ಬಿಜೆಪಿ ಜೊತೆ ಜೆಡಿಎಸ್ ವಿಲೀನ ವಿಚಾರ: ಕುಮಾರಸ್ವಾಮಿ ಮಹತ್ವದ ಸ್ಪಷ್ಟನೆ
ಬೆಂಗಳೂರು, ಡಿ 20: ಕಳೆದ ಕೆಲವು ದಿನಗಳಿಂದ ಜಾತ್ಯಾತೀತ ಜನತಾದಳ (ಜೆಡಿಎಸ್) ಬಿಜೆಪಿ ಜೊತೆ ವಿಲೀನಗೊಳ್ಳಲಿದೆ ಎನ್ನುವ ಸುದ್ದಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆಯನ್ನು ನೀಡಿದ್ದಾರೆ.
ದಿನದಿಂದ ದಿನಕ್ಕೆ ಬಿಜೆಪಿ ಜೊತೆಗಿನ ಜೆಡಿಎಸ್ ಸಖ್ಯ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ರೀತಿಯ ಸುದ್ದಿಗಳು ಹರಿದಾಡುತ್ತಿದ್ದವು. ಇದಕ್ಕೆ ಸ್ಪಷ್ಟನೆಯನ್ನು ನೀಡಿರುವ ಎಚ್ಡಿಕೆ, "ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ"ಎಂದು ಹೇಳಿದ್ದಾರೆ.
ಈ ಬಗ್ಗೆ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಹೀಗಿದೆ, "ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ"ಎಂದು ಹೇಳಿದ್ದಾರೆ.

"ಜೆಡಿಎಸ್ ಬಿಜೆಪಿಯ 'ಬಿ ಟೀಂ' ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ 'ಬಿ ಟೀಂ' ಆಗಿದ್ದರೆ, ಕಾಂಗ್ರೆಸ್ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.
"ರೈತರ ಸಾಲಮನ್ನಾ', 'ಬಡವರ ಬಂಧು' ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ" - ಕುಮಾರಸ್ವಾಮಿ ಟ್ವೀಟ್.
"ಲೋಕದ ಡೊಂಕ ನೀವೇಕೆ ತಿದ್ದುವಿರಿ? ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ ಕೂಡಲಸಂಗಮದೇವ" ಎಂದು ಕುಮಾರಸ್ವಾಮಿ ವಚನವನ್ನೂ ಪ್ರಸ್ತಾವಿಸಿದ್ದಾರೆ.












Click it and Unblock the Notifications