. ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನರೇಂದ್ರ ಮೋದಿ ಮಹದಾಯಿ ಬಗ್ಗೆ ಚಕಾರವೆತ್ತಲಿಲ್ಲವೇಕೆ?
ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸುವ ಕುರಿತು ಹಲವು ವಿವಾದ ಎದ್ದಿತ್ತು. ಮಹದಾಯಿ ಹೋರಾಟಗಾರರು ಮೋದಿ ಆಗಮನಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಮೋದಿ ತಮ್ಮ ಭಾಷಣದಲ್ಲಿ ಮಹದಾಯಿ ವಿವಾದದ ಬಗ್ಗೆ ಯಾವುದೇ ಪ್ರಸ್ತಾಪವನ್ನು ಮಾಡಲಿಲ್ಲ.
ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ಗಮನದ ಬಾಗಿಲಲ್ಲಿ ನಿಂತಿದೆ
ಭಾಷಣದ ಬಗ್ಗೆ ಪರ, ವಿರೋಧ ಚರ್ಚೆ ನಡೆಯುತ್ತಿದೆ. ರಾಜ್ಯ ಸರ್ಕಾರಕ್ಕೆ ಮೋದಿ ತಕ್ಕ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಹೇಳಿದೆ. ಪ್ರಧಾನಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮೋದಿ ಭಾಷಣವನ್ನು ಕನ್ನಡದಲ್ಲಿ ಭಾಷಾಂತರ ಮಾಡಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ. ಮೋದಿ ಭಾಷಣದಲ್ಲಿ ಹೇಳಿದ 10 ಪ್ರಮುಖ ಅಂಶಗಳು ಇಲ್ಲಿವೆ...
ಕಾಂಗ್ರೆಸ್ Exit ಡೋರ್ನಲ್ಲಿ ನಿಂತಿದೆ
'ಕರ್ನಾಟಕದಲ್ಲಿ ಕಾಂಗ್ರೆಸ್ Exit ಡೋರ್ನಲ್ಲಿ ನಿಂತಿದೆ. ಸರ್ಕಾರ ತೊಲಗುವ ಕೌಂಟ್ ಡೌನ್ ಶುರುವಾಗಿದೆ. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವಾಗಿಸುತ್ತೇವೆ'.
ಚಿತ್ರಗಳು : ಬೆಂಗಳೂರಿನಲ್ಲಿ ಮೋಡಿ ಮಾಡಿದ ಮೋದಿ
ಕೇಂದ್ರ ಕೊಟ್ಟ ಅನುದಾನವೆಷ್ಟು?
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ರಾಜ್ಯಕ್ಕೆ 73,000 ಕೋಟಿ ಸಿಗುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯಕ್ಕೆ 2 ಲಕ್ಷ ಕೋಟಿಗೂ ಅಧಿಕ ಅನುದಾನ ಸಿಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ
'ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ 950 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗಿತ್ತು. ನಮ್ಮ ಸರ್ಕಾರ ಬಂದ ಮೇಲೆ 1,600 ಕಿ.ಮೀ. ರಸ್ತೆ ನಿರ್ಮಾಣ ಮಾಡಲಾಗಿದೆ'.
ಶೇ 10ರಷ್ಟು ಕಮೀಷನ್
'ಶೇ 10ರಷ್ಟು ಲಂಚ ನೀಡದೆ ರಾಜ್ಯದಲ್ಲಿ ಯಾವುದೇ ಕೆಲಸಗಳು ನಡೆಯುವುದಿಲ್ಲ. ಎಲ್ಲದಕ್ಕೂ ಕಮೀಷನ್ ಕೇಳಲಾಗುತ್ತದೆ. ಭ್ರಷ್ಟಾಚಾರದ ನಂಗಾನಾಚ್ ರಾಜ್ಯದಲ್ಲಿ ನಡೆಯುತ್ತಿದೆ'.
ಕಾಂಗ್ರೆಸ್ ಸಂಸ್ಕೃತಿಯನ್ನು ತೊಲಗಿಸೋಣ
'ಕರ್ನಾಟಕದ ಕಾಂಗ್ರೆಸ್ ಸರ್ಕಾರ ರಾಜನೀತಿಗೆ ವಿರುದ್ಧವಾಗಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ. ಇದಕ್ಕೆ ಉತ್ತರವನ್ನು ಮತದಾರರು ನೀಡಬೇಕಿದೆ'
ಭ್ರಷ್ಟಾಚಾರ ಮುಕ್ತ ಮಾಡುವ ಸಮಯ ಬಂದಿದೆ
'ಸಿದ್ದರಾಮಯ್ಯ ಸಂಪುಟದ ಅನೇಕ ಸಚಿವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಸ್ಟೀಲ್ ಬ್ರಿಡ್ಜ್ ವಿಚಾರದಲ್ಲಿ ಸಾವಿರಾರು ಕೋಟಿ ಲೂಟಿ ಮಾಡಲು ಹೊರಟಿದ್ದರು. ರಾಜ್ಯವನ್ನು ಭ್ರಷ್ಟಾಚಾರ ಮುಕ್ತವಾಗಿಸುವ ಸಮಯ ಬಂದಿದೆ'
ಬಿಜೆಪಿಗೆ ಮತ ನೀಡಿ
'ಮಹಾಪುರಷರ ನಾಡು ಕರ್ನಾಟಕದಲ್ಲಿ ಬದಲಾವಣೆಯಾಗಬೇಕಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ, ನವ ಕರ್ನಾಟಕದ ನಿರ್ಮಾಣಕ್ಕೆ ಸಹಕಾರ ನೀಡಿ'
ಪರಿಸರ ಸಂರಕ್ಷಣೆ
'ಬೆಂಗಳೂರಿಗೆ ಸಬ್ ಅರ್ಬನ್ ರೈಲು ಯೋಜನೆ ಜಾರಿಗೊಳಿಸಲಾಗಿದೆ. 17 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಇದರಿಂದ ಪರಿಸರ ಸಂರಕ್ಷಣೆ ಆಗಲಿದೆ. ಟ್ರಾಫಿಕ್ ಸಮಸ್ಯೆಯೂ ಕಡಿಮೆಯಾಗಲಿದೆ'
ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ಆಗಬೇಕು
'ದೆಹಲಿ ಮತ್ತು ರಾಜ್ಯ ಸರ್ಕಾರಗಳು ಒಂದೇ ಆದರೆ ರಾಜ್ಯ ಅಭಿವೃದ್ಧಿಯಾಗಲಿದೆ. ರೈತರಿಗಾಗಿ ಕೇಂದ್ರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾದರೆ ಅವು ರೈತರಿಗೆ ತಲುಪಲಿವೆ'.
ಕರ್ನಾಟಕದ ವ್ಯಕ್ತಿಯ ಶ್ರಮವಿದೆ
'ಭಾರತದ ಕಿರಿಯರ ತಂಡ ವಿಶ್ವಕಪ್ ಕ್ರಿಕೆಟ್ನಲ್ಲಿ ಜಯಗಳಿಸಿದೆ. ಕರ್ನಾಟಕದವರಾದ ರಾಹುಲ್ ದ್ರಾವಿಡ್ ಅವರ ಕೊಡುಗೆ ಇದರ ಹಿಂದಿದೆ'