"ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ಅವರೇ ಧಮ್ಕಿ ಹಾಕುವ ನಿಮ್ಮ ಪ್ರವೃತ್ತಿಯನ್ನು ಬದಲಿಸಿಕೊಳ್ಳಿ"
ಬೆಂಗಳೂರು,ಸೆಪ್ಟೆಂಬರ್ 19: ಉದ್ಯಮಿಗಳಿಗೆ ಧಮ್ಕಿ ಹಾಕುವುದಕ್ಕಾ ನೀವು ಡಿಸಿಎಂ ಆಗಿದ್ದು ಧಮ್ಕಿ ಹಾಕುವ ನಿಮ್ಮ ಪ್ರವೃತ್ತಿಯನ್ನು ಬದಲಿಸಿಕೊಳ್ಳಿ ಎಂದು ಡಿಕೆಶಿಗೆ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.
ಬೆಂಗಳೂರು ತೊರೆಯುವುದಾಗಿ ಬೇಸರ ವ್ಯಕ್ತಪಡಿಸುತ್ತಿರುವ ಉದ್ಯಮಿಗಳಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುವುದನ್ನು ಬಿಟ್ಟು, ಅವರಿಗೆ ಧಮ್ಕಿ ಹಾಕಿ ನಿಮ್ಮ ಘನತೆಯನ್ನು ಕಳೆದುಕೊಳ್ಳಬೇಡಿ ವಾಗ್ದಾಳಿ ನಡೆಸಿದರು.
ಉಪ ಮುಖ್ಯಮಂತ್ರಿಗಳೇ ಬೆಂಗಳೂರಿನ ನಾಗರಿಕರ ಕೊಡುಗೆ ರಾಜ್ಯಕ್ಕೆ ಸಾಕಷ್ಟಿದೆ. ಅವರಿಗೆ ನೀವು ಕೊಡುತ್ತಿರುವ ಮೂಲಭೂತ ಸೌಕರ್ಯಗಳು ಏನು ಇಲ್ಲಿನ ನಾಗರಿಕರ ಹಿತದೃಷ್ಟಿಯಿಂದ ಮೂಲಭೂತ ಸೌಕರ್ಯಗಳನ್ನಾದರು ನೀಡಿ ಎಂದು ಆಗ್ರಹಿಸಿದರು. ನೀರು, ಹಾಲು, ಮೆಟ್ರೋ ದರ ಹೆಚ್ಚಳವಲ್ಲದೆ ಆಸ್ತಿ ತೆರಿಗೆ, ಕಸದ ಸೆಸ್ ಹೊರೆಯನ್ನು ಬೆಂಗಳೂರಿನ ನಾಗರಿಕರಿಗೆ ಹೊರಿಸಿರುವ ರಾಜ್ಯ ಸರ್ಕಾರ ಯಾವ ಮೂಲ ಸೌಕರ್ಯಗಳನ್ನು ಕಲ್ಪಿಸಿದೆ? ಎಂದು ನಿಖಿಲ್ ಅವರು ಕುಮಾರಸ್ವಾಮಿ ಪ್ರಶ್ನಿಸಿದರು.

ನಗರದಲ್ಲಿ ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣವಾಗುತ್ತಿವೆ. ಪ್ರತಿ ವಾರ್ಡ್ನಲ್ಲೂ ಘನತ್ಯಾಜ್ಯ ಸಮರ್ಪಕವಾಗಿ ವಿಲೇವಾರಿಯಾಗದೆ ಗಬ್ಬು ನಾರುತ್ತಿವೆ. ರಾಜ್ಯಕ್ಕೆ ಶೇ.30ರಷ್ಟು ತೆರಿಗೆಯನ್ನು ಬೆಂಗಳೂರು ನಾಗರಿಕರು ನೀಡುತ್ತಿದ್ದಾರೆ. ಆದರೂ ಅಗತ್ಯ ಮೂಲ ಸೌಕರ್ಯ ಏಕೆ ಕಲ್ಪಿಸಿಲ್ಲ ಎಂದು ವಾಗ್ದಾಳಿ ನಡೆಸಿದರು
ಹೊರ ವರ್ತುಲ ರಸ್ತೆಯ ಬ್ಲಾಕ್ಬಗ್ ಕಂಪನಿ ಸಿಇಒ ಅವರು ಮೂಲ ಸೌಕರ್ಯಗಳ ಬಗ್ಗೆ ಟ್ವೀಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯವಿಲ್ಲದ್ದರಿಂದ ರಾಜ್ಯದಿಂದ ಹೊರಹೋಗುವ ಮಾತನ್ನಾಡಿದ್ದಾರೆ. ಆದರೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಮೂಲ ಸೌಕರ್ಯ ಒದಗಿಸಲು ಯಾವ ಕ್ರಮ ಕೈಗೊಂಡಿದ್ದಾರೆ ಕಿಡಿ ಕಾರಿದರು.
ಬಂಡವಾಳ ಹೂಡಿಕೆಗೆ ಸರ್ಕಾರ ಯಾವ ಮೂಲ ಸೌಲಭ್ಯ ಕಲ್ಪಿಸಿದೆ. ನವೆಂಬರ್ ವೇಳೆಗೆ ಗುಂಡಿ ಮುಚ್ಚುವ ಗಡುವು ನೀಡಿ 1100 ಕೋಟಿ ರೂ. ಒದಗಿಸುವುದಾಗಿ ಹೇಳಿದ್ದಾರೆ. ಮೂಲ ಸೌಕರ್ಯವಿಲ್ಲದೆ ಉದ್ಯಮಗಳು ನೆರೆಹೊರೆಯ ರಾಜ್ಯಗಳಿಗೆ ಹೋದರೆ ತೆರಿಗೆ ನಷ್ಟ ಉಂಟಾಗಲಿದೆ. ಜಿಬಿಎ ವ್ಯಾಪ್ತಿಯಲ್ಲಿ ವಾರ್ಷಿಕ 850 ಕೋಟಿ ರೂ. ತೆರಿಗೆ ಪಾವತಿಯಾಗುತ್ತಿದೆ. ಇರುವ ಕಂಪನಿಗಳನ್ನು ಉಳಿಸಿಕೊಂಡು ಹೊಸ ಕಂಪನಿಗಳನ್ನು ಬೆಂಗಳೂರಿಗೆ ಕರೆತರುವ ಪ್ರಯತ್ನವಾಗುತ್ತಿಲ್ಲ ಎಂದು ಆಕ್ಷೇಪಿಸಿದರು.
ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರಿನ ಸಮಸ್ಯೆಗಳು ಪರಿಹಾರವಾಗುತ್ತವೆಯೇ? ಕೃತಕ ಬುದ್ಧಿಮತ್ತೆ ಯುಗದಲ್ಲಿ ಇದ್ದರೂ ಮೂಲಸೌಕರ್ಯ ಏಕೆ ಕಲ್ಪಿಸಲಾಗುತ್ತಿಲ್ಲ ಎಂಬುದನ್ನು ಸರ್ಕಾರ ಉತ್ತರಿಸಬೇಕು. ಉದ್ಯಮಿಗಳು ಸಾರ್ವಜನಿಕರಿಗಾಗುವ ತೊಂದರೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ ಎಂದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು 4,500 ಇವಿ ಬಸ್ಗಳನ್ನು ಬೆಂಗಳೂರಿಗೆ ನೀಡಿದ್ದರು. ಸರ್ಕಾರದಿಂದ ಕೃತಜ್ಞತೆ ಸಲ್ಲಿಸುವ ಕೆಲಸವಾಗಲಿಲ್ಲ. ಜೆಡಿಎಸ್ ಆಡಳಿತದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ಪ್ರಶ್ನಿಸಿದ್ದಾರೆ. ಅದರ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿದ್ಧ. ಉಪಮುಖ್ಯಮಂತ್ರಿ ಸಮಸ್ಯೆ ಬಗೆಹರಿಸುವ ಕಡೆ ಗಮನ ಹರಿಸಲಿ ಎಂದು ಅವರು ಟೀಕಿಸಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಐಟಿಬಿಟಿಗೆ 10 ವರ್ಷಗಳ ಕಾಲ ತೆರಿಗೆ ವಿನಾಯಿತಿ ನೀಡಿ ಭದ್ರ ಬುನಾದಿ ಹಾಕಿದರು. ಮೈಸೂರು ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಪ್ರಧಾನಿಯಾಗಿ ಬೆಂಗಳೂರಿಗೆ 9 ಟಿಎಂಸಿ ಕಾವೇರಿ ನೀರನ್ನು ಒದಗಿಸಿದರು. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಬಿಬಿಎಂಪಿ ಮಾಡಿದ್ದರು. ಆದರೆ ಈ ಸರ್ಕಾರದ ಅವಧಿಯಲ್ಲಿ ರಾಜರಾಜೇಶ್ವರಿ ನಗರ, ಹೊಸಕೆರೆಹಳ್ಳಿ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಗಳು ಕುಂಟುತ್ತಾ ಸಾಗಿವೆ ಎಂದು ಅವರು ವ್ಯಂಗ್ಯವಾಡಿದರು.
ಹಿಂದೆ ಇದೇ ಸಿಎಂ ಕಾಂತರಾಜು ವರದಿ ಸ್ವೀಕಾರ ಮಾಡಿದ್ದರು.180 ಕೋಟಿ ರೂಪಾಯಿ ವೆಚ್ಚದಲ್ಲಿ ಸಮೀಕ್ಷೆ ಆಗಿತ್ತು.ಆದ್ರೆ ಅವರ ಸಚಿವರೇ ವರದಿಗೆ ಅಸಮಾಧಾನ ವ್ಯಕ್ತಪಡಿಸಿದರು. ಹೀಗಾಗಿ ಸಿದ್ದರಾಮಯ್ಯ ಅವರು ವರದಿ ತಿರಸ್ಕರಿಸಿದರು ಎಂದು ಹೇಳಿದರು. ಅದಕ್ಕೆ ಖರ್ಚಾದ ಹಣ ರಾಜ್ಯದ ಜನರ ತೆರಿಗೆ ಹಣ ಪೋಲಾಯ್ತು. ಇದೀಗ 420 ಕೋಟಿ ವೆಚ್ಚದಲ್ಲಿ ಮತ್ತೆ ಸರ್ವೆ ಮಾಡುತ್ತಿದ್ದಾರೆ. ಇದಕ್ಕೆ ಅವರದ್ದೇ ಸಚಿವರು ಅಸಮಾಧಾನ ಹೊರಹಾಕಿದ್ದರೆ. 331 ಜಾತಿಗಳ ಸೇರ್ಪಡೆ ಮಾಡಿದ್ದು ಯಾರ ಉದ್ದೇಶಕ್ಕೆ? ಎಂದು ವಾಗ್ದಾಳಿ ನಡೆಸಿದರು.
ಸೂಪರ್ ಸಿಎಂ ಸುರ್ಜೇವಾಲಾ, ಹೈಕಮಾಂಡ್ ಮೆಚ್ಚಿಸೋಕೆ ಕೆಲಸ ಮಾಡ್ತಿದ್ದಾರೆ. ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ರೆ ಸುರ್ಜೇವಾಲಾ ಸಭೆ ಮಾಡ್ತಾರೆ. ಸಿದ್ದರಾಮಯ್ಯಗೆ ಅವರು ಸಿಎಂ ಅಲ್ಲವೇ?ಹೊಸ ಜಾತಿಗಳ ಸೇರ್ಪಡೆ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದರು. ಬಡ ವ್ಯಕ್ತಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸಮೀಕ್ಷೆ ಮಾಡಿದ್ರೆ ಒಪ್ಪುತ್ತೇವೆ ಆದ್ರೆ ಇದರಲ್ಲಿ ರಾಜಕೀಯ ದುರುದ್ದೇಶ ಕಾಣ್ತಿದೆ, ಹೀಗಾಗಿ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.












Click it and Unblock the Notifications