ಮತ್ತೆ ಚುನಾವಣಾ ಅಖಾಡಕ್ಕೆ ನಿಖಿಲ್ ಕುಮಾರಸ್ವಾಮಿ? ಕ್ಷೇತ್ರ ಯಾವುದು?
ಬೆಂಗಳೂರು, ಸೆಪ್ಟೆಂಬರ್ 24: ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ ಸೋತು ನಿರಾಸೆ ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಅವರಲ್ಲಿ ಉಪಚುನಾವಣೆ ಹೊಸ ಆಸೆ ಚಿಗುರಿಸಿದ್ದು, ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಇದೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರೂ ಸಹ ಮಗನಿಗೆ ರಾಜಕೀಯ ನೆಲೆ ಕಟ್ಟಿಕೊಡಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಅವರಿಗೆ ರಾಜಕೀಯ ನೆಲೆ ಕಟ್ಟಿಕೊಡಲು ಉಪಚುನಾವಣೆಯನ್ನು ಬಳಸಿಕೊಳ್ಳಲಿದ್ದಾರೆ.
ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ: ಕುಮಾರಸ್ವಾಮಿ ಹೇಳಿದ್ದೇನು?
15 ಕ್ಷೇತ್ರಗಳ ಉಪಚುನಾವಣೆಯಲ್ಲಿ ದಕ್ಷಿಣ ಕರ್ನಾಟಕದ ಯಾವುದಾದರೂ ಸೂಕ್ತ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡಬೇಕು ಎಂದು ಜೆಡಿಎಸ್ನ ಕೆಲವು ಶಾಸಕರು, ಮುಖಂಡರು ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ.
ನಿಖಿಲ್ ಕುಮಾರಸ್ವಾಮಿಗೆ ರಾಜಕೀಯ ನೆಲೆಯ ಅಗತ್ಯ ಇದೆ
ಈ ಬಗ್ಗೆ ನಿನ್ನೆ ಮಾತನಾಡಿದ್ದ ಕುಮಾರಸ್ವಾಮಿ, 'ಜೆಡಿಎಸ್ನ ಶಾಸಕರು ಮುಖಂಡರಿಂದ ಒತ್ತಡ ಸಾಕಷ್ಟಿದೆ. ಆದರೆ ದೇವೇಗೌಡ ಅವರ ಕುಟುಂಬದಿಂದ ಚುನಾವಣೆಗೆ ಯಾರೂ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದರು. ಆದರೆ ಕುಮಾರಸ್ವಾಮಿ ಅವರ ಈ ಮಾತಿನ ಮೊದಲಾರ್ಧವನ್ನು ಗಮನಿಸುವುದಾದರೆ ನಿಖಿಲ್ ಕುಮಾರಸ್ವಾಮಿ ಅವರಿಗೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಮತ್ತೊಂದು ಅವಕಾಶ ಕೊಡುವ ಮನಸ್ಸಿರುವುದು ಸೂಚ್ಯಗೊಳ್ಳುತ್ತದೆ.
ಚಿಕ್ಕಬಳ್ಳಾಪುರದಿಂದ ಟಿಕೆಟ್ ಕೊಡಿರೆಂದು ಶಾಸಕ ಒತ್ತಾಯ
ನಿಖಿಲ್ ಕುಮಾರಸ್ವಾಮಿ ಅವರಿಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಉಪಚುನಾವಣೆ ಟಿಕೆಟ್ ನೀಡಬೇಕು ಎಂದು ದೇವನಹಳ್ಳಿ ಕ್ಷೇತ್ರ ಜೆಡಿಎಸ್ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ. ಚಿಕ್ಕಬಳ್ಳಾಪುರದಿಂದ ಟಿಕೆಟ್ ನೀಡಿದರೆ ಗೆಲ್ಲಿಸುವ ಜವಾಬ್ದಾರಿ ತಮ್ಮದು ಎಂದು ಅವರು ಹೇಳಿದ್ದಾರೆ. ಇದರಂತೆಯೇ ಇನ್ನೂ ಕೆಲವು ಕಡೆಗಳಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಬರುತ್ತಿದೆ.
ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದರು
ಒಟ್ಟು ಹದಿನೈದು ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ಈ ಹಿಂದೆ ಜೆಡಿಎಸ್ ಶಾಸಕರೇ ಆಯ್ಕೆ ಆಗಿದ್ದರು. ಹುಣಸೂರು, ಕೆ.ಆರ್.ಪೇಟೆ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಗಳಲ್ಲಿ ಜೆಡಿಎಸ್ ಟಿಕೆಟ್ನಿಂದ ಗೆದ್ದಿದ್ದ ಎಚ್.ವಿಶ್ವನಾಥ್, ನಾರಾಯಣಗೌಡ ಮತ್ತು ಕೆ.ಗೋಪಾಲಯ್ಯ ರಾಜೀನಾಮೆ ನೀಡಿದ್ದಾರೆ. ಈ ಮೂರರಲ್ಲಿ ಯಾವುದಾದರೂ ಒಂದು ಕ್ಷೇತ್ರದಿಂದ ಟಿಕೆಟ್ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಮಾಡಲಾಗಿದೆ.
ಒಕ್ಕಲಿಗ ಸಮುದಾಯ ದೊಡ್ಡ ಸಂಖ್ಯೆಯಲ್ಲಿರುವ ಚಿಕ್ಕಬಳ್ಳಾಪುರ
ಒಕ್ಕಲಿಗ ಸಮದಾಯ ನಿರ್ಣಾಯಕವಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದಿಂದಲೂ ನಿಖಿಲ್ ಅವರ ಸ್ಪರ್ಧೆಗೆ ಒತ್ತಡವಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿಯೇ ಈ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಡ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಮಂಡ್ಯ ಆಯ್ಕೆ ಮಾಡಿಕೊಳ್ಳಲಾಯಿತು.
ಜೆಡಿಎಸ್ ಯುವಘಟಕ ಅಧ್ಯಕ್ಷರಾಗಿರುವ ನಿಖಿಲ್
ಲೋಕಸಭೆ ಚುನಾವಣೆ ಸೋತ ಬಳಿಕ ಜೆಡಿಎಸ್ ಯುವಘಟಕ ಅಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸದಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ, ಹುಣಸೂರು, ಕೆ.ಆರ್.ಪೇಟೆ ಮೂರು ಕ್ಷೇತ್ರದಲ್ಲಿ ಯಾವುದಾದರೂ ಒಂದು ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆಗೆ ಇಳಿಯಲಿ ಎಂಬುದು ಜೆಡಿಎಸ್ ಮುಖಂಡರ ಒತ್ತಾಯವಾಗಿದೆ.