Breaking: ಮುರುಘಾ ಶ್ರೀ ವಿರುದ್ಧ NCPCR ಸ್ವಯಂಪ್ರೇರಿತ ದೂರು
ಬೆಂಗಳೂರು ಸೆ,01: ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದೀಗ ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
ಅದಲ್ಲದೇ ಒಂದು ವಾರದಲ್ಲಿ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂಪೂರ್ಣ ವರದಿ ನೀಡುವಂತೆ ಕೋರಿದೆ. ಪ್ರಕರಣದಲ್ಲಿ ಬಲಿಪಶು ಆಗಿರುವ ಬಾಲಕಿ ಭವಿಷ್ಯದ ದೃಷ್ಟಿಯಿಂದ ಆಕೆಯ ಗುರುತನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸಬಾರದು. ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸುವಂತೆ ಎಂದು ಆಯೋಗ ಮನವಿ ಮಾಡಿದೆ.
ಸುಮೋಟೋ ಕೇಸ್ ದಾಖಲಿಸಿರುವ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಅವರಿಗೆ ನೋಟಿಸ್ ನೀಡಿದೆ. ಪ್ರಕರಣದ ಬಗ್ಗೆ ಏಳು ದಿನಗಳಲ್ಲಿ ವರದಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅದಲ್ಲದೇ ಪ್ರಕರಣ ಸಂಬಂಧ ಪೋಲೀಸರು ಕೈಗೊಂಡ ಕ್ರಮದ ಬಗ್ಗೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾಹಿತಿ ಕೇಳಿದೆ. ಇದು ಮುರುಘಾಮಠದ ಶ್ರೀಗಳನ್ನು ಮತ್ತೊಂದು ಸಂಕಷ್ಟಕ್ಕೆ ದೂಡಿದೆ.

ಅಟ್ರಾಸಿಟಿ ಕೇಸ್ ಸಹ ದಾಖಲು
ಶುಕ್ರವಾರವಷ್ಟೇ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು. ಮಠದ ವಸತಿ ನಿಲಯದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಇದರಲ್ಲಿ ದಲಿತ ಸಮುದಾಯಕ್ಕೆ ಸೇರಿದ ಹೆಣ್ಣು ಮಕ್ಕಳು ಇದ್ದಾರೆ. ಈ ಕಾರಣದಿಂದ ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ ಮುರುಘಾ ಶರಣರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಯಡಿ ದೂರು ದಾಖಲಿಸಲಾಗಿದೆ.

ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಮೇಲಿನ ಈ ಆರೋಪಗಳು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ. ತನಿಖೆ, ಸತ್ಯಾಸತ್ಯತೆ ಬಗ್ಗೆ ಮುಂದೆನಾಗುವುದು ಎಂದು ರಾಜ್ಯದ ಜನರು ಕೂತುಹಲದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ಕೆಲವು ಭಕ್ತರು ಶ್ರೀಗಳಿಗೆ ಕಷ್ಟಗಳ ಮೇಲೆ ಸಂಕಷ್ಟಗಳು ಎದುರಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇಂದು ಅರ್ಜಿ ವಿಚಾರಣೆ:
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ಸೆಪ್ಟೆಂಬರ್ 1ರಂದು ನಡೆಯಲಿದೆ. ನಿರೀಕ್ಷಣಾ ಜಾಮೀನು ಕೋರಿ ಮುರುಘಾಶ್ರೀಗಳ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಎರಡನೇ ಸೆಷನ್ಸ್ ಕೋರ್ಟ್ ನ್ಯಾಯಾಧೀಶರು ಶರಣರ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿದ್ದಾರೆ. ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದುಡಿ ಆದೇಶಿಸಿದ್ದಾರೆ.












Click it and Unblock the Notifications