Breaking; ಶುಕ್ರವಾರ ದೆಹಲಿಗೆ ಹೊರಟಿರುವ ಸಿಎಂ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್ 28; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿಗಳ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ರಾತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಈ ಕುರಿತು ಅವರು ಮಾತನಾಡಿದರು. "ಏಪ್ರಿಲ್ 30ಕ್ಕೆ ಮುಖ್ಯಮಂತ್ರಿಗಳು ಹಾಗೂ ಸಿಜೆ ಕಾನ್ಫರೆನ್ಸ್ ಇದೆ. ಇದರಲ್ಲಿ ಭಾಗಿಯಾಗುತ್ತೇನೆ" ಎಂದರು.
ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ವಿಚಾರದ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, "ಸದ್ಯಕ್ಕೆ ಯಾರನ್ನೂ ಭೇಟಿ ಮಾಡಲು ಸಮಯ ಕೇಳಿಲ್ಲ. ಆಲೋಚನೆ ಮಾಡಿಲ್ಲ" ಎಂದು ಸ್ಪಷ್ಟಪಡಿಸಿದರು.

ಅಮೃತ್ ಪಾಲ್ ವರ್ಗಾವಣೆಯಿಂದ ಸರ್ಕಾರ ಅಕ್ರಮ ಮಾಡಿರುವುದನ್ನು ಒಪ್ಪಿಕೊಂಡಂತಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿ, "ಕಾಂಗ್ರೆಸ್ ನವರು ಏನೂ ಮಾಡಿದರೂ ಹೇಳುತ್ತಾರೆ" ಎಂದರು.
"ಬಿಟ್ಟರೆ ಯಾಕೆ ಬಿಟ್ಟಿರಿ ಅಂತಾರೆ, ತೆಗೆದರೆ ಯಾಕೆ ತಗೆದ್ರಿ ಅಂತಾರೆ. ಅದಕ್ಕೆಲ್ಲಾ ಉತ್ತರ ಕೊಡುವುದಕ್ಕೆ ಆಗುತ್ತದೆಯೇ?" ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ಸಂಪುಟ ವಿಸ್ತರಣೆ ಆಗುತ್ತದೆಯೇ?; ಕರ್ನಾಟಕದಲ್ಲಿ 2023ರ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು ಸಂಪುಟ ವಿಸ್ತರಣೆ ಆಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 5 ಸಚಿವ ಸ್ಥಾನಗಳು ಖಾಲಿ ಇವೆ. ಕೆಲವು ದಿನಗಳ ಹಿಂದೆ ಸಚಿವ ಈಶ್ವರಪ್ಪ ಸಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆಯೇ? ಎಂಬ ಪ್ರಶ್ನೆ ಎದ್ದಿದೆ.












Click it and Unblock the Notifications