ನಿಮ್ಮ ಮಕ್ಕಳು ಶಾಲೆಗೆ ಹೋಗುತ್ತಿಲ್ಲವಾ? ಆತಂಕ ಬೇಡ!
ಬೆಂಗಳೂರು, ಜ. 09: ಆಕಾಶವಾಣಿ ಸಹಯೋಗದಲ್ಲಿ ರಾಜ್ಯ ಶಿಕ್ಷಣ ಇಲಾಖೆ ಮೂಲಕ ಜನವರಿ 11 ರಿಂದ ಕಲಿಯುತ್ತಾ ನಲಿಯೋಣ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ. ಒಂದನೇ ತರಗತಿಯಿಂದ ನಾಲ್ಕನೇ ತರಗತಿಯ (ಆದರೆ ಶಾಲೆಗೆ ಹೋಗಲಾರದ) ಮಕ್ಕಳಿಗಾಗಿ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ನಾಳೆಯಿಂದ ಅಂದರೆ ಜನವರಿ 11 ರಿಂದ ಏಪ್ರಿಲ್ 5ರ ವರೆಗೆ ಆಕಾಶವಾಣಿ ಪ್ರಸಾರ ಮಾಡಲಿದೆ.
ಪ್ರತಿನಿತ್ಯ ಬೆಳಿಗ್ಗೆ (ಪ್ರತಿ ವಾರ ಸೋಮವಾರದಿಂದ ಶುಕ್ರವಾರದವರೆಗೂ) 10 ಗಂಟೆಯಿಂದ 10.15 ರ ವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15 ರಿಂದ 10.30 ಗಂಟೆಯವರೆಗೂ 3 ಮತ್ತು 4ನೇ ತರಗತಿ ಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ ಇಲಾಖೆ ಈ ಹೊಸ ಕಾರ್ಯಕ್ರಮ ಹಮ್ಮಿಕೊಂಡಿದೆ.
ಶಿಕ್ಷಕರ ನೇಮಕಾತಿ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ!
ಸಂತಸದಾಯಕ ಕಲಿಕೆ
ಈ ಕಾರ್ಯಕ್ರಮಗಳ ಮೂಲಕ ನಲಿ-ಕಲಿಯ ಆಶಯಗಳಾದ ಆಲಿಸುವಿಕೆ, ವಸ್ತು ಗುರುತಿಸುವಿಕೆ, ಸ್ವ ಕಲಿಕೆ, ಸಂತಸದಾಯಕ ಕಲಿಕೆ, ಶಬ್ದ ಪರಿಚಯ, ಹೀಗೆ ಶಬ್ದಗಳ ಏರಿಳಿತದ ಮೂಲಕ ವಿಷಯಗಳನ್ನು ವಿನೂತನ ಮಾದರಿಯಲ್ಲಿ ತಿಳಿಸಲಾಗುತ್ತದೆ. ಒಂದರಿಂದ ನಾಲ್ಕನೇ ತರಗತಿಯವರೆಗೆ ಓದುತ್ತಿರುವ ಮಕ್ಕಳ ಎಲ್ಲಾ ಪೋಷಕರಿಗೆ ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.
ಆಕಾಶವಾಣಿ ನಲಿ-ಕಲಿ
ಅಲ್ಲಿ ಪ್ರಸಾರಗೊಳ್ಳುವ ಹಾಡು, ಕಥೆ ಇತ್ಯಾದಿಗಳನ್ನು ನಿಮ್ಮ ಮಕ್ಕಳಿಗೆ ಮತ್ತೊಮ್ಮೆ ಹೇಳುವುದರ ಮೂಲಕ ಹೇಳಿಸುವ ಮೂಲಕ ಮಕ್ಕಳಿಗೆ ನಲಿಯುವುದರ ಜೊತೆಗೆ ಕಲಿಯುವುದನ್ನು ಅಭ್ಯಾಸ ಮಾಡಿಸಿ ಎಂದು ಶಿಕ್ಷಣ ಇಲಾಖೆ ಮನವಿ ಮಾಡಿದೆ. ಈಗಾಗಲೇ ಸರ್ಕಾರಿ ಶಾಲೆಗಳಲ್ಲಿಯೂ ನಲಿ-ಕಲಿ ಪರಿಕಲ್ಪನೆಯಲ್ಲಿಯೇ ಕಲಿಕೆ ನಡೆಯುತ್ತಿದೆ. ಮಕ್ಕಳಿಗೆ ಒತ್ತಡವಾಗದಂತೆ ಕಲಿಸುವುದು ಇಲಾಖೆಯ ಗುರಿ. ಖಾಸಗಿ ಶಾಲೆಗಳಲ್ಲಿನ ಒತ್ತಡ ಸರ್ಕಾರಿ ಶಾಲಾ ಮಕ್ಕಳಿಗೆ ಇರುವುದಿಲ್ಲ. ಹೀಗಾಗಿ ಇದೀಗ ಆಕಾಶವಾಣಿ ಸಹಯೋಗದಲ್ಲಿ ವಿದ್ಯಾಗಮ ಕಾರ್ಯಕ್ರಮದೊಂದಿಗೆ ಆಕಾಶವಾಣಿ ನಲಿ-ಕಲಿ ಬರಲಿದೆ.
ಮಕ್ಕಳು ಹೇಳಿದ ಕತೆಗಳೂ ಪ್ರಸಾರ
ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಬಹುದಾದರೆ ವಾಟ್ಸ್ಆ್ಯಪ್ ನಂಬರ್ 9449417612 ಗೆ ಕಳುಹಿಸಿದರೆ ಅದನ್ನು ಪ್ರಸಾರ ಮಾಡಲಾಗುವುದು. ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗುತ್ತದೆ. ಮತ್ತು ನಂತರ ಈ ಕಾರ್ಯಕ್ರಮಗಳು ಯೂಟ್ಯೂಬ್ನಲ್ಲಿ ಸಹ ಲಭ್ಯವಿರುತ್ತವೆ. ಈ ಎಳೆ ಕಂದಗಳ ಮನಸ್ಸುಗಳನ್ನು ವಿಕಸನಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗುತ್ತಿರುವ ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪೋಷಕರಲ್ಲಿ ಮನವಿ ಮಾಡಿದ್ದಾರೆ.
ವಿದ್ಯಾಗಮದೊಂದಿಗೆ
ಎಲ್ಲಾ ತರಗತಿಯ ಮಕ್ಕಳಿಗೆ ಈಗಾಗಲೇ ವಿದ್ಯಾಗಮ ಕಾರ್ಯಕ್ರಮದ ಮಕ್ಕಳ ಕಲಿಕೆಗೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಕೂಲ ಮಾಡಿಕೊಟ್ಟಿದೆ. ಆನ್ಲೈನ್ ತಗರಗತಿಗಳಿಂದ ಮಕ್ಕಳ ಮನಸ್ಸಿನ ಮೇಲೆ ಅಡ್ಡಪರಿಣಾಮಗಳು ಆಗುತ್ತಿವೆ. ಹೀಗಾಗಿ ಸರ್ಕಾರಿ ಶಾಲಾ ಮಕ್ಕಳ ಕಲಿಗೆಗೆ ಪೂರಕವಾಗಿ ಇದೀಗ ವಿದ್ಯಾಗಮದೊಂದಿಗೆ ಆಕಾಶವಾಣಿ ಸಹಯೋಗದಲ್ಲಿ ನೂತನ ಕಾರ್ಯಕ್ರಮ ಜಾರಿಗೆ ತರಲಾಗಿದೆ.