'ಅರ್ಹ'ರಾಗಿ ಬದಲಾದ ನೂತನ ಶಾಸಕರ ಪ್ರಮಾಣ ವಚನ ಭಾನುವಾರ
ಬೆಂಗಳೂರು, ಡಿಸೆಂಬರ್ 21: ಉಪಚುನಾವಣೆಯಲ್ಲಿ ಗೆದ್ದು ಅನರ್ಹ ಹಣೆಪಟ್ಟಿ ಕಳಚಿಕೊಂಡ ನೂತನ ಬಿಜೆಪಿ ಶಾಸಕರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಉಪ ಚುನಾವಣೆಯಲ್ಲಿ ಗೆದ್ದ 15 ಶಾಸಕರಲ್ಲಿ 13 ಶಾಸಕರು ಮಾತ್ರ ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. 12 ಬಿಜೆಪಿ ಹಾಗೂ ಓರ್ವ ಪಕ್ಷೇತರ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಉಪಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಶಾಸಕರು ಪ್ರಮಾಣ ವಚನವನ್ನು ಮತ್ತೊಂದು ದಿನ ಪಡೆಯುವುದಾಗಿ ಸ್ಪೀಕರ್ ಕಾಗೇರಿಗೆ ತಿಳಿಸಿರುವ ಕಾರಣ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು ಮತ್ತೊಂದು ದಿನ ಇಟ್ಟುಕೊಳ್ಳಲು ನಿರ್ಣಯಿಸಲಾಗಿದೆ.
ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಾಳೆ ಬೆಳಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಬಿಜೆಪಿ ಸರ್ಕಾರ ರಚನೆಗೆ ಕಾರಣಕರ್ತರಾದ ಶಾಸಕರನ್ನು ತುಸು ಅದ್ಧೂರಿಯಾಗಿಯೇ ವಿಧಾನಸೌಧಕ್ಕೆ ಬರಮಾಡಿಕೊಳ್ಳಲಾಗುತ್ತಿದೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಸೇರಿದಂತೆ ಸರ್ಕಾರದ ಪ್ರಮುಖ ಸಚಿವರುಗಳು ಭಾಗಿಯಾಗಲಿದ್ದಾರೆ.
ಬಿಜೆಪಿ ಶಾಸಕರಾದ ರಮೇಶ್ ಜಾರಕಿಹೊಳಿ, ಶ್ರೀಮಂತ ಪಾಟೀಲ್, ಮಹೇಶ್ ಕುಮಟಳ್ಳಿ, ಬಿ.ಸಿ.ಪಾಟೀಲ್, ನಾರಾಯಣಗೌಡ, ಶಿವರಾಂ ಹೆಬ್ಬಾರ್, ಆನಂದ್ ಸಿಂಗ್, ಸುಧಾಕರ್, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಕೆ.ಗೋಪಾಲಯ್ಯ, ರಾಣೆಬೆನ್ನೂರು ಶಾಸಕ ಅರುಣ್ ಕುಮಾರ್ ಮತ್ತು ಹೊಸಕೋಟೆಯ ಬಿಜೆಪಿ ಬಂಡಾಯ ಅಭ್ಯರ್ಥಿ ಆಗಿ ಗೆಲುವು ಕಂಡ ಶರತ್ ಬಚ್ಚೇಗೌಡ ನಾಳೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.