Nikhil Kumaraswamy: ಚನ್ನಪಟ್ಟಣದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಸ್ಕರ್ಧೆ ಫೈನಲ್
ರಾಮನಗರ, ಅಕ್ಟೋಬರ್ 24: ಕರ್ನಾಟಕದಲ್ಲಿ ಉಪ ಚುನಾವಣೆ ಘೋಷಣೆ ಆಗಿದ್ದ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಕ್ಷೇತ್ರವು ಸಖತ್ ಸುದ್ದಿ ಮಾಡಿತ್ತು. ಇದೀಗ ಚನ್ನಪಟ್ಟಣದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಯಾರೆಂಬುದು ಬಹುತೇಕ ಅಂತಿಮವಾಗಿದೆ. ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮೂರನೇ ಭಾರಿಗೆ ಚನ್ನಪಟ್ಟಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಜೆಡಿಎಸ್ ಸಭೆಯಲ್ಲಿ ಚನ್ನಪಟ್ಟಣ ಟಿಕೆಟ್ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣದಿಂದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ. ಕಾರ್ಯಕರ್ತರ ಒತ್ತಾಯಕ್ಕೆ ಮಣಿದ ಜೆಡಿಎಸ್ ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಈ ಹಿಂದೆ ಮಂಡ್ಯ ಲೋಕಸಭಾ ಚುನಾವಣೆ, ರಾಮನಗರ ವಿಧಾನಸಭಾ ಚುನಾವಣೆ ಸೇರಿ ಒಟ್ಟು ಎರಡು ಭಾರೀ ಚುನಾವಣೆಯಲ್ಲಿ ಸೋಲು ಕಂಡಿದ್ದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮತ್ತೆ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ಟಿಕೆಟ್ ಫೈನಲ್ ಕುರಿತು ಮೈತ್ರಿ ಪಕ್ಷಗಳಿಂದ ಅಧಿಕೃತ ಘೋಷಣೆ ಆಗಿದೆ.
ಗುರುವಾರ ಮಧ್ಯಾಹ್ನ ಬಿಎಸ್ ಯಡಿಯೂರಪ್ಪ ಅವರ ಮನೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಿದರೆ ಆಗುವ ಒಳಿತು, ಚನ್ನಪಟ್ಟಣದ ಗೆಲುವಿನ ಸಾಧಕ ಭಾಧಕ ಕುರಿತು ಚರ್ಚಿಸಿ ಟಿಕೆಟ್ ಅಂತಿಮಗೊಳಿಸಲಾಗಿದೆ.
ಯಡಿಯೂರಪ್ಪ ಪ್ರತಿಕ್ರಿಯೆ
ಟಿಕೆಟ್ ಖಚಿತವಾಗುತ್ತಿದ್ದಂತೆ ಬಿಎಸ್ ಯಡಿಯೂರಪ್ಪ ಕಾಲಿಗೆ ಬಿದ್ದು ನಿಖಿಲ್ ಕುಮಾರಸ್ವಾಮಿ ಅವರು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ನಮ್ಮ ಮೈತ್ರಿ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ. ಪಕ್ಷಾಂತರಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ನಮಗೆ ಚನ್ನಪಟ್ಟಣದಲ್ಲಿ ಗೆಲುವಾಗಲಿದೆ. ನಿಖಿಲ್ ಬಹುಮತ ಪಡೆಯಲಿದ್ದಾರೆ. ಈಬಗ್ಗೆ ಎಲ್ಲ ನಾಯಕರು ಶ್ರಮಿಸಲಿದ್ದಾರೆ ಎಂದು ಅವರು ತಿಳಿಸಿದರು.
ಯೋಗೇಶ್ವರ-ನಿಖಿಲ್ ಮುಖಾಮುಖಿ
ಸದ್ಯ ಬಿಜೆಪಿಯಿಂದ ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ ಅವರು ಟಿಕೆಟ್ ಬಯಸಿದ್ದರು. ಆದರೆ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಆಗುತ್ತಿದ್ದಂತೆ ಅವರು ಕಾಂಗ್ರೆಸ್ನಿಂದ ಅದೇ ಚನ್ನಪಟ್ಟಣದಿಂದ ಕಣಕ್ಕಿಳಿದಿದ್ದಾರೆ. ಇಂದು ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಹಾಗೂ ಸಿಪಿ ಯೋಗೇಶ್ವರ ಅವರು ಮುಖಾಮುಖಿ ಆಗಿದ್ದಾರೆ.












Click it and Unblock the Notifications