Karnataka Elections: 40 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾದ ಎನ್ಸಿಪಿ
ನವದೆಹಲಿ, ಏಪ್ರಿಲ್ 14: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ತ್ರಿಕೋನ ಸ್ಪರ್ಧೆಯನ್ನು ಎದುರಿಸುತ್ತಿದೆ. ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ) 40-45 ಸ್ಥಾನಗಳಲ್ಲಿ ಸ್ಪರ್ಧಿಸಲು ಯೋಜಿಸುತ್ತಿದೆ.
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ತನ್ನ ಯೋಜನೆಗಳನ್ನು ಅಂತಿಮಗೊಳಿಸಲು ಶರದ್ ಪವಾರ್ ಅವರು ಶನಿವಾರ ಮುಂಬೈನಲ್ಲಿ ಪಕ್ಷದ ನಾಯಕರ ಸಭೆಯನ್ನು ಕರೆದಿದ್ದಾರೆ.

ಕರ್ನಾಟಕ ಚುನಾವಣೆಗೆ ನಮ್ಮ ಯೋಜನೆಗಳನ್ನು ಅಂತಿಮಗೊಳಿಸಲು ನಾವು ನಾಳೆ ಮುಂಬೈನಲ್ಲಿ ಸಭೆ ನಡೆಸುತ್ತಿದ್ದೇವೆ ಎಂದು ಪವಾರ್ ಹೇಳಿದ್ದಾರೆ.
ಈ ಕ್ರಮವು ಗೋವಾ, ಮೇಘಾಲಯ ಮತ್ತು ಮಣಿಪುರದಂತಹ ರಾಜ್ಯಗಳಲ್ಲಿ ಕ್ಷೀಣಿಸಿದ ರಾಜಕೀಯ ಅದೃಷ್ಟದಿಂದಾಗಿ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಮರಳಿ ಪಡೆಯಲು ಎನ್ಸಿಪಿಯ ಪ್ರಯತ್ನವಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ 'ಗಡಿಯಾರ' ಚಿಹ್ನೆಯನ್ನು ನೀಡುವಂತೆ ಎನ್ಸಿಪಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಚುನಾವಣಾ ಪ್ರಾಧಿಕಾರವು ಮನವಿಗೆ ಸಮ್ಮತಿಸಿದೆ.
ರಾಜ್ಯಾದ್ಯಂತ ಒಟ್ಟು 224 ಸ್ಥಾನಗಳಲ್ಲಿ ಕನಿಷ್ಠ 40ರಿಂದ 45 ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎನ್ಸಿಪಿ ಚಿಂತನೆ ನಡೆಸಿದೆ. ಮಹಾರಾಷ್ಟ್ರ- ಕರ್ನಾಟಕ ಗಡಿ ಪ್ರದೇಶದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬೆಂಬಲ ನೀಡಲು ಪಕ್ಷವು ಯೋಜಿಸುತ್ತಿದೆ ಎಂದು ಎನ್ಸಿಪಿ ನಾಯಕರು ಹೇಳಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಪ್ರತಿಪಕ್ಷಗಳ ಒಗ್ಗಟ್ಟಿನ ಅಗತ್ಯತೆ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಪವಾರ್ ಭೇಟಿ ಮಾಡಿದ್ದಾರೆ. ಇದಾದ ಒಂದು ದಿನದ ನಂತರ ಪವಾರ್ ಅವರು ಕರ್ನಾಟಕದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಲು ಚಿಂತನೆ ನಡೆಸಿದ್ದಾರೆ.
ರಾಜ್ಯದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
212 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ ನಂತರ ಆಡಳಿತಾರೂಢ ಬಿಜೆಪಿ ಕೆಲವು ಕ್ಷೇತ್ರಗಳಲ್ಲಿ ಬಂಡಾಯವನ್ನು ಎದುರಿಸುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಕಾಂಗ್ರೆಸ್ ಸೇರಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗಿನ ಸಭೆಯ ನಂತರ ಲಕ್ಷ್ಮಣ್ ಜಾರಕಿಹೊಳಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
'ಸವದಿ ಅವರೊಂದಿಗಿನ ನಮ್ಮ ಭೇಟಿ ಸೌಹಾರ್ದಯುತವಾಗಿ ನಡೆಯಿತು. ಅವರ ಘನತೆ ಮತ್ತು ಸ್ಥಾನದ ಬಗ್ಗೆ ನಮಗೆ ತಿಳಿದಿದೆ. ಅವರು ನಮ್ಮ (ಕಾಂಗ್ರೆಸ್) ಕುಟುಂಬದ ಸದಸ್ಯರಾಗಲು ತಮ್ಮ ಸ್ವಂತ ಇಚ್ಛೆಯಿಂದ ಒಪ್ಪಿಕೊಂಡಿದ್ದಾರೆ. ಅವರು ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡ ನಂತರ ನಮ್ಮೊಂದಿಗೆ ಬರುತ್ತಿದ್ದಾರೆ' ಎಂದು ಶಿವಕುಮಾರ್ ತಿಳಿಸಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸವದಿ ಅವರ ನಿರ್ಧಾರದಿಂದ ಬೇಸರವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
'ನನಗೆ ತುಂಬಾ ದುಃಖವಾಗುತ್ತಿದೆ. ನಾವು ನಿಕಟ ಬಾಂಧವ್ಯವನ್ನು ಹಂಚಿಕೊಂಡಿದ್ದೇವೆ. ಕೆಲವೊಮ್ಮೆ ಅಂತಹ ರಾಜಕೀಯ ಸನ್ನಿವೇಶಗಳು ಉದ್ಭವಿಸುತ್ತವೆ' ಎಂದು ಬೊಮ್ಮಾಯಿ ತಿಳಿಸಿದ್ದಾರೆ.












Click it and Unblock the Notifications