ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಹೊಸ ಜವಾಬ್ದಾರಿ ಕೊಟ್ಟ ಹೈಕಮಾಂಡ್!
Recommended Video

ಬೆಂಗಳೂರು, ನವೆಂಬರ್ 20 : ಕರ್ನಾಟಕ ಕಾಂಗ್ರೆಸ್ನ ಇಬ್ಬರು ಪ್ರಭಾವಿ ನಾಯಕರಿಗೆ ಹೈಕಮಾಂಡ್ ಹೊಸ ಟಾಸ್ಕ್ ನೀಡಿದೆ. ಇಬ್ಬರೂ ನಾಯಕರು ಪಕ್ಕದ ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ.
ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಈ ಟಾಸ್ಕ್ ನೀಡಿದೆ. ಐದು ಕ್ಷೇತ್ರಗಳ ಉಪ ಚುನಾವಣೆ ಬಳಿಕ ಇಬ್ಬರು ನಾಯಕರಿಗೆ ಮತ್ತೊಂದು ಜವಾಬ್ದಾರಿ ನೀಡಲಾಗಿದೆ.
ನವೆಂಬರ್ 3ರಂದು ನಡೆದ ಐದು ಕ್ಷೇತ್ರಗಳ ಉಪ ಚುನಾವಣೆ ಹೊಣೆಯನ್ನು ಸಿದ್ದರಾಮಯ್ಯ ಅವರಿಗೆ ನೀಡಲಾಗಿತ್ತು. ಡಿ.ಕೆ.ಶಿವಕುಮಾರ್ ಅವರಿಗೆ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಹೊಣೆ ವಹಿಸಲಾಗಿತ್ತು.
ಐದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ 4 ಕಡೆ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಳ್ಳಾರಿಯಲ್ಲಿ ವಿ.ಎಸ್.ಉಗ್ರಪ್ಪ ಅವರು ದಾಖಲೆಯ ಜಯವನ್ನು ದಾಖಲಿಸಿದ್ದಾರೆ. ಆದ್ದರಿಂದ, ಇಬ್ಬರು ನಾಯಕರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ...

ತೆಲಂಗಾಣ ಚುನಾವಣೆ ಹೊಣೆ
ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 7ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗೆ ತೆಲಂಗಾಣ ಚುನಾವಣೆ ಪ್ರಚಾರ ನಡೆಸುವ ಟಾಸ್ಕ್ ನೀಡಲಾಗಿದೆ. ಅವರು ಶೀಘ್ರದಲ್ಲಿಯೇ ಪಕ್ಕದ ರಾಜ್ಯಕ್ಕೆ ತೆರಳಲಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.

ಉಭಯ ನಾಯಕರು
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರು ರಾಜ್ಯ ಕಾಂಗ್ರೆಸ್ನ ಪ್ರಭಾವಿ ನಾಯಕರು. ಇಬ್ಬರು ಸಂಘಟನಾ ಚತುರರು ಎಂಬುದು ಹಲವು ಸಂದರ್ಭದಲ್ಲಿ ಸಾಬೀತಾಗಿದೆ. ಆದ್ದರಿಂದ, ಅವರಿಗೆ ಪಕ್ಕದ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುವ ಹೊಣೆಗಾರಿಕೆ ನೀಡಲಾಗಿದೆ. ತೆಲಂಗಾಣದಲ್ಲಿ ಅಧಿಕಾರ ಹಿಡಿಯಬೇಕು ಎಂದು ಕಾಂಗ್ರೆಸ್ ಪಣ ತೊಟ್ಟಿದೆ.

ಪ್ರಾದೇಶಿಕ ಪಕ್ಷ
ತೆಲಂಗಾಣದಲ್ಲಿ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಎದುರಾಳಿಯಾಗಿದೆ. 119 ಸದಸ್ಯ ಬಲದ ವಿಧಾನಸಭೆಗೆ ಡಿಸೆಂಬರ್ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್-ಟಿಡಿಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿದೆ. ಆದ್ದರಿಂದ, ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

ಲೋಕಸಭೆ ಚುನಾವಣೆ ತಯಾರಿ
2019ರ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಉಳಿದಿದೆ. ಆದ್ದರಿಂದ, ಇಬ್ಬರು ನಾಯಕರಿಗೆ ಹೆಚ್ಚಿನ ಹೊಣೆಗಾರಿಕೆ ನೀಡಿ ಲೋಕಸಭಾ ಚುನಾವಣೆಗೂ ತಯಾರಾಗುವಂತೆ ಸೂಚನೆ ನೀಡಲಾಗಿದೆ. ಆದ್ದರಿಂದ, ಉಭಯ ನಾಯಕರು ಪಕ್ಷದ ನಿರ್ದೇಶನದಂತೆ ಕೆಲಸ ಆರಂಭಿಸಿದ್ದಾರೆ.











Click it and Unblock the Notifications