Channapatna By Election: ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ: ಭವಿಷ್ಯ ನುಡಿದ ಬಿ ಎಸ್ ಯಡಿಯೂರಪ್ಪ
ಬೆಂಗಳೂರು, ಅಕ್ಟೋಬರ್ 25: , ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಇದೆ. ಮೋದಿಯವರ ಪಕ್ಷದಿಂದ ಬೆಂಬಲ ಇರುವ ಕಾರಣ ಚನ್ನಪಟ್ಟಣದ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವು ಖಚಿತ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅಶೋಕ್ ಅವರು ಮತ್ತು ಎಲ್ಲ ಮುಖಂಡರು ಒಟ್ಟಾಗಿ ಸೇರಿದ್ದೇವೆ. ಇದು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯಲ್ಲ. ಚುನಾವಣೆಯಲ್ಲಿ ಗೆದ್ದು ಬಂದ ಬಳಿಕ ನಿಮ್ಮನ್ನು ಭೇಟಿ ಮಾಡುತ್ತೇವೆ ಎಂದು ವಿಶ್ವಾಸದಿಂದ ಹೇಳಿದರು.

ನಿಖಿಲ್ ಕುಮಾರಸ್ವಾಮಿಯವರು ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ಎನ್ಡಿಎ ಪಕ್ಷಗಳಾದ ಬಿಜೆಪಿ- ಜೆಡಿಎಸ್ ಪಕ್ಷಗಳ ಎಲ್ಲ ಪ್ರಮುಖರು ಒಟ್ಟಾಗಿ ಅಲ್ಲಿ ಪ್ರವಾಸ ಮಾಡುತ್ತೇವೆ. ನಾನು ಬೇರೆಯವರ ಬಗ್ಗೆ ಒಂದು ಶಬ್ದ ಮಾತನಾಡಲು ಇಷ್ಟ ಪಡುವುದಿಲ್ಲ ಎಂದು ತಿಳಿಸಿದರು. ಪಕ್ಷಾಂತರ ಮಾಡಿದವರ ಬಗ್ಗೆ ಮಾತನಾಡುವ ಅಗತ್ಯ ಇಲ್ಲ ಎಂದು ಮಾಜಿ ಸಿಎಂಬಿ ಎಸ್ ಯಡಿಯೂರಪ್ಪ ಹೇಳಿದರು.
ಮೂರು ಕ್ಷೇತ್ರದಲ್ಲಿ ನೂರಕ್ಕೆ ನೂರು ನಾವು ಗೆದ್ದೆ ಗೆಲ್ತಿವೆ. ವಾತಾವರಣ ನಮಗೆ ಅನುಕೂಲವಾಗಿದೆ. ಮೋದಿ ಅವರ ಪರವಾಗಿ ಜಗತ್ತೇ ನೋಡ್ತಾ ಇದೆ. ಜನರು ಸಹ ಮೋದಿ ಅವರ ಪರವಾಗಿ ಮತ ಹಾಕ್ತಾರೆ ಅನ್ನೋ ನಂಬಿಕೆ ಇದೆ. ಹೀಗಾಗಿ ಮೂರೂ ಕ್ಷೇತ್ರದಲ್ಲಿ ನಾವು ಗೆಲ್ತೇವೆ ಅನ್ನೋ ವಿಶ್ವಾಸ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
3 ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗೆ ತಕ್ಕ ಪಾಠ: ವಿಜಯೇಂದ್ರ
ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದರು.
ಸಂಡೂರಿನಲ್ಲಿ ಬಿಜೆಪಿ ಯುವ ಮುಖಂಡ ಬಂಗಾರು ಹನುಮಂತು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದು, ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಂಡೂರಿನಲ್ಲಿ ನಮ್ಮೆಲ್ಲ ಪಕ್ಷದ ಹಿರಿಯರು ಸೇರಿದ್ದಾರೆ. ಬಿಜೆಪಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ. ಜೆಡಿಎಸ್ ಪಕ್ಷವೂ ಸಂಪೂರ್ಣ ಸಹಕಾರ ನೀಡುತ್ತಿದೆ ಎಂದರು.
ಸಂಡೂರಿನಲ್ಲಿ ಹಿಂದೆಂದೂ ಬಿಜೆಪಿ ಕಮಲ ಅರಳಿಲ್ಲ. ಜನಾರ್ದನ ರೆಡ್ಡಿ, ಶ್ರೀರಾಮುಲು, ಸೋಮಶೇಖರ ರೆಡ್ಡಿ, ಎಲ್ಲ ಶಾಸಕರು, ಮಾಜಿ ಶಾಸಕರ, ವಿಧಾನಪರಿಷತ್ ಸದಸ್ಯರ, ಪಕ್ಷದ ಹಿರಿಯರ ಶ್ರಮದಿಂದ ಮೊದಲ ಬಾರಿಗೆ ಇಲ್ಲಿ ನಿಶ್ಚಿತವಾಗಿ ಬಿಜೆಪಿಯ ಕಮಲದ ಹೂ ಅರಳಲಿದೆ. ನಮ್ಮೆಲ್ಲರ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಶ್ರಮದಿಂದ ಗೆಲುವು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಯವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಚನ್ನಪಟ್ಟಣದಲ್ಲಿ ರಾಜ್ಯದ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಸಂಡೂರಿನಲ್ಲಿ ರಾಜ್ಯ ಎಸ್ಟಿ ಮೋರ್ಚಾ ಅಧ್ಯಕ್ಷ ಮತ್ತು ಯುವ ಮುಖಂಡ ಬಂಗಾರು ಹನುಮಂತು ಅವರು ಎಲ್ಲ ಪ್ರಮುಖರ ಸಮ್ಮುಖದಲ್ಲಿ ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ.
ರಾಜ್ಯ ರಾಜಕೀಯದ ದಿಕ್ಸೂಚಿಯನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳ ಉಪ ಚುನಾವಣೆಗೆ ಇದೆ. ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಳು ರಾಜಕೀಯ ದಿಕ್ಕನ್ನು ಬದಲಿಸುವ ಶಕ್ತಿ ಹೊಂದಿವೆ. ರಾಜ್ಯದಲ್ಲಿ ರೈತರ ವಿರೋಧಿ ಸರಕಾರ ಇದೆ. ಬರಗಾಲ ಇದ್ದಾಗಲೂ ಈ ಸರಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ನೆರೆ ಇದ್ದರೂ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಮೆಕ್ಕೆಜೋಳ, ಮೆಣಸಿನ ಕಾಯಿ, ಹತ್ತಿ ಬೆಳೆಗಾರರು ಕಂಗಾಲಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಜ್ಯ ಸರಕಾರ ಕೇಂದ್ರ ಸರಕಾರದ ಕಡೆ ಬೊಟ್ಟು ಮಾಡಿ ಕುಳಿತಿದೆಯೇ ವಿನಾ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕತೆಯನ್ನು ತೋರಿಸುತ್ತಿಲ್ಲ. ಸಿದ್ದರಾಮಯ್ಯರದು ರೈತವಿರೋಧಿ, ಬಡವರ ವಿರೋಧಿ ಸರಕಾರ. ಮತ್ತೊಂದು ಕಡೆ ಎಸ್ಇಪಿ, ಟಿಎಸ್ಪಿ ಹಣವನ್ನು ಬೇರೆ ಬೇರೆ ಕಾರ್ಯಕ್ರಮಗಳಿಗೆ ವರ್ಗಾಯಿಸಿದ್ದಾರೆ. ಅಹಿಂದ ಹೆಸರು ಹೇಳಿ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರು ಪರಿಶಿಷ್ಟ ಜಾತಿ, ಪಂಗಡಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.












Click it and Unblock the Notifications