ಸಿದ್ದರಾಮಯ್ಯ ಭೇಟಿಯಾದ ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು, ಏಪ್ರಿಲ್ 05 : ಮಂಡ್ಯದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಏಪ್ರಿಲ್ 18ರಂದು ಮಂಡ್ಯ ಕ್ಷೇತ್ರದ ಚುನಾವಣೆ ನಡೆಯಲಿದೆ.
ಶುಕ್ರವಾರ ರಾತ್ರಿ ಸಿದ್ದರಾಮಯ್ಯ ನಿವಾಸ ಕಾವೇರಿಗೆ ನಿಖಿಲ್ ಕುಮಾರಸ್ವಾಮಿ ಆಗಮಿಸಿದ್ದರು. ಪ್ರಚಾರದಲ್ಲಿ ತೊಡಗುವಂತೆ ಬಿಳಿ ಪಂಚೆ ಉಟ್ಟು ನಿಖಿಲ್ ಆಗಮಿಸಿದ್ದರು. ಮಂಡ್ಯದಲ್ಲಿ ತಮ್ಮ ಪರವಾಗಿ ಪ್ರಚಾರ ಮಾಡಲು ಆಗಮಿಸಬೇಕು ಎಂದು ಮನವಿ ಮಾಡಿದರು.
ಇಂದು ಕಾಂಗ್ರೆಸ್ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು ಆದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. ರಾಜಕೀಯ ಕ್ಷೇತ್ರದಲ್ಲಿ ಈಗ ಕಾಲಿಡುತ್ತಿರುವ ನಂಗೆ ಅವ್ರು ತುಂಬಾ ಆತ್ಮೀಯತೆಯಿಂದ ಮಾತಾಡಿಸಿ, ಆಶೀರ್ವದಿಸಿದರು. ಇಂತಹ ಹಿರಿಯ ಮುತ್ಸದ್ದಿಗಳ ಮಾರ್ಗದರ್ಶನ ನನಗೆ ಬೇಕೇಬೇಕು ಎಂದು ನಿಖಿಲ್ ಕುಮಾರಸ್ವಾಮಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, 'ತುಂಬಾ ಆತ್ಮೀಯತೆಯಿಂದ ಮಾತನಾಡಿದರು. ನನ್ನ ಪರವಾಗಿ ಪ್ರಚಾರಕ್ಕೆ ಬರುವಂತೆ ಮನವಿ ಮಾಡಿದೆ. ಏಪ್ರಿಲ್ 12ರಂದು ಮಂಡ್ಯದಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ' ಎಂದು ಹೇಳಿದರು.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೆ ಬರುವಂತೆ ಅನಿತಾ ಕುಮಾರಸ್ವಾಮಿ ಅವರು ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದರೆ, ಮೈಸೂರು ಮತ್ತು ಚಿತ್ರದುರ್ಗಕ್ಕೆ ಹೋಗಬೇಕಿದ್ದ ಕಾರಣ ಸಿದ್ದರಾಮಯ್ಯ ಮಂಡ್ಯಕ್ಕೆ ಆಗಮಿಸಿರಲಿಲ್ಲ.
ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಸಿದ್ದರಾಮಯ್ಯ ನಿರಂತರ ಸಭೆಗಳನ್ನು ನಡೆಸುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಸಹಕರಿಸಬೇಕು ಎಂದು ಸೂಚನೆಗಳನ್ನು ನೀಡುತ್ತಿದ್ದಾರೆ. ನಿಖಿಲ್ ಪರವಾಗಿ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಪ್ರಚಾರ ನಡೆಸುತ್ತಿದ್ದಾರೆ.












Click it and Unblock the Notifications