Neha Hiremath murder case: ನೇಹಾ ಕೊಲೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ
ಬೆಂಗಳೂರು, ಏಪ್ರಿಲ್. 22: ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ನಾಯಕರು ಹತ್ಯೆಗೆ ರಾಜಕೀಯ ಬಣ್ಣ ತುಂಬುತ್ತಿದ್ದು, ಸೋಮವಾರ ಕರ್ನಾಟಕ ಬಿಜೆಪಿ ಘಟಕವು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.
ನೇಹಾ ಹತ್ಯೆ ಪ್ರಕರಣದಲ್ಲಿ 'ಲವ್ ಜಿಹಾದ್' ಇದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಬಿಜೆಪಿ ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ಎಲ್ಲಾ ನಾಯಕರು ಇದು ಲವ್ ಜಿಹಾದ್ ಪ್ರಕರಣ ಎಂದೂ, ಇದನ್ನು ಅದೇ ದೃಷ್ಟಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಈಗ ಏಪ್ರಿಲ್ 22 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯನ್ನು ನೆರೆಯ ಪಾಕಿಸ್ತಾನದ ಸ್ಥಿತಿಯೊಂದಿಗೆ ಹೋಲಿಸಿದ್ದು, ರಾಜ್ಯದಲ್ಲಿ ಹಿಂಸೆ ತಾಂಡವವಾಡುತ್ತಿದೆ ಎಂದಿದ್ದಾರೆ. ಜೊತೆಗೆ ಕಾಂಗ್ರೆಸ್ನ ಕೈಯಲ್ಲಿ ರಕ್ತ ಅಮಟಿಕೊಂಡಿದೆ ಎಂದು ಆಡಳಿತರೂಢ ಪಕ್ಷದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
"ಹಿಂಸೆ..ಅಪರಾಧಗಳು..ಕೊಲೆಗಳು! ರಾಜ್ಯದ ಶಾಂತಿಪ್ರಿಯ ನಾಗರಿಕರಿಗೆ ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ. ಮಹಿಳೆಯರು ಇನ್ನು ಸುರಕ್ಷಿತವಾಗಿಲ್ಲ!, ಹಿಂದೂಗಳು "ಜೈ ಶ್ರೀ ರಾಮ್" ಘೋಷಣೆ ಮಾಡುವಂತಿಲ್ಲ!, ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಕ್ಕೆ ಯುವಕರನ್ನು ಅಮಾನುಷವಾಗಿ ಥಳಿಸಿದ್ದಾರೆ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ!, ಕನ್ನಡದಲ್ಲಿ ಮಾತನಾಡಿದ ಕನ್ನಡತಿಗೆ ನಿಂದನೆ!, ಪ್ರತಿ ದಿನವೂ ಪ್ರತಿ ಸಣ್ಣ ಪಟ್ಟಣದಿಂದ ಚೈನ್ ಸ್ನ್ಯಾಚಿಂಗ್ ವರದಿ!, ಕೆಫೆಯಲ್ಲಿ ಬಾಂಬ್ ಸ್ಫೋಟ!,ವಿಧಾನಸೌಧದಲ್ಲಿ ಮೊಳಗಿದ "ಪಾಕಿಸ್ತಾನ್ ಜಿಂದಾಬಾದ್" ಘೋಷಣೆ!" ಎಂದು ಸರಣಿ ಘಟನೆಗಳನ್ನು ನೆನಪಿಸಿ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
"ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹೀನಾಯವಾಗಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ, ಇದು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ದುರಂತ ಸ್ಥಿತಿಯನ್ನು ನೆನಪಿಸುತ್ತದೆ! ಜನರ ಜೀವನದಲ್ಲಿ ಅರಾಜಕತೆ, ಅವ್ಯವಸ್ಥೆಗೆ ಸಂಪೂರ್ಣವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ಗೆ ಕಾರಣ. ಬಿಜೆಪಿ ಸಿದ್ದರಾಮಯ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರಬಲ ಪ್ರತಿಭಟನೆಗಳನ್ನು ನಡೆಸುತ್ತಿದೆ. ಈ ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೆ, ವಿಶೇಷವಾಗಿ ಮಹಿಳೆಯರು, ನಮ್ಮ ನಾರಿ ಶಕ್ತಿಯು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಲು ಮತ್ತು ರಾಜ್ಯದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ವಿರುದ್ಧ ಒಂದಾಗಲು ನಾನು ಮನವಿ ಮಾಡುತ್ತೇನೆ" ಎಂದು ಜನರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಹೇಳಿದ್ದಾರೆ.

"ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆ. ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ, ಆದರೆ ಮುಖ್ಯಮಂತ್ರಿಗಳು,ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ" ಎಂದಿದ್ದಾರೆ.
"ಭಾರತೀಯ ಜನತಾ ಪಾರ್ಟಿ ಸಿದ್ದಾಂತಕ್ಕಾಗಿ ಜನ್ಮ ತಾಳಿದ ಪಕ್ಷ , ನಮ್ಮ ಆದ್ಯತೆ ಏನಿದ್ದರೂ 'ಧ್ಯೇಯ'ಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ" ಎಂದು ಪೋಸ್ಟರ್ ಹಂಚಿಕೊಂಡಿದ್ದಾರೆ.
ಏನಿದು ನೇಹಾ ಹಿರೇಮಠ್ ಕೊಲೆ ಪ್ರಕರಣ?
ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಆರೋಪಿ ಫಯಾಜ್ ಖೋಂಡುನಾಯ್ಕ್ ಕ್ಯಾಂಪಸ್ನಲ್ಲಿಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ. ಇಬ್ಬರು ಪ್ರೀತಿಸುತ್ತಿದ್ದು, ಆಕೆ ಆತನನ್ನು ಅವಾಯ್ಡ್ ಮಾಡಲು ಶುರು ಮಾಡಿದ್ದಳು ಅದಕ್ಕೆ ಆಕೆಯನ್ನು ಕೊಲೆ ಮಾಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಆದರೆ, ಸಂತ್ರಸ್ತೆಯ ಕುಟುಂಬದವರು, ಆಕೆ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದರಿಂದ ಆರೋಪಿ ನೇಹಾಳನ್ನು ಕೊಂದಿದ್ದಾನೆ ಎಂದು ಆರೋಪಿಸಿದೆ.












Click it and Unblock the Notifications