ಯಾರಿಗೆಲ್ಲಾ ನಿಗಮ ಮಂಡಳಿಯಲ್ಲಿ ಸ್ಥಾನ ಎಂಬ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು, ನವೆಂಬರ್ 29: ನಿಗಮ ಮಂಡಳಿ ಮೊದಲ ಪಟ್ಟಿಯಲ್ಲಿ ನೂತನ ಶಾಸಕರಿಗೆ ಅವಕಾಶವಿಲ್ಲ, ಮುಂದಿನ ಪಟ್ಟಿಯಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲು ತೀರ್ಮಾನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕಾತಿ, ಕಾರ್ಯಕರ್ತರಿಗೂ ಅವಕಾಶ ಸಂಬಂಧ ನಾನು ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರು ಮಾತನಾಡಿದ್ದೇವೆ. ನಾವು ಪಟ್ಟಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನೀಡಿದ್ದು ಅವರು ಅದನ್ನು ದೆಹಲಿಗೆ ತೆಗದುಕೊಂಡು ಹೋಗಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರೆ ನಂತರ ಹೈಕಮಾಂಡ್ ನಾಯಕರು ನಮ್ಮ ಪಟ್ಟಿಯನ್ನು ಪರಿಶೀಲಿಸಿ ಎರಡು- ಮೂರು ದಿನಗಳಲ್ಲಿ ಅಂತಿಮ ಪಟ್ಟಿಯನ್ನು ರವಾನಿಸುತ್ತಾರೆ. ನಾವು ನೀಡಿದ ಪಟ್ಟಿಯನ್ನು ಪಕ್ಷದ ಹೈಕಮಾಂಡ್ ಪರಿಶೀಲಿಸಬೇಕು. ಏಕೆಂದರೆ ಚುನಾವಣೆ ಹೊತ್ತಿನಲ್ಲಿ ಒಂದಷ್ಟು ಮಾತುಗಳನ್ನು ಕೊಟ್ಟಿರುತ್ತಾರೆ. ಹೈಕಮಾಂಡ್ ಯಾರಿಗೆ ಏನು ಸೂಚನೆ ನೀಡಿತ್ತೊ ಅದರ ಪ್ರಕಾರ ಅಂತಿಮ ಪಟ್ಟಿ ಸಿದ್ಧವಾಗಲಿದೆ ಎಂದು ಹೇಳಿದರು.
ಬಿ.ಆರ್. ಪಾಟೀಲ್ ಅವರ ಅಸಮಾಧಾನದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಪತ್ರ ಬರೆದಿರುವ ವಿಚಾರ ತಿಳಿದಿಲ್ಲ. ಅದರ ಬಗ್ಗೆ ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಮಾಹಿತಿ ಗೊತ್ತಿಲ್ಲದೇ ಮಾತನಾಡಲು ನನಗೆ ಇಷ್ಟವಿಲ್ಲ. ಯಾವುದೇ ಶಾಸಕರಾಗಲಿ ಮಾತನಾಡಲು, ದನಿ ಎತ್ತಲು ಅವಕಾಶವಿದೆ. ಸದನದಲ್ಲಿ ಮಾತನಾಡುವಾಗ ತನಿಖೆಯಾಗಲಿ ಎಂದು ಹೇಳಿರಬಹುದು. ಕಂದಾಯ ಸಚಿವ ಕೃಷ್ಣಬೈರೇಗೌಡರು ಈಗಾಗಲೇ ತನಿಖೆ ಮಾಡಲು ಸೂಕ್ತ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ, ತನಿಖೆಗಳು ನಡೆಯುತ್ತಿರುವ ವಿಚಾರ ನನಗೂ ಗೊತ್ತಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡು ಮಾತನಾಡುತ್ತೇನೆ. ಬಿ.ಆರ್.ಪಾಟೀಲ್ ಅವರನ್ನು ಕರೆದು ಖಂಡಿತಾ ಮಾತನಾಡಬೇಕು. ವಿಚಾರ ತಿಳಿದುಕೊಂಡು, ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.
ಟೆಕ್ ಸಮ್ಮೇಳನದಲ್ಲಿ ಭಾಗವಹಿಸಿರುವ ಕಾರಣ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬಗ್ಗೆ ನನಗೆ ಮಾಹಿತಿ ಇಲ್ಲ. ನ್ಯಾಯಾಲಯದ ವಿಚಾರದಲ್ಲಿ ವಕೀಲರಿಂದ ಸರಿಯಾದ ಮಾಹಿತಿ ಇಲ್ಲದೆ ಈ ವಿಚಾರವಾಗಿ ಮಾತನಾಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ನಿಮ್ಮ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್ ರಿಲೀಫ್ ನೀಡುವ ಆದೇಶ ನೀಡಿದೆ ಎಂಬ ಬಗ್ಗೆ ಮಾತನಾಡಿ, ಈ ವಿಚಾರವಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಟೆಕ್ ಸಮಿಟ್ ನಲ್ಲಿ ಭಾಗವಹಿಸಲು ಬಂದಿದ್ದೇನೆ. ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಎಂ.ಬಿ ಪಾಟೀಲ್ ಅವರು ರಾಜ್ಯದಲ್ಲಿ ಬಂಡವಾಳ ಆಕರ್ಷಿಸಿ ರಾಜ್ಯದ ಯುವಕರಿಗೆ ಉದ್ಯೋಗ ಸೃಷ್ಟಿಸಲು, ರಾಜ್ಯವನ್ನು ಸಮೃದ್ಧಿಗೊಳಿಸಲು ಈ ಪ್ರಯತ್ನಕ್ಕೆ ಮುಂದಾಗಿದ್ದು, ಅವರಿಗೆ ಬೆಂಬಲವಾಗಿ ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ.
ನಮ್ಮ ಸರ್ಕಾರ ನೂತನ ಬಿಟಿ ನೀತಿ ಹಾಗೂ ಅನ್ವೇಷಣಾ ನೀತಿಗಳನ್ನು ಇಂದು ಪರಿಚಯಿಸಿದೆ. ಇಂದು ಸಾವಿರಾರು ಮಂದಿ ವಿದೇಶಿ ಬಂಡವಾಳ ಹೂಡಿಕೆದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನ್ಯಾಯಾಲಯದಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ತಿಳಿಯದೆ ಮಾತನಾಡುವುದು ಸರಿಯಲ್ಲ. ವಕೀಲರು ನಮಗೆ ಮಾಹಿತಿ ನೀಡದ ಹೊರತಾಗಿ ನಾನು ಮಾತನಾಡುವುದಿಲ್ಲ.
ನಾನೇನು ತಪ್ಪು ಮಾಡಿಲ್ಲ. ಎಲ್ಲಾ ಬೆಳವಣಿಗೆಗಳನ್ನು ನೀವು (ಮಾಧ್ಯಮದವರು) ಜನರು ನೋಡಿದ್ದಾರೆ. ನಾನು ಕೇವಲ ಪಕ್ಷದ ಕೆಲಸ ಮಾತ್ರ ಮಾಡಿದ್ದೇನೆ. ಪಕ್ಷದ ಕೆಲಸ ಮಾಡಿದ ಕಾರಣ ಸಾಕಷ್ಟು ತೊಂದರೆ ಅನುಭವಿಸಿದ್ದೇನೆ. ಮುಂದಕ್ಕೂ ತೊಂದರೆ ಕೊಟ್ಟರೆ ಕಾಪಾಡಲು ಆ ಭಗವಂತನಿದ್ದಾನೆ, ಈ ನಾಡಿನ ಜನರಿದ್ದಾರೆ. ನನಗೆ ತೊಂದರೆ ಕೊಟ್ಟ ಕಾರಣಕ್ಕೆ ಈ ರಾಜ್ಯದಲ್ಲಿ ಏನಾಯಿತು ಎಂದು ತಿಳಿದಿದೆ. ನನ್ನ ಪರವಾಗಿ ನಿಂತವರು ಹಾಗೂ ಪ್ರಾರ್ಥನೆ ಮಾಡಿದ ಜನರಿಗೆ ಕೋಟಿ ನಮಸ್ಕಾರ ಎಂದು ಹೇಳಿದರು.












Click it and Unblock the Notifications