ಇಸ್ರೋ ಬಗ್ಗೆ ಪಠ್ಯಕ್ರಮ ಅಳವಡಿಕೆಗೆ ಸಮಿತಿ ರಚನೆಗೆ ಡಾ.ಕೆ. ಶಿವನ್ ಸಮ್ಮತಿ
ಬೆಂಗಳೂರು, ಸೆ. 29: ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಅಡಿ ರಚನೆಯಾಗುವ ನೂತನ ಪಠ್ಯಕ್ರಮದಲ್ಲಿ ಭಾರತೀಯ ಬಹ್ಯಾಕಾಶ ಸಂಶೋಧನಾ ಸಂಸ್ಥೆ ಸಾಧನೆ, ಯೋಜನೆ ಮತ್ತಿತರ ವೈಜ್ಞಾನಿಕ ಕೌಶಲ್ಯ ಬೆಳೆಯುವ ವಿಚಾರ ಸೇರಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಈ ಸಂಬಂಧ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬುಧವಾರ ಇಸ್ರೋ ಅಧ್ಯಕ್ಷ ಡಾ. ಕೆ. ಶಿವನ್ ಹಾಗೂ ಹಿರಿಯ ವಿಜ್ಞಾನಿಗಳನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು.
ಪ್ರಾಥಮಿಕ ಹಂತದಿಂದಲೇ ವಿಜ್ಞಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸಲು ಅಳವಡಿಸಬಹುದಾದ ಪಠ್ಯಕ್ರಮ ಕುರಿತು ಮಾತುಕತೆ ನಡೆಸಿದರು. ರಾಷ್ಟ್ರೀಯ ಶಿಕ್ಷಣ ನೀತಿ ಅನುಸಾರ ರಚನೆಯಾಗುವ ಪಠ್ಯಕ್ರಮದಲ್ಲಿ ಬಾಹ್ಯಾಕಾಶ ಸಂಸ್ಥೆಯ ಸಾಧನೆ, ಯಶಸ್ವಿ ಯೋಜನೆ ಕುರಿತು ಸೇರಿಸಲು ಇಸ್ರೋ ಒಪ್ಪಿಗೆ ನೀಡಿದೆ ಎನ್ನಲಾಗಿದೆ.

ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, 'ರಾಷ್ಟ್ರೀಯ ಶಿಕ್ಷಣ ನೀತಿ-2020' ಅನುಸಾರ ರಚನೆಯಾಗುವ ನೂತನ ಪಠ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಸಾಧನೆಗಳು, ಯೋಜನೆಗಳ ವಿಚಾರಗಳನ್ನು ಸೇರ್ಪಡೆಗೊಳಿಸಲು ಇಸ್ರೋದಿಂದ ಸಲಹೆ ಪಡೆಯಲಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಇಸ್ರೋ ಅಂತರಿಕ್ಷ ಭವನದಲ್ಲಿ ಬುಧವಾರ ಇಸ್ರೋ ಅಧ್ಯಕ್ಷ ಡಾ. ಕೆ. ಶಿವನ್ ಹಾಗೂ ಹಿರಿಯ ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿದ್ದನ್ನು ಸ್ಪಷ್ಟಪಡಿಸಿದರು.
'ವಿಜ್ಞಾನ-ತಂತ್ರಜ್ಞಾನ, ಕೌಶಲ್ಯಾಧಾರಿತ ಶಿಕ್ಷಣ, ಸಂಶೋಧನೆ ಮತ್ತು ಅಭಿವೃದ್ಧಿ, ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಮನೋಭಾವ ಮೂಡಿಸುವುದರ ಮೇಲೆ ಭಾರತದ ಭವಿಷ್ಯ ಅಡಗಿದೆ. ಶಾಲಾ ಶಿಕ್ಷಣದಲ್ಲಿ ಸರಳವಾಗಿ ಅರ್ಥವಾಗುವಂತೆ ವಿಜ್ಞಾನ, ಗಣಿತವನ್ನು ಪಾಠ ಮಾಡಬೇಕು. ಮಕ್ಕಳಲ್ಲಿ ವಿಜ್ಞಾನದ ಕುರಿತು ಆಸಕ್ತಿ ಮತ್ತು ಕುತೂಹಲ ಮೂಡಿಸುವ ಶಿಕ್ಷಣಕ್ಕೆ ಒತ್ತು ನೀಡಬೇಕಿದೆ ಎಂದು ಡಾ. ಕೆ. ಶಿವನ್ ಅವರು ಹಲವು ಕಾರ್ಯಕ್ರಮಗಳಲ್ಲಿ ಹೇಳಿದ್ದಾರೆ. ಹೀಗಾಗಿ, ಡಾ.ಕೆ ಶಿವನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.

ರಾಜ್ಯದಲ್ಲಿ ಎನ್ಇಪಿ ಜಾರಿಗೆ ಅಗತ್ಯವಾದ ಎಲ್ಲ ರೀತಿಯ ಸಲಹೆ, ಸೂಚನೆ, ಮಾರ್ಗದರ್ಶನವನ್ನು ನೀಡಿ ಸಹಕಾರ ನೀಡುವ ಭರವಸೆಯನ್ನು ಕೆ. ಶಿವನ್ ನೀಡಿದ್ದಾರೆ. ಅದಕ್ಕಾಗಿ ಇಸ್ರೋದಿಂದ ಸಮಿತಿಯೊಂದನ್ನು ರಚಿಸುವುದಾಗಿ ತಿಳಿಸಿದ್ದಾರೆ' ಎಂದು ಸಚಿವ ನಾಗೇಶ್ ತಿಳಿಸಿದರು.
'ಗ್ರಾಮಾಂತರ ಪ್ರದೇಶಗಳು, ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಅಪಾರ ಪ್ರತಿಭೆ ಇದೆ. ಉತ್ತಮ ವೇದಿಕೆ, ಅವಕಾಶಗಳು, ಜ್ಞಾನಾರ್ಜನೆಗೆ ಬೇಕಾದ ಸೌಕರ್ಯಗಳನ್ನು ಒದಗಿಸಬೇಕು. ವಿಷಯಗಳನ್ನು ಸರಳವಾಗಿ ಅರ್ಥೈಸಬೇಕು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಸರಳವಾಗಿ ಅರ್ಥವಾಗುವಂತೆ ಪಾಠ ಮಾಡಬೇಕು. ಅದಕ್ಕೆ ತಕ್ಕಂತೆ ಪಠ್ಯಗಳನ್ನು ಸಿದ್ದಪಡಿಸಲು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಟಾಸ್ಕ್ಫೋರ್ಸ್ ಕಾರ್ಯ ನಿರ್ವಹಿಸುತ್ತಿದೆ' ಎಂದು ಸಚಿವರು ಇದೇ ವೇಳೆ ತಿಳಿಸಿದರು.
'ಕೌಶಲ್ಯದ ಶಿಕ್ಷಣ ಇಂದಿನ ಅಗತ್ಯವಾಗಿದೆ. ವಿಜ್ಞಾನ, ಬಾಹ್ಯಾಕಾಶದ ಕುರಿತು ಮಕ್ಕಳಲ್ಲಿ ಆಸಕ್ತಿ ಮೂಡಿಸಬೇಕು. ಎನ್ಇಪಿ ಜಾರಿ ಕುರಿತು ರಾಜ್ಯ ಸರಕಾರಕ್ಕೆ ಅಗತ್ಯವಿರುವ ಎಲ್ಲ ರೀತಿಯ ನೆರವು, ಸಲಹೆಗಳನ್ನು ನೀಡುತ್ತೇವೆ' ಎಂದು ಸಚಿವರೊಂದಿಗೆ ಮಾತುಕತೆ ವೇಳೆ ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದರು.

Space on Wheels ರಾಜ್ಯದ ಇತರ ಭಾಗಗಳಿಗೆ: ಇಸ್ರೋದ ಸಾಧನೆಗಳು, ಭವಿಷ್ಯದ ಯೋಜನೆಗಳು, ಸೌರಮಂಡಲ, ಬಾಹ್ಯಾಕಾಶದ ಕುರಿತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿ, ಆಸಕ್ತಿ ಮೂಡಿಸಲು ಇಸ್ರೋ ಆರಂಭಿಸಿರುವ Space on Wheels ವಾಹನವು ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮಾಂತರ ಭಾಗಗಳ ಶಾಲೆಗಳಿಗೂ ತೆರಳಲಿದೆ. ಈವರೆಗೆ Space on Wheels ವಾಹನವು ಬೆಂಗಳೂರು ನಗರ ಮತ್ತು ಸುತ್ತ ಮುತ್ತಲಿನ ಭಾಗಗಳಲ್ಲಿ ಮಾತ್ರ ಸಂಚರಿಸುತ್ತಿತ್ತು.












Click it and Unblock the Notifications