"ದೀಪಾವಳಿ ಹಬ್ಬದ ನಂತರವೇ ಮತ್ತೆ ಶಾಲೆಗಳು ಓಪನ್"
ಬೆಂಗಳೂರು, ಅಕ್ಟೋಬರ್ 08: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕೆನ್ನುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕಕ್ಷಕರ ಸಂಘದ ಮನವಿ ಮೇರೆಗೆ ಇದೇ ತಿಂಗಳು 18 ರವರೆಗೆ ಅಂದರೆ 10 ದಿನಗಳ ಕಾಲ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಕರ್ನಾಟಕ ಸರ್ಕಾರ ರಜೆ ಘೋಷಿಸಿದೆ. ಸಮೀಕ್ಷೆಗಾಗಿ ಶಾಲೆ ರಜೆ ವಿಸ್ತರಣೆ ಮಾಡಿರುವ ರಾಜ್ಯ ಸರ್ಕಾರದ ನಿಲುವನ್ನ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಖಂಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ, ಜಾತಿ ಗಣತಿ ಮುಖ್ಯ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಸಮೀಕ್ಷೆಯು ನಿಜವಾಗಿಯೂ ಸಾಮಾಜಿಕ ಕಲ್ಯಾಣದ ಬಗ್ಗೆ ಆಗಿದ್ದರೆ, ಬೇಸಿಗೆ ರಜೆಯ ಸಮಯದಲ್ಲಿ ಶಿಕ್ಷಣವನ್ನು ಅಡ್ಡಿಪಡಿಸದೆ ವ್ಯವಸ್ಥಿತವಾಗಿ ನಡೆಸಬಹುದಿತ್ತು. ಆದರೆ ಸರ್ಕಾರದ ಈ ನಿಲುವನ್ನು ನಿಖಿಲ್ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರಿ ಶಾಲೆಗಳು ದೀಪಾವಳಿಯ ನಂತರವೇ ಮತ್ತೆ ತೆರೆಯುತ್ತವೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಒಂದು ತಿಂಗಳ ಕಾಲ ಶಾಲೆಗಳಿಂದ ದೂರವಿರುತ್ತಾರೆ, ಆದರೆ ಖಾಸಗಿ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಇದು ಲಕ್ಷಾಂತರ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
2 ಕೋಟಿ ಮನೆಗಳಲ್ಲಿ ವಾಸಿಸುವ 7 ಕೋಟಿ ಜನರನ್ನು ಕೇವಲ 15 ದಿನಗಳಲ್ಲಿ ಸಮೀಕ್ಷೆ ಮಾಡಲು ಸಾಧ್ಯವಿಲ್ಲ ಎಂಬುದು ಸಮೀಕ್ಷೆ ಪ್ರಾರಂಭವಾಗುವ ಮೊದಲೇ ಸ್ಪಷ್ಟವಾಗಿತ್ತು. ಆದರೆ ಪೂರ್ವ ತಯಾರಿ ಇಲ್ಲದೆ ಯಾರದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ಮಾಡುತ್ತಿದೆ. ಜಾತಿಗಣತಿ ದಿನದಿಂದ ದಿನಕ್ಕೆ ಗೊಂದಲಮಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಸಮೀಕ್ಷೆಗಾಗಿ ಶಾಲಾ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಗಣತಿ ಮುಖ್ಯ ಎಂಬುದು ಇದರಿಂದ ಸ್ಪಷ್ಟ ತಿಳಿಯುತ್ತೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.












Click it and Unblock the Notifications