Nikhil Kumaraswamy: ಅಪ್ಪ, ಅಜ್ಜನ ಕರ್ಮಭೂಮಿ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ, ಈ ಕ್ಷೇತ್ರದಿಂದಲೇ ಸ್ಪರ್ಧೆ: ನಿಖಿಲ್ ಕುಮಾರಸ್ವ
Nikhil Kumaraswamy: ರಾಮನಗರ ನಮ್ಮ ತಂದೆಯ ಕರ್ಮಭೂಮಿ ಹಾಗೂ ನಮ್ಮ ತಾತನಿಗೆ ರಾಜಕೀಯ ಮರುಜನ್ಮ ನೀಡಿರುವ ಪುಣ್ಯಭೂಮಿಯಾಗಿದೆ. ಹೀಗಾಗಿ, ಆ ಮಣ್ಣನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯು ನನ್ನ ತಂದೆಯವರ ಕರ್ಮಭೂಮಿ. 1994ರಲ್ಲಿ ಹಾಸನದಿಂದ ಬಂದಂತಹ ನಮ್ಮ ತಾತ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿ ಅವರಿಗೆ ರಾಜಕೀಯವಾಗಿ ಮರುಜನ್ಮ ನೀಡಿದ ಪುಣ್ಯ ಭೂಮಿ ಆಗಿದೆ. ಅಂತಹ ಮಣ್ಣನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಭಾವುಕರಾಗಿ ಹೇಳಿದ್ದಾರೆ. ಈ ಮೂಲಕ ರಾಜಕೀಯ ಪ್ರವೇಶ ಹಾಗೂ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಮತ್ತೊಮ್ಮೆ ಮೌನ ಮುರಿದಿದ್ದಾರೆ.

ರಾಮನಗರದಲ್ಲಿ ಸಾವಿರಾರು ಕಾರ್ಯಕರ್ತರಿದ್ದಾರೆ
ರಾಮನಗರದಲ್ಲಿ ನನ್ನನ್ನೇ ನಂಬಿರುವ ಸಾವಿರಾರು ಜನ ಕಾರ್ಯಕರ್ತರಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ರಾಮನಗರದಲ್ಲಿನ ತಮ್ಮ ರಾಜಕೀಯ ಅಸ್ತಿತ್ವದ ಬಗ್ಗೆ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ ಅವರು. ಪಕ್ಷದ ಹಿರಿಯ ಮುಖಂಡರಿದ್ದಾರೆ ಮತ್ತು ನಮ್ಮ ಕುಟುಂಬವನ್ನು ಪ್ರೀತಿಸುವ ಒಂದು ದೊಡ್ಡ ವರ್ಗವೇ ಅಲ್ಲಿದೆ. ಅವರನ್ನು ನಡುನೀರಿನಲ್ಲಿ ಕೈಬಿಟ್ಟು ಬೇರೆ ಕ್ಷೇತ್ರಕ್ಕೆ ವಲಸೆ ಹೋಗುವ ಜಾಯಮಾನ ನಮ್ಮದಲ್ಲವೇ ಅಲ್ಲ. ಬೇರೆ ಯಾವುದೇ ಕ್ಷೇತ್ರದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
Nikhil Kumaraswamy: ಅಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೆ
ದೇವೇಗೌಡರ ಕುಟುಂಬ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಪಾರ ಶ್ರಮಿಸಿದೆ. ಅಲ್ಲಿನ ನೀರಾವರಿ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯಗಳ ವೃದ್ಧಿಗೆ ನಾವು ಪ್ರಾಮಾಣಿಕವಾಗಿ ದುಡಿದಿದ್ದೇವೆ. ಈ ಅಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೆಯಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಜನರ ವಿಶ್ವಾಸಗಳಿಸುತ್ತೇವೆ ಎಂಬ ಭರವಸೆಯನ್ನು ನಿಖಿಲ್ ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದ್ದಾರೆ.
Nikhil Kumaraswamy: ಚುನಾವಣೆ; ಸೋಲು - ಗೆಲುವು ಸಹಜ
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷಕ್ಕೆ ಸಣ್ಣಪುಟ್ಟ ಹಿನ್ನೆಡೆಗಳಾಗಿರಬಹುದು, ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ರಾಜಕೀಯದಲ್ಲಿ ಏರುಪೇರುಗಳು ಸರ್ವೇ ಸಾಮಾನ್ಯ. ಕಳೆದ ನಾಲ್ಕು ಚುನಾವಣೆಗಳಲ್ಲಿ ರಾಮನಗರದ ಜನತೆ ನಮ್ಮ ಕೈಬಿಟ್ಟಿರಲಿಲ್ಲ. ಆದರೆ ಕೆಲವೊಮ್ಮೆ ಕಾಲಘಟ್ಟದಲ್ಲಿ ಬದಲಾವಣೆಗಳಾಗುತ್ತವೆ. ಅದೆಲ್ಲವನ್ನೂ ನಾವು ಸಮತೋಲನದಿಂದ ಸ್ವೀಕರಿಸಬೇಕು ಎಂದು ತಿಳಿಸಿದ್ದಾರೆ.
ಜಾತಿಗಣತಿಯು ಕೇವಲ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ನಡೆಯಬೇಕೇ ಹೊರತು, ಇದು ರಾಜಕೀಯ ಉದ್ದೇಶದ ತಂತ್ರವಾಗಬಾರದು. ಸರ್ಕಾರದ ಲೋಪದೋಷಗಳು ಹಾಗೂ ಸಮಸ್ಯೆಗಳು ಎದುರಾದಾಗ ಜನರನ್ನು ದಿಕ್ಕು ತಪ್ಪಿಸಲು ಇಂತಹ ವಿಚಾರಗಳನ್ನು ಮುನ್ನೆಲೆಗೆ ತರುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಅವರು, ಜಾತಿಗಣತಿಯನ್ನು ನಾವು ಸ್ವಾಗತಿಸುತ್ತೇವೆ, ಆದರೆ ಈ ವರದಿಯು ಅತ್ಯಂತ ಪಾರದರ್ಶಕವಾಗಿರಬೇಕು, ಜನಪರವಾಗಿರಬೇಕೇ ಹೊರತು ರಾಜಕೀಯ ಪ್ರೇರಿತವಾಗಿರಬಾರದು ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.











Click it and Unblock the Notifications