ಕೆಪಿಸಿಸಿ ಅಧ್ಯಕ್ಷರ ಹೆಸರು ಘೋಷಣೆಗೆ ಮುಹೂರ್ತ ನಿಗದಿ!
ಬೆಂಗಳೂರು, ಫೆಬ್ರವರಿ 09 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಹೆಸರು ಘೋಷಣೆ ಕಗ್ಗಂಟಾಗಿತ್ತು. ಈಗ ಪಕ್ಷದ ಹೈಕಮಾಂಡ್ ಅಧ್ಯಕ್ಷರ ಘೋಷಣೆಗೆ ಒಪ್ಪಿಗೆ ನೀಡಿದೆ. ಫೆಬ್ರವರಿ 15ರೊಳಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.
ಎರಡು ಬಾರಿ ಪಕ್ಷದ ಹಿರಿಯ ನಾಯಕರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿರುವ ಹೈಕಮಾಂಡ್ ನಾಯಕರು ಕೆಪಿಸಿಸಿ ಅಧ್ಯಕ್ಷರ ಹೆಸರು ಘೋಷಣೆ ಮಾಡಲು ಹಸಿರು ನಿಶಾನೆ ತೋರಿಸಿದ್ದಾರೆ. ಇಬ್ಬರು ಕಾರ್ಯಾಧ್ಯಕ್ಷರ ನೇಮಕ ಸಹ ಆಗಲಿದೆ.
ಫೆಬ್ರವರಿ 10 ಅಥವ 13ರಂದು ಕರ್ನಾಟಕ ಕಾಂಗ್ರೆಸ್ನ ನೂತನ ಸಾರಥಿ ಯಾರು? ಎಂಬುದು ತಿಳಿಯಲಿದೆ. ಮಾಜಿ ಸಚಿವ, ಕನಕಪುರ ಶಾಸಕ ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಮೊದಲು ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲು ತೀರ್ಮಾನಿಸಲಾಗಿತ್ತು. ಆದರೆ, ರಾಜ್ಯ ನಾಯಕರಲ್ಲಿ ಈ ವಿಚಾರದಲ್ಲಿ ಒಮ್ಮತ ಮೂಡದ ಕಾರಣ ಇಬ್ಬರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ.

ಹಲವು ನಾಯಕರ ಹೆಸರು
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ. ಕೆ. ಶಿವಕುಮಾರ್, ಎಂ. ಬಿ. ಪಾಟೀಲ್, ಕೆ. ಎಚ್. ಮುನಿಯಪ್ಪ ಸೇರಿದಂತೆ ವಿವಿಧ ನಾಯಕರ ಹೆಸರುಳು ಕೇಳಿ ಬರುತ್ತಿವೆ. ಕೆಪಿಸಿಸಿಯ ನೂತನ ಸಾರಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಫೆಬ್ರವರಿ 15ರೊಳಗೆ ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ.

ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹ
ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಿರಿಯ ನಾಯಕರಿಂದ ಎರಡು ಬಾರಿ ಹೈಕಮಾಂಡ್ ನಾಯಕರು ಅಭಿಪ್ರಾಯವನ್ನು ಸಂಗ್ರಹಣೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಹೆಸರು ಘೋಷಣೆ ಮಾಡಲು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಈಗಾಗಲೇ ಒಪ್ಪಿಗೆ ಕೊಟ್ಟಿದ್ದಾರೆ. ಫೆಬ್ರವರಿ 10ರಂದು ಹೊಸ ಅಧ್ಯಕ್ಷರ ಘೋಷಣೆ ಬಹುತೇಕ ಖಚಿತವಾಗಿದೆ.

ಇಬ್ಬರು ಕಾರ್ಯಾಧ್ಯಕ್ಷರು
ಕೆಪಿಸಿಸಿ ಅಧ್ಯಕ್ಷರ ಜೊತೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದರು. ಹೈಕಮಾಂಡ್ ಇದಕ್ಕೆ ಒಪ್ಪಿಗೆ ಕೊಟ್ಟಿದೆ. ಆದರೆ, ನಾಲ್ವರ ಬದಲು ಇಬ್ಬರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ.

ಪ್ರತಿಪಕ್ಷ ನಾಯಕನ ಬದಲು ಇಲ್ಲ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಪ್ರತಿಪಕ್ಷ ನಾಯಕನ ಆಯ್ಕೆಯೂ ನಡೆಯಬೇಕಿತ್ತು. ಆದರೆ, ಸಿದ್ದರಾಮಯ್ಯ ಕೊಟ್ಟ ರಾಜೀನಾಮೆಯನ್ನು ಹೈಕಮಾಂಡ್ ಒಪ್ಪಿಕೊಂಡಿಲ್ಲ. ಆದ್ದರಿಂದ, ಸಿದ್ದರಾಮಯ್ಯ ಅವರು ವಿಧಾನ ಸಭೆಯ ಪ್ರತಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ.












Click it and Unblock the Notifications