ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ; ನಿಖಿಲ್ ಕುಮಾರಸ್ವಾಮಿ ಹೇಳಿಕೆ
ಬೆಂಗಳೂರು, ಫೆಬ್ರವರಿ 12: 2019 ರ ಲೋಕಸಭಾ ಚುನಾವಣೆ ಹಾಗೂ 2023 ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮುಂದಿನ ಲೋಕಸಭಾ ಚುಣಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ಜೋರಾಗಿದೆ. ಈಗಾಗಲೇ ಕೆಲ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರವಾಸ ಕೈಗೊಂಡಿರುವುದು ಚುನಾವಣಾ ಸ್ಪರ್ಧೆಗೆ ಸಿದ್ದತೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿ, ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಮಂಡ್ಯದಿಂದ ಸ್ಪರ್ಧೆ ಮಾಡುವ ಕುರಿತು ಪ್ರತಿಕ್ರಿಯಿಸಿದ್ದಾರೆ.

ನಾನು ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಇದನ್ನು ಹಿಂದೆಯೂ ಹೇಳಿದ್ದೆ. ಅತ್ಯಂತ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದೇನೆ. ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ. 2019ರಲ್ಲಿ ನಾನು ಕ್ಷೇತ್ರದ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ, ಕಾರ್ಯಕರ್ತರ ಪ್ರೀತಿ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಕಳೆದ ನಾಲ್ಕು ದಿನಗಳಿಂದಲೂ ನಾನು ಈ ಬಗ್ಗೆ ಬರುತ್ತಿರುವ ಸುದ್ದಿ, ವದಂತಿಗಳನ್ನು ಗಮನಿಸುತ್ತಿದ್ದೇನೆ. ಆದರೆ, ನಾನು ಯು ಟರ್ನ್ ಹೊಡೆಯುವ ಪೈಕಿ ಅಲ್ಲ ಎಂದು ನೇರವಾಗಿ ಹೇಳಲು ಬಯಸುತ್ತೇನೆ. ನನ್ನ ನಿರ್ಧಾರದಲ್ಲಿ ನನಗೆ ಸ್ಪಷ್ಟತೆ ಇದೆ. ನೀವು ಬರಬೇಕು, ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಂಡ್ಯ ಮುಖಂಡರು, ಕಾರ್ಯಕರ್ತರು ಕರೆಯುತ್ತಿದ್ದಾರೆ. ಅವರ ಪ್ರೀತಿ, ವಿಶ್ವಾಸ ಹಾಗೂ ಒತ್ತಡದ ಕಾರಣವಾಗಿ ನಾನು ಮಂಡ್ಯ ಭಾಗದಲ್ಲಿ ಪಕ್ಷ ಸಂಘಟನೆಗಾಗಿ ಓಡಾಡಿದ್ದೆ. ಜೆಡಿಎಸ್ - ಬಿಜೆಪಿ ಮೈತ್ರಿಯನ್ನು ಬಲಪಡಿಸಬೇಕು, ಮತ್ತೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಹೀಗಾಗಿ ನನ್ನ ಗಮನ ರಾಜ್ಯದ 28 ಲೋಸಭೆ ಕ್ಷೇತ್ರಗಳ ಕಡೆಯೂ ಇರುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ಮಂಡ್ಯ, ಹಾಸನದಲ್ಲಿ ಜೆಡಿಎಸ್ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ಅವರ ವಿರೋಧವಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ನಾಯಕರು, ನಮ್ಮ ಪಕ್ಷದ ವರಿಷ್ಠರು ಅತೀ ಶೀಘ್ರದಲ್ಲೇ ಇಂತಹ ಎಲ್ಲ ಪ್ರಶ್ನೆಗಳಿಗೂ ತೆರೆ ಎಳೆಯುತ್ತಾರೆ. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಬೇಕು, ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಪ್ರೀತಂಗೌಡರ ಹೇಳಿಕೆ ಸಂತೋಷಕರ. ಆದರೆ ಇದನ್ನು ಕೇಂದ್ರದ ನಾಯಕರು, ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಎಲ್ಲಕ್ಕೂ ಕಾಲ ಉತ್ತರಿಸುತ್ತದೆ ಎಂದ ಅವರು; ಏನೇ ಪ್ರಶ್ನೆ ಕೇಳಿದರೂ ಕಾಲವೇ ಉತ್ತರಿಸುತ್ತದೆ ಎಂದು ಮಾರ್ಮಿಕವಾಗಿ ಉತ್ತರ ಕೊಟ್ಟರು.
ಮಂಡ್ಯ ಜೆಡಿಎಸ್ ನಲ್ಲಿ ಗಂಡಸರು ಯಾರೂ ಇಲ್ವಾ? ಎಂಬ ಮದ್ದೂರು ಶಾಸಕ ಕದಲೂರು ಉದಯ್ ಹೇಳಿಕೆ ಬಗ್ಗೆ ಬಗ್ಗೆ ಕೇಳಲಾದ ಪ್ರಶ್ನೆಗೂ; ಇರಲಿ, ಅದಕ್ಕೂ ಕಾಲವೇ ಉತ್ತರಿಸುತ್ತದೆ ಎಂದ ಅವರು, ತೆರಿಗೆ ಹಂಚಿಕೆ ಬಗ್ಗೆ ಕಾಂಗ್ರೆಸ್ ಪಕ್ಷವು ಉತ್ತರ ಕೊಡಿ ಎಂದು ಅಮಿತ್ ಶಾ ಅವರನ್ನು ಒತ್ತಾಯ ಮಾಡುತ್ತಿರುವ ಕುರಿತು ಮಾತನಾಡಿ, ಹಣಕಾಸು ಆಯೋಗಗಳು ಸ್ವಾಯತ್ತ ಸಂಸ್ಥೆಗಳು. ಸ್ವತಂತ್ರ್ಯವಾಗಿ ಕೆಲಸ ಮಾಡುತ್ತೇವೆ. ರಾಜ್ಯಗಳಿಗೆ ತೆರಿಗೆ, ಅನುದಾನ ಹಂಚಿಕೆ ಬಗ್ಗೆ ಹಣಕಾಸು ಆಯೋಗದ ಶಿಫಾರಸು ಅನ್ವಯ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಇದನ್ನೇ ರಾಜಕೀಯವಾಗಿ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಬಳಸಿಕೊಳ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ಜನರು ಈಗ ಬಹಳ ಪ್ರಜ್ಞಾವಂತರು, ಬುದ್ಧಿವಂತರಾಗಿದ್ದಾರೆ ಎಂದರು.












Click it and Unblock the Notifications