ಬಿಜೆಪಿಗೆ ಬಾಹ್ಯ ಬೆಂಬಲ: ಕುಮಾರಸ್ವಾಮಿ ಮಹತ್ವದ ಸ್ಪಷ್ಟನೆ
ಬೆಂಗಳೂರು, ಜುಲೈ 27: ಸೋಮವಾರ, ಜುಲೈ 29ರಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮಂಡಿಸಲಿರುವ ವಿಶ್ವಾಸಮತದ ವೇಳೆ, ಜೆಡಿಎಸ್ ಬಾಹ್ಯ ಬೆಂಬಲ ನೀಡುವ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ವಿಚಾರದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆಯನ್ನು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ' ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ'.
' ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ' , ಇದು ಕುಮಾರಸ್ವಾಮಿಯವರು ಮಾಡಿರುವ ಟ್ವೀಟ್.

ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಬೇಕೆಂದು ಕೆಲವು ಶಾಸಕರು ಹೇಳಿದ್ದರೆ ಇನ್ನು ಕೆಲವರು ಬಾಹ್ಯ ಬೆಂಬಲವನ್ನು ನೀಡಬೇಕೆಂದು, ಕುಮಾರಸ್ವಾಮಿಯವರನ್ನು ಭೇಟಿಯಾದ ಜೆಡಿಎಸ್ ಶಾಸಕರು ಎಚ್ಡಿಕೆಯವರಲ್ಲಿ ಮನವಿ ಮಾಡಿದ್ದರೆಂದು ಜೆಡಿಎಸ್ ಹಿರಿಯ ಮುಖಂಡ ಜಿ ಟಿ ದೇವೇಗೌಡ, ಮಾಧ್ಯಮಗಳಿಗೆ ತಿಳಿಸಿದ್ದರು.
"ಯಾರಿಂದಲೂ ಸ್ಥಿರ ಸರ್ಕಾರ ನೀಡಲು ಸಾಧ್ಯವಿಲ್ಲ, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಡಳಿತವೊಂದೇ ಪರಿಹಾರ" ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದರು.
'ನನ್ನ ಮಗ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆದ ಸಂದರ್ಭದಿಂದಲೂ ಸಾಕಷ್ಟು ನೋವು ಅನುಭವಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುಮಾರು 15 ನಿಮಿಷ ಕಣ್ಣೀರಿಟ್ಟಿದ್ದರು. ನನಗೆ ಎಲ್ಲವೂ ಗೊತ್ತಿದೆ' ಎಂದು ಜೆಡಿಎಸ್ ವರಿಷ್ಠ ದೇವೇಗೌಡ್ರು ಶನಿವಾರ ಮಾಧ್ಯಮವರೊಂದಿಗೆ ಮಾತನಾಡುತ್ತಾ ಹೇಳಿದ್ದರು.












Click it and Unblock the Notifications