ಅರಣ್ಯದಲ್ಲಿ ಸಿನಿಮಾ ಶೂಟಿಂಗ್ಗೆ ಹೊಸ ನಿಯಮ: ಟಾಕ್ಸಿಕ್, ಕಾಂತಾರ ಸಿನಿಮಾ ಶೂಟಿಂಗ್ ಎಫೆಕ್ಟ್
ರಾಜ್ಯದಲ್ಲಿ ಸಿನಿಮಾ ಶೂಟಿಂಗ್ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಿನಿಮಾ ಶೂಟಿಂಗ್ನ ಸಂದರ್ಭದಲ್ಲಿ ಅರಣ್ಯನಾಶ / ಅರಣ್ಯ ಪ್ರದೇಶಕ್ಕೆ ಹಾನಿ ಮಾಡಲಾಗುತ್ತಿದೆ ಎನ್ನುವ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಕನ್ನಡದ ಕಾಂತಾರ ಹಾಗೂ ಟಾಕ್ಸಿಕ್ ಸಿನಿಮಾಗಳ ಶೂಟಿಂಗ್ ಸಂದರ್ಭದಲ್ಲಿ ಅರಣ್ಯ ಪ್ರದೇಶಕ್ಕೆ ಹಾನಿಯಾಗಿದೆ ಎನ್ನುವ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಆದರೆ ಈ ಎರಡೂ ಸಿನಿಮಾ ತಂಡಗಳು ಸಹ ಈ ಆರೋಪವನ್ನು ತಳ್ಳಿ ಹಾಕಿವೆ. ಆದರೆ ಇದರ ನಡುವೆಯೇ ಅರಣ್ಯದಲ್ಲಿ ಸಿನಿಮಾಗಳ ಶೂಟಿಂಗ್ಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ವೊಂದನ್ನು ರಾಜ್ಯ ಸರ್ಕಾರ ಕೊಟ್ಟಿದೆ. ಅದರ ವಿವರ ಇಲ್ಲಿದೆ.
ಕರ್ನಾಟಕ ಅರಣ್ಯ ಇಲಾಖೆಯು ರಾಜ್ಯದಲ್ಲಿ ಸಿನಿಮಾ, ಧಾರವಾಹಿ ಹಾಗೂ ಕಿರುಚಿತ್ರ ಸೇರಿದಂತೆ ಅರಣ್ಯದಲ್ಲಿ ವಿವಿಧ ಶೂಟಿಂಗ್ಗಳನ್ನು ಮಾಡುವುದಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶವೊಂದನ್ನು ಮಾಡಿದೆ. ಈಚೆಗೆ ನಟ ರಿಷಬ್ ಶೆಟ್ಟಿ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ಕಾಂತಾರ ಚಾಪ್ಟರ್1 ಸಿನಿಮಾದ ಶೂಟಿಂಗ್ನಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಲಾಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಅಲ್ಲದೆ ನಟ ಯಶ್ ಅವರ ಟಾಕ್ಸಿಕ್ ಸಿನಿಮಾ ಶೂಟಿಂಗ್ನಲ್ಲಿ ಅಪಾರ ಪ್ರಮಾಣದ ಅರಣ್ಯಕ್ಕೆ ಹಾನಿಯಾಗಿದೆ ಎನ್ನುವ ದೂರು ಸಹ ಕೇಳಿ ಬಂದಿತ್ತು. ಈ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಅರಣ್ಯದಲ್ಲಿ ಶೂಟಿಂಗ್ ಮಾಡಬೇಕಾದರೆ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕು ಅಂತ ಹೇಳಿದೆ.

ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಲನಚಿತ್ರ, ದೂರದರ್ಶನ, ಧಾರವಾಹಿ ಹಾಗೂ ಸಾಕ್ಷ್ಯಚಿತ್ರ ಸೇರಿದಂತೆ ವಿವಿಧ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಶುಲ್ಕ ಪಡೆದುಕೊಂಡು ಅನುಮತಿ ನೀಡಲಾಗುತ್ತಿದೆ. ಇದೀಗ ಅರಣ್ಯ ಪ್ರದೇಶದ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದ ಆಗುತ್ತಿರುವ ತೊಂದರೆ ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆಯ ಬಗ್ಗೆ ಚರ್ಚೆ ನಡೆದಿದೆ.
ಈ ವಿಷಯಗಳ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಲಾಗಿದೆ. ಮುಂದುವರಿದು ಅರಣ್ಯ ಪ್ರದೇಶಗಳಲ್ಲಿ ವಿವಿಧ ಮಾದರಿಯ ಚಿತ್ರೀಕರಣಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು ಅನುಮತಿಯನ್ನು ನೀಡಲಾಗುತ್ತಿದ್ದು. ಹೀಗಾಗಿ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿ ಸಹ ಹೊರ ಜಗತ್ತಿಗೆ ಗೊತ್ತಾಗುವ ಸಾಧ್ಯತೆ ಇರುತ್ತದೆ. ಅರಣ್ಯ ಮತ್ತು ವನ್ಯಜೀವಿಗಳ ಸೂಕ್ಷ್ಮತೆಯ ಅರಿವಿಲ್ಲದೆ ಪರಿಸರ ಹಾಗೂ ಜೀವವೈವಿಧ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಸಹ ಇದೆ ಎಂದು ಸರ್ಕಾರ ಹೇಳಿದೆ.
ಈ ಎಲ್ಲಾ ಕಾರಣಗಳಿಂದ ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ, ಮುಂದಿನ ತಲೆಮಾರಿಗೆ ಉತ್ತಮ ಪರಿಸರ ನೀಡುವ ಉದ್ದೇಶದಿಂದ ಹೊಸ ಕ್ರಮ ತೆಗೆದುಕೊಳ್ಳಲಾಗಿದೆ. ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಜವಾಬ್ದಾರಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದಿಂದ ಅನುಮತಿ ಪಡೆದುಕೊಳ್ಳಬೇಕು ಅಂತ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ಹೊರಡಿಸಿದ್ದಾರೆ.












Click it and Unblock the Notifications