ಕರ್ನಾಟಕದಲ್ಲಿ 2 ಕೋಟಿ ಜನರಿಗೆ ಕೊರೊನಾ ಸೋಂಕು ತಗುಲಿದೆ
ಬೆಂಗಳೂರು,ನವೆಂಬರ್ 04: ಕರ್ನಾಟಕದಲ್ಲಿ ಈಗಾಗಲೇ 2 ಕೋಟಿ ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಸರ್ಕಾರ ನಡೆಸಿರುವ ಸಮೀಕ್ಷೆಯಲ್ಲಿ ತಿಳಿದುಬಂದಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಸಮೀಕ್ಷೆಯ ವಿವರ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು, ಈ ಸರ್ವೆ 2020ರ ಸೆಪ್ಟೆಂಬರ್ 3 ರಿಂದ 16 ರವರೆಗೆ ನಡೆದಿದೆ. ಕೋವಿಡ್ ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ. ರಾಜ್ಯದಲ್ಲಿ ಮರಣ ಪ್ರಮಾಣ 0.05% ಇದೆ. ಮುಂಬೈಯಲ್ಲಿ 0.05-0.10%, ಪುಣೆಯಲ್ಲಿ 0.08%, ದೆಹಲಿಯಲ್ಲಿ 0.09%, ಚೆನ್ನೈನಲ್ಲಿ 0.13% ಮರಣ ಪ್ರಮಾಣವಿದೆ ಎಂದು ವಿವರಿಸಿದರು.
ಕರ್ನಾಟಕದಲ್ಲಿ ಸೆಪ್ಟೆಂಬರ್ 16 ರ ವೇಳೆ ಕನಿಷ್ಠ 1.93 ಕೋಟಿ ಅಥವಾ ಶೇಕಡಾ 27.3 ರಷ್ಟು ಜನರು ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ ಅಥವಾ ಈಗಾಗಲೇ ಬಂದು ಹೋಗಿದೆ ಎಂಬುದು ರಾಜ್ಯದಲ್ಲಿ ಕೊವಿಡ್-19 ಹರಡುವಿಕೆಯನ್ನು ಅಂದಾಜು ಮಾಡಲು ಸರ್ಕಾರ ನಡೆಸಿದ ಸಮೀಕ್ಷೆ ಬಹಿರಂಗಪಡಿಸಿದೆ.

ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ಜಿಲ್ಲೆಗಳಲ್ಲಿ ಸಮುದಾಯದಲ್ಲಿ ಕೊರೋನಾ ಹೇಗೆ ಹರಡುತ್ತಿದೆ, ಅದರ ಹರಡುವಿಕೆಯನ್ನು ಹೇಗೆ ತಡೆಯುವುದು ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರವು ಸ್ಪಷ್ಟವಾದ ಮಾಹಿತಿಯನ್ನು ಪಡೆಯಲು ಈ ಸಮೀಕ್ಷೆ ನಡೆಸಲಾಗಿದೆ ಎಂದರು.












Click it and Unblock the Notifications