ಪ್ರಕೃತಿ ವಿಕೋಪ: ಮೃತರ ಕುಟುಂಬಕ್ಕೆ ತಕ್ಷಣ 4 ಲಕ್ಷ ಪರಿಹಾರ
ಬೆಂಗಳೂರು, ಜೂನ್ 11: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಅನಾಹುತ ಸಂಭವಿಸುತ್ತಿದ್ದು, ಪ್ರಾಣ ಕಳೆದುಕೊಂಡ ಕುಟುಂಬದವರಿಗೆ 48 ಗಂಟೆಗಳಲ್ಲಿ ತಲಾ 4 ಲಕ್ಷ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾಗುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿದೆ. ಇದನ್ನು ಎದುರಿಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅತಿವೃಷ್ಟಿ ಹಾಗೂ ಸಿಡಿಲು ಬಡಿದು ಮೃತಪಟ್ಟವರ ಕುಟುಂಬಕ್ಕೆ ಮೃತಪಟ್ಟ 48 ಗಂಟೆಗಳಲ್ಲಿ ಪರಿಹಾರ ವಿತರಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಪರಿಹಾರ ನೀಡಿಕೆಯಲ್ಲಿ ದೋಷ ಕಂಡುಬಂದರೆ ಆಯಾ ಜಿಲ್ಲಾಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಈ ವರ್ಷ 5.65 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆ ಮಾಡುವ ಗುರಿ ಇತ್ತು ಆದರೆ 5.84 ಲಕ್ಷ ಹೆಕ್ಟೇರ್ ಜಾಗದಲ್ಲಿ ಬಿತ್ತನೆ ಮಾಡಲಾಗಿದೆ.

ಏಪ್ರಿಲ್ನಿಂದ ಜೂನ್ 10ರವರೆಗೆ ಮಳೆಯಿಂದ 104 ಜೀವಹಾನಿಗಳಾಗಿದೆ. 2289 ಮನೆಗೆ ಹಾನಿ ಉಂಟಾಗಿದೆ. ಇದಕ್ಕೆ ಪರಿಹಾರಕ್ಕಾಗಿ ಪ್ರತಿ ಡಿಸಿ ಬಳಿ 5 ಕೋಟಿ ರೂ. ಹಣ ಮೀಸಲಿರಿಸಲಾಗಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ವಿಪತ್ತು ಸ್ಪಂದನ ಪಡೆ, ರಾಜ್ಯ ವಿಪತ್ತು ಸ್ಪಂದನ ಪಡೆ, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳು, ಗೃಹರಕ್ಷಕದಳ ಪಡೆಗಳನ್ನು ಸದಾ ಸಿದ್ಧತೆಯಲ್ಲಿಟ್ಟು ಸಕಾಲದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಕ್ರಮ ಕೈಗೊಳ್ಳಲಾಗಿದೆ. ಎಂದು ತಿಳಿಸಿದರು.












Click it and Unblock the Notifications