CM Siddaramaiah: ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ: ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್ 18: ದೇಶದಲ್ಲಿ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭವಿಷ್ಯ ನುಡಿದಿದ್ದಾರೆ.
ಬುಧವಾರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಸತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ ಬೆದರಿಕೆ ಹಾಕಿದೆ ಎಂದು ಹೇಳಿದರು.

ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ, ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ ಆಗ್ರಹಿಸಿದರು.
ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾನೆ
ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ. ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು. ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು. ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಎಂದು ಹೇಳಿದರು.
ಅಸಹ್ಯವಾಗಿ ನಾಲಗೆ ಗರಿಬಿಟ್ಟು ಮಹಿಳಾ ಸಮುದಾಯವನ್ನು, ದಲಿತ ಜನಾಂಗವನ್ನು, ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ BJP ಶಾಸಕ ಮುನಿರತ್ನಂ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಇದೆ . ಸದ್ಯ ಮುನಿರತ್ನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು. ಪೊಲೀಸರು ತನಿಖೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮುನಿರತ್ನಂ ಅವರನ್ನು ಜೈಲಿಗೆ ಒಪ್ಪಿಸಿದೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿಗೆ ಹಿನ್ನಡೆಯಾದ ನಂತರ ರಾಹುಲ್ ಗಾಂಧಿಯವರಿಗೆ ಕೊಲೆ ಬೆದರಿಕೆ ಹೆಚ್ಚಾಗಿದೆ. ದೇಶದಲ್ಲಿ ಸಂಸತ್ ನ ಒಳಗೆ ಮತ್ತು ಹೊರಗೆ ಮಾತ್ರವಲ್ಲ ವಿದೇಶಗಳಲ್ಲಿ ಕೂಡಾ ಅವರ ಮಾತುಗಳನ್ನು ಜಾಗತಿಕ ನಾಯಕರು ಗಂಭೀರವಾಗಿ ಸ್ವೀಕರಿಸುತ್ತಿರುವುದು ಬಿಜೆಪಿ ಮತ್ತು ನರೇಂದ್ರ ಮೋದಿ ಅವರನ್ನು ತಲ್ಲಣಕ್ಕೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಂದ ಕೊಲೆ ಬೆದರಿಕೆಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಬಿಜೆಪಿ ನಾಯಕ ತಾರ್ ವಿಂದರ್ ಸಿಂಗ್ ಮಾರ್ವಾ ಎಂಬಾತ ಈ ತಿಂಗಳ ಹನ್ನೊಂದರಂದು ನೇರವಾಗಿ ರಾಹುಲ್ ಗಾಂಧಿಯವರಿಗೆ ಕೊಲೆ ಬೆದರಿಕೆ ಒಡ್ಡಿದ್ದಾನೆ. ''ಸರಿಯಾಗಿ ನಡೆದುಕೊಳ್ಳದಿದ್ದಲ್ಲಿ ಇಂದಿರಾ ಗಾಂಧಿಯವರಿಗೆ ಆಗಿರುವ ಗತಿಯೇ ನಿನಗೆ ಆಗುತ್ತದೆ'' ಎಂದು ಆತ ಹೇಳಿರುವುದು ನೇರವಾಗಿ ಕೊಲೆ ಬೆದರಿಕೆಯಾಗಿದೆ.
ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ರವನೀತ್ ಬಿಟ್ಟು ಅವರು ರಾಹುಲ್ ಗಾಂಧಿಯವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಇದು ಸಾರ್ವಜನಿಕವಾಗಿ ರಾಹುಲ್ ಗಾಂಧಿಯವರ ವಿರುದ್ಧ ಜನರನ್ನು ಎತ್ತಿಕಟ್ಟಿ ಹತ್ಯೆ-ಹಲ್ಲೆಗೆ ಪ್ರಚೋದನೆ ನೀಡುವ ಪ್ರಯತ್ನ ಎನ್ನುವುದು ನಿಸ್ಸಂಶಯ.
ಈ ತಿಂಗಳ ಹದಿನಾರರಂದು ಮಹಾರಾಷ್ಟ್ರ ಬಿಜೆಪಿಯ ಮಿತ್ರಪಕ್ಷವಾದ ಶಿವಸೇನೆಯ ಶಾಸಕ ಸಂಜಯ್ ಗಾಯಕವಾಡ್ " ರಾಹುಲ್ ಗಾಂಧಿಯವರ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ರೂಪಾಯಿಗಳ ಬಹುಮಾನ ಕೊಡುತ್ತೇನೆ'' ಎಂದು ಘೋಷಿಸಿದ್ದಾನೆ. ಇದು ಕೂಡಾ ನೇರವಾದ ಕೊಲೆ ಬೆದರಿಕೆಯಾಗಿದೆ. ಈ ದುಷ್ಟನನ್ನು ಪೊಲೀಸರು ತಕ್ಷಣ ಕೊಲೆ ಆರೋಪದಡಿ ಬಂಧಿಸಿ ಜೈಲಿಗೆ ಹಾಕಬೇಕು ಎಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ.
ಉತ್ತರಪ್ರದೇಶ ಸರ್ಕಾರದ ಸಚಿವ ರಘುರಾಜ್ ಸಿಂಗ್ ಅವರು ಈ ತಿಂಗಳ ಹದಿನಾರರಂದು ''ರಾಹುಲ್ ಗಾಂಧಿಯವರು ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯವರ ವಿರುದ್ಧದ ಈ ಎಲ್ಲ ಹೇಳಿಕೆಗಳು ನೇರವಾದ ಕೊಲೆ ಬೆದರಿಕೆ ಎನ್ನುವುದು ಸ್ಪಷ್ಟವಾಗಿದ್ದರೂ ಇಲ್ಲಿಯವರೆಗೆ ಪೊಲೀಸರು ಇವರಲ್ಲಿ ಯಾರನ್ನೂ ಬಂಧಿಸಿಲ್ಲ. ಕೆಲವು ಪ್ರಕರಣಗಳಲ್ಲಿ ಪೊಲೀಸರು ಕಾಟಾಚಾರಕ್ಕೆ ಪ್ರಕರಣಗಳನ್ನು ದಾಖಲಿಸಿ ಸುಮ್ಮನಾಗಿದ್ದಾರೆ ಎಂದು ಹೇಳಿದರು.












Click it and Unblock the Notifications