ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ? ಸರ್ವೆಯಲ್ಲಿ ದಳಪತಿಗಳಿಗೆ ಸಿಕ್ಕಿದೆ ಜನ ಬೆಂಬಲ!
ಬೆಂಗಳೂರು, ಫೆಬ್ರವರಿ 09: 2024 ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಇತ್ತ ಬಿಜೆಪಿಗೆ 24 ಹಾಗೂ ಜೆಡಿಎಸ್ ಗೆ 4 ಕ್ಷೇತ್ರಗಳ ಕುರಿತು ಚರ್ಚೆಯಾಗಿದ್ದು, ಫೆಬ್ರವರಿ 10 ರ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ. ಈ ವೇಳೆ ಪ್ರತಿಷ್ಠೆಯ ಕ್ಷೇತ್ರವಾದ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನ ಅಂತಿಮಗೊಳಿಸಲಿದ್ದಾರೆ.
ಹೌದು, ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಪ್ಲಾನ್ ನಡೆಸಿದ್ದು, ಇತ್ತ 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಈ ಹಿಂದೆ ಅಮಿತ್ ಶಾ, ನಡ್ಡಾ ಭೇಟಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಈ ವೇಳೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಸಹ ಭೇಟಿಯಾಗಿದ್ರು, ಈ ಸಂದರ್ಭದಲ್ಲಿ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದ್ದರು.

ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾತುಕತೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪುತ್ರನನ್ನ ಬಿಜೆಪಿ ಹೈಕಮಾಂಡ್ ನಾಯಕರ ಭೇಟಿಗೆ ಕರೆದುಕೊಂಡು ಹೋಗಿದ್ದು, ಹಲವು ಅನುಮಾನಗನ್ನ ಮೂಡಿಸಿದೆ. ಮಂಡ್ಯ ಕ್ಷೇತ್ರ ದಳಪತಿಗಳ ಭದ್ರಕೋಟೆಯಾಗಿದ್ದು, ಈ ಕ್ಷೇತ್ರವನ್ನ ಮರಳಿ ಪಡೆಯುವ ನಿಟ್ಟಿನಲ್ಲಿ ಹೆಚ್ ಡಿ ದೇವೇಗೌಡ್ರು ಹಾಗೂ ಕುಮಾರಸ್ವಾಮಿ ಪ್ಲಾನ್ ನಡೆಸಿದ್ದು, ಅದರಂತೆ ಅಮಿತ್ ಶಾ ಜೊತೆಗೆ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದಳಪತಿಗಳು ಸರ್ವೆ ನಡೆಸಿದ್ದು, ಜೆಡಿಎಸ್ ನಾಯಕರಿಗೆ ಭಾರೀ ಜನ ಬೆಂಬಲ ಸಿಕ್ಕಿದೆ ಎಂದು ಸಮೀಕ್ಷೆ ತಿಳಿಸಿದೆ.
ಲೋಕಸಮರಕ್ಕೆ ಬಿಜೆಪಿ ಜತೆ ಮೈತ್ರಿಯಾದ ಜೆಡಿಎಸ್ ನಿಂದ ಹಳೇ ಮೈಸೂರು ಭಾಗದಲ್ಲಿ ತನ್ನ ಪ್ರಬಾಲ್ಯವನ್ನ ಹೆಚ್ಚಿಸಿಕೊಳ್ಳಲು ಮಾಸ್ಟರ್ ಪ್ಲಾನ್ ನಡೆಸಿದ್ದಾರೆ. ಇನ್ನು ದಿನದಿಂದ ದಿನಕ್ಕೆ ಹಳೇ ಮೈಸೂರು ಭಾಗದಲ್ಲಿ ವರ್ಚಸ್ಸು ಕಡಿಮೆಯಾಗುತ್ತಿದ್ದು, ತನ್ನ ವರ್ಚಸ್ಸನ್ನ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಹಳೇ ಮೈಸೂರು ಭಾಗದ ಆರು ಕ್ಷೇತ್ರಗಳನ್ನ ದಳಪತಿಗಳು ಬಿಜೆಪಿ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದಾರೆ. ಇದರಲ್ಲಿ ಮಂಡ್ಯ ಹಾಗೂ ಹಾಸನ ಪ್ರಮುಖವಾದ ಕ್ಷೇತ್ರಗಳಾಗಿದೆ.

ಈಗಾಗಲೇ ಹಾಸನ ಲೋಕಸಭಾ ಕ್ಷೇತ್ರ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರನ್ನ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ್ರು ಘೋಷಿಸಿದ್ದಾರೆ. ಇತ್ತ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಸಿದ್ದಾರೆ. ಹೀಗಾಗಿ ದಳಪತಿಗಳು ಹಾಸನ ಕ್ಷೇತ್ರದಿಂದಲೂ ಸರ್ವೆ ನಡೆಸಿದ್ದು, ಸಮೀಕ್ಷೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಒಲವು ಕೇಳಿ ಬಂದಿದೆ.
ಇನ್ನೂ 2019 ರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಅವರು ಸುಮಲತಾ ಅವರ ವಿರುದ್ಧ ಸ್ಪರ್ಧಿಸಿ ಸೋಲು ಅನುಭವಿಸಿದ್ರು. ಆದರೆ, 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಜೆಡಿಎಸ್ ಕಾರ್ಯಕರ್ತರಿಂದ ಸಾಕಷ್ಟು ಒತ್ತಡ ಕೇಳಿ ಬಂದ ಹಿನ್ನಲೆ, ದಳಪತಿಗಳು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿದ್ದಾರೆ. ಈ ಸರ್ವೆಯಲ್ಲಿ ಮಂಡ್ಯ ಜನತೆ ಜೆಡಿಎಸ್ ಪರವಾಗಿ ಭಾರೀ ಒಲವು ವ್ಯಕ್ತಪಡಿಸಿದ್ದು, ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಒತ್ತಡ ಕೇಳಿ ಬಂದಿದೆ ಎನ್ನಲಾಗಿದೆ.












Click it and Unblock the Notifications