ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಕಲಿಕೆ ಕುರಿತು ಹೈಕೋರ್ಟ್ ಮಧ್ಯಂತರ ಆದೇಶ
ಬೆಂಗಳೂರು, ಡಿ. 16: ಪದವಿ ಹಂತದಲ್ಲಿ ಕನ್ನಡ ಭಾಷೆ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ದೇಶಕ್ಕೆ ಮಾದರಿ ಎಂಬಂತೆ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪದವಿ ಹಂತದಲ್ಲಿ ಜಾರಿಗೆ ತರಲಾಗುತ್ತಿದೆ. ಆದರೆ, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಾದೇಶಿಕ ಭಾಷೆಗಳ ಕಡ್ಡಾಯ ಕಲಿಕೆಗೆ ಅವಕಾಶ ನೀಡಿಲ್ಲ. ಎನ್ಇಪಿ ಜಾರಿ ವೇಳೆ ಪದವಿ ಹಂತದಲ್ಲಿ ಕಡ್ಡಾಯ ಕನ್ನಡ ಕಲಿಕೆಗೆ ಅವಕಾಶ ಕೊಡಬೇಕು ಎಂದು ಕನ್ನಡ ಪ್ರಾಧ್ಯಾಪಕ ವರ್ಗ ಸರ್ಕಾರವನ್ನು ಆಗ್ರಹಿಸಿತ್ತು. ಕನ್ನಡ ಪ್ರಾಧ್ಯಾಪಕರ ಹೋರಾಟಕ್ಕೆ ಮಣಿದಿದ್ದ ರಾಜ್ಯ ಸರ್ಕಾರ ಪದವಿ ಹಂತದಲ್ಲಿ ಕಡ್ಡಾಯ ಕನ್ನಡ ಭಾಷೆಯನ್ನು ಕಲಿಯಬೇಕು ಎಂದು ಆದೇಶ ಹೊರಡಿಸಿತ್ತು.
ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ ( ಕರ್ನಾಟಕ) ಟ್ರಸ್ಟ್, ಸಂಸ್ಕೃತ ಪ್ರಾಧ್ಯಾಪಕರ ಸಂಘ, ಶ್ರೀ ಹಯಗ್ರೀವಾ ಟ್ರಸ್ಟ್ ಮತ್ತಿತರ ಸಂಸ್ಥೆಗಳು ಪದವಿ ಹಂತದಲ್ಲಿ ಕನ್ನಡ ಭಾಷೆ ಕಡ್ಡಾಯ ಕಲಿಕೆ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದವು. ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ರಿತು ರಾಜ್ ಅವಸ್ಥಿ ಮತ್ತು ನ್ಯಾ. ಸಚಿನ್ ಶಂಕರ್ ಮಗದಮ್, ನೇತೃತ್ವದ ಪೀಠ ಮಧ್ಯಂತರ ಆದೇಶ ನೀಡಿದೆ. ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ಹೈಕೋರ್ಟ್ ನಿರ್ದೇಶಿಸಿದೆ.
ಅರ್ಜಿದಾರರ ಪರ ವಕೀಲರ ವಾದ ನಾವು ಪರಿಗಣಿಸಿದ್ದೇವೆ. ರಾಷ್ಟ್ರೀಯ ಶಿಕ್ಷಣ ನೀತಿ ಆಧರಿಸಿ ಪದವಿ ಶಿಕ್ಷಣ ನೀಡುವ ಸಂದರ್ಭದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿರುವುದಕ್ಕೆ ಸಂಬಂಧಿಸಿದ ಪ್ರಶ್ನೆಯನ್ನೂ ಪರಿಗಣಿಸಬೇಕು ಎಂಬ ನಿಲುವು ಹೊಂದಿದ್ದೇವೆ. ಈ ಹಂತದಲ್ಲಿ ರಾಜ್ಯ ಸರ್ಕಾರ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬಾರದು. ತಮ್ಮ ಇಚ್ಛೆಯ ಅನುಸಾರ ಕನ್ನಡವನ್ನು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಅಧ್ಯಯನ ಮುಂದುವರೆಸಬಹುದು. ಕನ್ನಡವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಅಧ್ಯಯನ ಮಾಡುವಂತೆ ಮುಂದಿನ ಆದೇಶದವರೆಗೆ ಒತ್ತಾಯ ಮಾಡಬಾರದು ಎಂದು ಪೀಠ ಹೇಳಿದೆ.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ಕಲಿಕೆ ಮಾಡಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿರುವ ಮನವಿಗೆ ಸಂಬಂಧಸಿದಂತೆ ನಿಲುವು ತಿಳಿಸುವಂತೆ ನ್ಯಾಯಪೀಠ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಇದಕ್ಕೆ ಕೇಂದ್ರ ಸರ್ಕಾರದ ಪರ ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ್, ಎನ್ಇಪಿ ಜಾರಿ ಇಟ್ಟುಕೊಂಡು ಯಾವುದೇ ರಾಜ್ಯದಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವುದು ಸಂಕೀರ್ಣ ಸಮಸ್ಯೆಗಳಿಗೆ ನಾಂದ ಹಾಡಲಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರಗಳ ಜತೆ ಕೇಂದ್ರ ಸರ್ಕಾರ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ. ಈ ವಿಚಾರವಾಗಿ ಇನ್ನೂ ಯಾವುದೇ ಸಭೆ ನಡೆಸದ ಕಾರಣ ಕೇಂದ್ರದ ನಿಲುವು ಈ ಸಂದರ್ಭದಲ್ಲಿ ತಿಳಿಸುವುದು ಕಷ್ಟ. ಈ ಕುರಿತ ವಿಸ್ತೃತ ಪ್ರಮಾಣ ಪತ್ರ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕಳೆದ ವಿಚಾರಣೆ ವೇಳೆ ಮನವಿ ಮಾಡಿದ್ದರು. ಇದೀಗ ಅರ್ಜಿ ವಿಚಾರಣೆಗೆ ಬಂದಿದ್ದು, ಕನ್ನಡೇತರ ಕಲಿಕೆಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
Recommended Video