Karnataka Election: ಏಪ್ರಿಲ್ 27ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ : ಶುಕ್ರವಾರವೇ ಅಮಿತ್ ಶಾ ಅಖಾಡಕ್ಕೆ
ಬಿಜೆಪಿ ಸ್ಟಾರ್ ಪ್ರಚಾರಕ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 27 ರಂದು ಕರ್ನಾಟಕಕ್ಕೆ ಬರಲಿದ್ದು ಪ್ರಚಾರ ಮಾಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದೇ ಶುಕ್ರವಾರದಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಚುನಾವಣಾ ತಯಾರಿ ಬಗ್ಗೆ ಮಹತ್ವದ ಚರ್ಚೆಗಳನ್ನು ಮಾಡಲಿದ್ದಾರೆ, ರಾಜ್ಯದಲ್ಲಿ ಚುನಾವಣೆ ಮುಗಿಯುವವರೆಗೂ ಮೋದಿ ಮತ್ತು ಅಮಿತ್ ಶಾ ರಾಜ್ಯಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಲಿರುತ್ತಾರೆ.
ರಾಜ್ಯದಲ್ಲಿ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಬಹುಮತ ಗಳಿಸಲು ಪಣ ತೊಟ್ಟಿದ್ದು, ರಾಜಕೀಯ ಲೆಕ್ಕಾಚಾರದಲ್ಲಿ ಮುಳುಗಿವೆ. ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿದ್ದು, ಗೆಲುವಿಗಾಗಿ ತನ್ನ ಬತ್ತಳಿಕೆಯಲ್ಲಿರುವ ಎಲ್ಲಾ ಅಸ್ತ್ರಗಳನ್ನು ಬಳಸಲು ಮುಂದಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಈಗಾಗಲೇ ರಾಜ್ಯದಲ್ಲಿ ಠಿಕಾಣಿ ಹೂಡಿದ್ದಾರೆ. ಬುಧವಾರ ಹುಬ್ಬಳ್ಳಿಯಲ್ಲಿ ಪಕ್ಷದ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಸಿದ್ದು, ಪಕ್ಷವನ್ನು ತೊರೆದು ಕಾಂಗ್ರೆಸ್ನಿಂದ ಹುಬ್ಬಳ್ಳಿ ಸೆಂಟ್ರಲ್ ಮತ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಲೇಬೇಕು ಎಂದು ವರಿಷ್ಠರಿಗೆ ಸೂಚನೆ ನೀಡಿದ್ದಾರೆ. ಹುಬ್ಬಳ್ಳಿಯಿಂದ ಶಿಗ್ಗಾಂವಿಗೆ ತೆರಳಿದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಮಪತ್ರ ಸಲ್ಲಿಸಲು ಸಾಥ್ ನೀಡಿದರು. ಇವರಿಬ್ಬರಿಗೂ ಚಿತ್ರ ನಟ ಸುದೀಪ್ ಕೂಡ ಜೊತೆಯಾದರು.
ಐದು ಸಾವಿರ ಕಡೆಗಳಲ್ಲಿ ಮೋದಿ ಭಾಷಣ ಪ್ರಸಾರ
ಏಪ್ರಿಲ್ 27 ರಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಸ್ಥಳವನ್ನು ಇನ್ನೂ ಅಂತಿಮಗೊಳಿಸದೇ ಇದ್ದರೂ, ಮೋದಿ ಭಾಷಣವನ್ನು ರಾಜ್ಯದಾದ್ಯಂತ ಐದು ಸಾವಿರ ಕಡೆಗಳಲ್ಲಿ ಪ್ರಸಾರ ಮಾಡಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಹೆಚ್ಚಾಗಿ ಭೇಟಿ ನೀಡುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವರು ರಾಜ್ಯಕ್ಕೆ ಭೇಟಿ ನೀಡಿದರೂ, ಅಲ್ಲಿ ಚುನಾವಣಾ ಲೆಕ್ಕಾಚಾರವೂ ಇತ್ತು ಎನ್ನುವುದ ಗುಟ್ಟೇನು ಅಲ್ಲ. ಬಿಜೆಪಿ ಮೂಲಗಳ ಪ್ರಕಾರ ಮೋದಿ ಚುನಾವಣೆಯವರೆಗೂ ಇನ್ನೂ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಶುಕ್ರವಾರ ಅಖಾಡಕ್ಕಿಳಿಯಲಿರುವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 21ರಂದು ಶುಕ್ರವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ದೇವನಹಳ್ಳಿಯ ವಿಜಯಪುರದಲ್ಲಿ ರೋಡ್ಶೋ ನಡೆಸಲಿದ್ದು, ಅಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಪ್ರಮುಖ ನಾಯಕರ ಜೊತೆ ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ. ಚುನಾವಣೆಗೆ ಮುನ್ನ ಅವರು ನಾಲ್ಕೈದು ಬಾರಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಬಿಜೆಪಿ ಈಗಾಗಲೇ ಪಕ್ಷದ 40 ಸ್ಟಾರ್ ಪ್ರಚಾರಕರ ಹೆಸರನ್ನು ಬಿಡುಗಡೆ ಮಾಡಿದೆ. ಜೆಪಿ ನಡ್ಡಾ, ಯೋಗಿ ಆದಿತ್ಯನಾಥ್, ಸ್ಮೃತಿ ಇರಾನಿ ಸೇರಿದಂತೆ ಕೇಂದ್ರದ ಹಲವು ನಾಯಕರು ಬರಲಿದ್ದಾರೆ, ಇನ್ನೂ ಇವರು ರಾಜ್ಯದಲ್ಲಿ ಪ್ರಚಾರ ಮಾಡುವ ವೇಳಾಪಟ್ಟಿಯನ್ನು ನಿರ್ಧಾರ ಮಾಡಿಲ್ಲ. ಬಿಎಸ್ ಯಡಿಯೂರಪ್ಪ, ಆರ್ ಅಶೋಕ ಸೇರಿದಂತೆ ರಾಜ್ಯದ ಹಲವು ನಾಯಕರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಟ ಸುದೀಪ್ ಕೂಡ ಬೊಮ್ಮಾಯಿ ಸೂಚಿಸಿದ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ.












Click it and Unblock the Notifications