ಫೆ.4ರಂದು ಅರಮನೆ ಮೈದಾನದಲ್ಲಿ ಮೋದಿ ಮೋಡಿ
ಬೆಂಗಳೂರು, ಜನವರಿ 30 : 2018ರ ಚುನಾವಣೆ ಪ್ರಚಾರಕ್ಕಾಗಿ ಕರ್ನಾಟಕ ಬಿಜೆಪಿ ಆರಂಭಿಸಿದ್ದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಮುಕ್ತಾಯಗೊಂಡಿದೆ. ಫೆ.4ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ನೂರಾರು ಸ್ವಯಂ ಸೇವಕರನ್ನು ನಿಯೋಜನೆ ಮಾಡಲಾಗಿದೆ.
ಚಿತ್ರಗಳು : ಕರ್ನಾಟಕದಲ್ಲಿ ಪರಿವರ್ತನಾ ಯಾತ್ರೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.4ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಸಮಾವೇಶ ನಡೆಯಲಿದೆ. ರಾಜ್ಯ ಬಿಜೆಪಿ ನಾಯಕರ 10 ತಂಡಗಳು ಈ ಸಮಾವೇಶವನ್ನು ಯಶಸ್ವಿಗೊಳಿಸಲು ಕಾರ್ಯ ನಿರ್ವಹಿಸುತ್ತಿವೆ. ಸಮಾವೇಶದಲ್ಲಿ ಸುಮಾರು 4 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ ಎಂಬುದು ಬಿಜೆಪಿ ನಾಯಕರ ನಿರೀಕ್ಷೆಯಾಗಿದೆ.
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೋಮವಾರ ಸಂಜೆ ದೆಹಲಿಯಲ್ಲಿ ಕರ್ನಾಟಕ ಬಿಜೆಪಿ ನಾಯಕರ ಸಭೆ ನಡೆಸಿದರು. ಸಮಾವೇಶದ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದರು. ಸಮಾವೇಶ ಯಶಸ್ವಿಯಾಗಲು ಎಲ್ಲಾ ನಾಯಕರು ಶ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಪರಿವರ್ತನಾ ಯಾತ್ರೆ ಉದ್ಘಾಟನಾ ಸಮಾವೇಶದಲ್ಲಿ ಜನರು ಕಡಿಮೆ ಇದ್ದರು, ಹಲವು ಗೊಂದಲ ಉಂಟಾಗಿತ್ತು. ಆದ್ದರಿಂದ, ಸಮಾರೋಪ ಸಮಾರಂಭಕ್ಕೆ ಭಾರೀ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ನವ ಕರ್ನಾಟಕ ಪರಿವರ್ತನಾ ಯಾತ್ರೆ
ಕರ್ನಾಟಕ ಬಿಜೆಪಿ 2017ರ ನವೆಂಬರ್ 2ರಂದು ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ಚಾಲನೆ ನೀಡಿತ್ತು. ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಯಾತ್ರೆ ಸಂಚಾರ ನಡೆಸಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೃಹತ್ ಸಮಾವೇಶ ನಡೆಸಿ, 2018ರ ಚುನಾವಣೆ ಪ್ರಚಾರ ಮಾಡಲಾಗಿದೆ.

ರಾಷ್ಟ್ರೀಯ ನಾಯಕರು ಪಾಲ್ಗೊಂಡಿದ್ದರು
ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಸಹ ಪಾಲ್ಗೊಂಡಿದ್ದರು. ಎರಡು ಸಮಾವೇಶದಲ್ಲಿ ಅಮಿತ್ ಶಾ, ಎರಡು ಕಡೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ರಾಜನಾಥ್ ಸಿಂಗ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್, ಛತ್ತೀಸ್ಗಢ ಸಿಎಂ ರಮಣ್ ಸಿಂಗ್ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರಿನಲ್ಲಿ ಮೋದಿ
ನವ ಕರ್ನಾಟಕ ಪರಿವರ್ತನಾ ಯಾತ್ರೆ ಸಮಾರೋಪ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.4ರ ಭಾನುವಾರ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಬಂದ್ ಬಿಸಿ
ಮಹದಾಯಿ ಹೋರಾಟಗಾರರು ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುವ ದಿನ ಬೆಂಗಳೂರು ಬಂದ್ ನಡೆಸಲಿದ್ದಾರೆ. ಮಹದಾಯಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ಬಂದ್ ಕರೆ ನೀಡಲಾಗಿದೆ. ಆದ್ದರಿಂದ, ಸಾರಿಗೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗು ಸಾಧ್ಯತೆ ಇದೆ. ಆದರೆ, ಸಮಾವೇಶ ಎಂದಿನಂತೆ ನಡೆಯಲಿದೆ ಎಂದು ಬಿಜೆಪಿ ಹೇಳಿದೆ.

200ಕ್ಕೂ ಅಧಿಕ ಬಿಎಂಟಿಸಿ ಬಸ್
ಬಿಜೆಪಿ 200ಕ್ಕೂ ಅಧಿಕ ಬಿಎಂಟಿಸಿ ಬಸ್ಸುಗಳನ್ನು ಬಾಡಿಗೆಗೆ ಪಡೆದಿದೆ. ಬೆಂಗಳೂರು ನಗರದ ವಿವಿಧ ಪ್ರದೇಶಗಳಿಂದ ಬಸ್ಸುಗಳಲ್ಲಿ ಜನರನ್ನು ಅರಮನೆ ಮೈದಾನಕ್ಕೆ ಕರೆತರಲಾಗುತ್ತದೆ.

ಸಂಚಾರಿ ಪೊಲೀಸರ ಸಿದ್ಧತೆ
ಸಮಾವೇಶದಲ್ಲಿ 4 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನೀರಿಕ್ಷೆ ಇದೆ. ಆದ್ದರಿಂದ, ಸಂಚಾರಿ ಪೊಲೀಸರು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ವಿಮಾನ ನಿಲ್ದಾಣಕ್ಕೆ ಸಾಗುವ ರಸ್ತೆಯಲ್ಲಿ ಭಾನುವಾರ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.












Click it and Unblock the Notifications