ಎನ್ ಡಿಎ 400 ಸೀಟು ಗೆಲ್ಲುತ್ತದೆ, ಅನುಮಾನವಿಲ್ಲ; ಆ 400 ಸಂಸದರಲ್ಲಿ ನಾನು ಇರುತ್ತೇನೆ : ಭವಿಷ್ಯ ನುಡಿದ ಡಾ. ಮಂಜುನಾಥ್
ಬೆಂಗಳೂರು, ಏಪ್ರಿಲ್ 03: ಎನ್ ಡಿ ಎ ಮೈತ್ರಿಕೂಟ ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದರಲ್ಲಿ ಅನುಮಾನ ಇಲ್ಲ. ಆ 400 ಸಂಸದರಲ್ಲಿ ನಾನು ಇರುತ್ತೇನೆ, ಪಿಸಿ ಮೋಹನ್ ಅವರೂ ಇರುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್ ಮಂಜುನಾಥ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ಸೆಂಟ್ರಲ್ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪಿ.ಸಿ.ಮೋಹನ್ ಅವರೊಂದಿಗೆ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಡಾ ಸಿ ಎನ್ ಮಂಜುನಾಥ್ ಅವರು ಮಾತನಾಡಿ, ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಜೋಡಿ ರಾಜ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಲಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಹಾಲು ಜೇನಿನಂತೆ ಸಮ್ಮಿಳಿತವಾಗಿ ಕೆಲಸ ಮಾಡುತ್ತಿವೆ ಎಂದು ಮೈತ್ರಿಕೂಟದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಹೇಳಿದರು.

ಮಹಿಳಾ ಮೀಸಲು ಮಸೂದೆಯನ್ನು ಅಂದು ಪ್ರಧಾನಿ ಆಗಿದ್ದ ದೇವೇಗೌಡರು ಸಂಸತ್ತಿನಲ್ಲಿ ಮಂಡಿಸಿದರು. ಇಂದಿನ ಪ್ರಧಾನಿಗಳಾದ ಮೋದಿ ಅವರು ಅದೇ ಸಂಸತ್ತಿನಲ್ಲಿ ಮಸೂದೆಗೆ ಅಂಗೀಕಾರ ಪಡೆದು ಜಾರಿಗೂ ತಂದರು. ಇಂಥ ಜೋಡಿ ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದು. ಇವರಿಬ್ಬರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.
ಮೋದಿ ಪ್ರಭಾವಶಾಲಿ ನಾಯಕರು. ಅವರ ನಾಯಕತ್ವದಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಭಾವಶಾಲಿ ದೇಶವಾಗಿ ಹೊರಹೊಮ್ಮಿದೆ. ಇಡೀ ಜಗತ್ತಿನಲ್ಲಿ ಭಾರತಕ್ಕೆ ಬಹು ಮಹತ್ವದ ಸ್ಥಾನ ಲಭಿಸಿದೆ ಎಂದು ಅವರು ಹೇಳಿದರು.
ಇನ್ನೂ ಈ ವೇಳೆ ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಅವರು ಮಾತನಾಡಿ, ಕರ್ನಾಟಕದ ಆಮೂಲಾಗ್ರ ಅಭಿವೃದ್ಧಿಗೆ ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಗೆ ನಾವೆಲ್ಲರೂ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ ಇಬ್ಬರೂ ಅಭ್ಯರ್ಥಿಗಳನ್ನು ಬರಮಾಡಿಕೊಂಡು ಗೌರವಿಸಿದರು. ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಅವರು ಈ ಸಂದರ್ಭದಲ್ಲಿ ಮಾತನಾಡಿದರು. ಹಿರಿಯ ನಾಯಕರಾದ ಆರ್.ಪ್ರಕಾಶ್, ರಾಜಣ್ಣ ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications