Channapatna By Election: 'ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಚದುರಂಗದಾಟ ಸೃಷ್ಟಿ'
ಬೆಂಗಳೂರು, ಅಕ್ಟೋಬರ್ 25: ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು.
ಸದಾಶಿವನಗರದ ನಿವಾಸದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಸುರೇಶ್ ಅವರು ಮಾತನಾಡಿ, ಹಿರಿಯ ರಾಜಕಾರಣಿಯಾದ ಕುಮಾರಸ್ವಾಮಿ ಅವರು ಕಳೆದ 40 ವರ್ಷಗಳಿಂದ ಅವರ ದೃಷ್ಟಿಕೋನದಲ್ಲಿ ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಇದರ ಮುಂದುವರೆದ ಭಾಗವಿದು. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುತ್ತಾರೆ ಎನ್ನುವುದು ಚನ್ನಪಟ್ಟಣದ ಎಲ್ಲರಿಗೂ ತಿಳಿದಿದ್ದ ಸತ್ಯ ಎಂದರು

ನಿಖಿಲ್ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎನ್ನುವ ಸತ್ಯ ಎಲ್ಲರಿಗೂ ತಿಳಿದಿತ್ತು. ಜೆಡಿಎಸ್ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲಾ ಸುಳ್ಳು, ಅವರ ಉದ್ದೇಶ ಈ ಮೂಲಕ ಫಲ ನೀಡಿದೆ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.
ನಾಟಕ ಮಾಡಿ ನಿಖಿಲ್ ಕುಮಾರಸ್ವಾಮಿ ಗೆ ಟಿಕೆಟ್ ಗಳಿಸಿಕೊಂಡರೇ ಎಂದು ಮಾಧ್ಯಮಗಳ ಪ್ರಶ್ನೆಗೆ ಡಿ ಕೆ ಸುರೇಶ್ ಉತ್ತರಿಸಿ, ಅದನ್ನು ಮಾಧ್ಯಮದವರು ಹೇಳಬೇಕು. ನಾಮಪತ್ರ ಸಲ್ಲಿಸಿದ ನಂತರ ನಾಟಕ ಪ್ರಾರಂಭವಾಗುತ್ತದೆ ಎಂದು ತಿಳಿದ ಅವರು, ಕಣ್ಣೀರು ಬರಬಹುದೇನೋ, ಮಾಧ್ಯಮದವರು ಕಣ್ಣೀರು ಹಾಕಿ ಎಂದರೆ ಹಾಕುತ್ತಾರೆ" ಎಂದು ವ್ಯಂಗ್ಯವಾಗಿ ಉತ್ತರಿಸಿದರು.
ನಿಖಿಲ್ ಪ್ರಬಲ ಅಭ್ಯರ್ಥಿಯಾಗಬಲ್ಲರೇ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಡಿ ಕೆ ಸುರೇಶ್ ಉತ್ತರಿಸಿ, ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದರಿಂದ ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರ ಮೇಲಿನ ಪ್ರೀತಿ ಎಷ್ಟಿದೆ ಎಂಬುದು ತಿಳಿಯುತ್ತದೆ. ಚುನಾವಣೆಯಲ್ಲಿ ಒಂದೊಂದು ಮತವೂ ಮುಖ್ಯ ಎಂದು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಯಾರು ಪ್ರಭಾವಿಗಳು ಎನ್ನುವುದಕ್ಕಿಂತ, ನಾವು ಪಕ್ಷವನ್ನು ಗೆಲ್ಲಿಸಲು ಹೋರಾಟ ಮಾಡುತ್ತೇವೆ ಎಂದರು.
ಒಂದು ವಾರಗಳ ಕಾಲ ದೇವೇಗೌಡರು ಚನ್ನಪಟ್ಟಣದಲ್ಲಿ ಪ್ರಚಾರ ಮಾಡುವುದುರಿಂದ ಕಾಂಗ್ರೆಸ್ ಗೆಲುವಿಗೆ ತೊಡಕಾಗುವುದಿಲ್ಲವೇ ಎಂದಾಗ "ದೇವೇಗೌಡರು ಇರುವುದೇ ಪ್ರಚಾರ ಮಾಡುವುದಕ್ಕೆ. ಅವರ ಮೊಮ್ಮಗನ ಪರವಾಗಿ ಪ್ರಚಾರ ಮಾಡಬೇಡಿ ಎಂದು ಹೇಳಲು ಆಗುತ್ತದೆಯೇ?. ನಾವು ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತೇವೆ" ಎಂದು ಹೇಳಿದರು.
ನೀವು ಅಭ್ಯರ್ಥಿಯಾಗಿಲ್ಲ ಎನ್ನುವ ಬೇಸರ ಹಾಗೂ ಪಕ್ಷದೊಳಗಿನ ಅಸಮಾಧಾನ ಸರಿಹೋಯಿತೇ ಎಂದು ಕೇಳಿದಾಗ "ಪಕ್ಷದಲ್ಲಿ ಸಣ್ಣ ಬೇಸರವಿದೆ ಹೊರತು ಯಾವುದೇ ಅಸಮಾಧಾನವಿಲ್ಲ. ನಾನು ಮೊದಲಿನಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇ, ಮಾಧ್ಯಮದವರೇ ನನ್ನ ಹೀರೋ ಮಾಡುತ್ತಿದ್ದಾರೆ ಎಂದರು.
ಸಿ ಪಿ ಯೋಗೇಶ್ವರ್ ಅವರಿಗೆ ನೀವೇ ಸಾಥ್ ಕೊಡುತ್ತಿದ್ದೀರಿ ಎಂದಾಗ "ಯಾರಾದರೊಬ್ಬರು ಸಾಥ್ ನೀಡಲೇ ಬೇಕಲ್ಲವೇ? ಚುನಾವಣಾ ಹೊಣೆಯನ್ನು ನಾನೇ ಹೊತ್ತಿದ್ದೇನೆ" ಎಂದರು.
ಬೆಂಗಳೂರು ಗ್ರಾಮಾಂತರ ಬಿಟ್ಟ ಕ್ಷಣದಿಂದ ಸಂತೋಷವಾಗಿದ್ದೇನೆ. ಬೇರೆಯವರು ಅವರ ಆಸ್ತಿ ಎಂದು ತಿಳಿದುಕೊಂಡಿರುವಂತೆ, ಕ್ಷೇತ್ರ ನಮ್ಮ ಅಪ್ಪನ ಆಸ್ತಿಯಲ್ಲ. ಕೆಲಸ ಮಾಡಲು ಸಾರ್ವಜನಿಕರು ಕೊಟ್ಟಿರುವ ಕೊಡುಗೆ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಈಗ ಬೇಡ ಎಂದು ಹೇಳಿದ್ದಾರೆ, ಅದನ್ನು ಮುಕ್ತ ಕಂಠದಿಂದ ಸ್ವಾಗತ ಮಾಡಿದ್ದೇನೆ ಎಂದು ಹೇಳಿದರು.












Click it and Unblock the Notifications