ಮುಂದಿನ ಸಚಿವ ಸಂಪುಟದಲ್ಲಿ ಎನ್ಇಪಿ ಜಾರಿಗೆ ಅನುಮೋದನೆ
ಬೆಂಗಳೂರು, ನ. 30: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನೂತನ ಶಿಕ್ಷಣ ನೀತಿಯನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಕ್ಕೆ ಸಂಬಂಧಿಸಿದಂತೆ ನೂತನ ಶಿಕ್ಷಣ ನೀತಿ ರೂಪಿಸಲು ರಚಿಸಿದ್ದ ಕಾರ್ಯಪಡೆ ಸಲ್ಲಿಸಿದ ಪೂರ್ಣ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾರ್ಯಪಡೆ ಸದಸ್ಯರು ಮತ್ತು ರಾಜ್ಯದ ಉನ್ನತ ಶಿಕ್ಷಣ, ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವರು ಸೇರಿದಂತೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಕಾರ್ಯಪಡೆ ವರದಿ ಮುಖ್ಯಾಂಶಗಳನ್ನು ಆಲಿಸಿ ನೂತನ ಶಿಕ್ಷಣ ನೀತಿ ಜಾರಿಯ ರೂಪುರೇಷೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನೀತಿ ಜಾರಿಗೆ ಅನುವಾಗುವಂತೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು ಎಂದರು.

ಕೇಂದ್ರ ಸರ್ಕಾರದ ಮೇಲುಸ್ತುವಾರಿ
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ, ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಸಮಿತಿ ರಚಿಸಿದ ನೂತನ ಶಿಕ್ಷಣ ನೀತಿಯಲ್ಲಿ ಕರ್ನಾಟಕ ಛಾಪು ವಿಶಾಲವಾಗಿ ಪ್ರತಿಬಿಂಬಿತವಾಗಿದೆ. ಕೇಂದ್ರ ಸರ್ಕಾರ ಈ ನೀತಿ ಕುರಿತಂತೆ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದು, ಜಾರಿ ಕುರಿತಂತೆ ಮೇಲುಸ್ತುವಾರಿ ನಡೆಸುತ್ತಿದೆ ಎಂದರು.

ಶಿಕ್ಷಣ ನೀತಿಗೆ ಹೊಸ ರೂಪ
ಈ ನೀತಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಒಂದು ಹೊಸ ರೂಪ ಪಡೆದುಕೊಳ್ಳಲಿದ್ದು, ನಾಡಿನ ಎಲ್ಲ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನೂತನ ಶಿಕ್ಷಣ ನೀತಿ ಕುರಿತಂತೆ ಚರ್ಚಿಸಿ ಅನುಮೋದನೆ ಪಡೆಯಲಾಗುವುದು. ಹಾಗೆಯೇ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಹೊಸ ಶಿಕ್ಷಣ ನೀತಿಯ ರೂಪುರೇಷೆಗಳ ಕುರಿತು ಚರ್ಚಿಸಿ ಇದರ ಜಾರಿಗೆ ಶಾಸನಾತ್ಮಕ ಕ್ರಮಗಳು ಮತ್ತು ಅನುಷ್ಠಾನಕ್ಕೆ ಅಗತ್ಯವಾದ ಆಯೋಗ ಸೇರಿದಂತೆ ಇನ್ನಿತರೆ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

ಉಳಿದ ರಾಜ್ಯಗಳಿಗೆ ಮಾದರಿ
ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕವು ನೂತನ ಶಿಕ್ಷಣ ನೀತಿ ಅನುಷ್ಠಾನದ ಮೂಲಕ ಬೇರೆ ರಾಜ್ಯಗಳಿಗೆ ಮಾದರಿಯಾಗಲಿದೆ. ಸುದೀರ್ಘ 34 ವರ್ಷಗಳ ನಂತರದ ಮತ್ತು ಈ ಶತಮಾನದ ಮೊದಲ ಶಿಕ್ಷಣ ನೀತಿಯಾಗಿ ರೂಪಿತವಾಗಿರುವ ನೂತನ ಶಿಕ್ಷಣ ನೀತಿಯನ್ನು ಒಂದು ಆಂದೋಲನದ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ ಎಂದರು.
ಸರ್ಕಾರವು ನೀತಿ ಅನುಷ್ಠಾನಕ್ಕೆ ಅವಶ್ಯವಿರುವ ಆರ್ಥಿಕ ಸಂಪನ್ಮೂಲವನ್ನು ಒದಗಿಸಬೇಕೆಂದು ಅವರು ಮುಖ್ಯಮಂತ್ರಿಯವರಲ್ಲಿ ನಿವೇದಿಸಿಕೊಂಡರು.

ಕಾರ್ಯಪಡೆ ಪ್ರಾತ್ಯಕ್ಷತೆ
ಕಾರ್ಯಪಡೆ ಸದಸ್ಯ ತಿಮ್ಮೇಗೌಡ ಶಿಕ್ಷಣ ನೀತಿ ರೂಪುರೇಷೆಗಳನ್ನು ಪ್ರಾತ್ಯಕ್ಷಿತೆ ಮೂಲಕ ಸಾದರ ಪಡಿಸಿದರು. ಕಾರ್ಯಪಡೆ ಅಧ್ಯಕ್ಷ ಹಾಗೂ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್, ಸದಸ್ಯರಾದ ಶಿಕ್ಷಣ ತಜ್ಞ ಡಾ. ಎಂ.ಕೆ. ಶ್ರೀಧರ್, ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ, ಡಾ. ಅನುರಾಗ್ ಬೆಹರ್ ಸೇರಿದಂತೆ ಇತರೆ ಸದಸ್ಯರು ಮತ್ತು ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಜರಿದ್ದರು












Click it and Unblock the Notifications