ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ನಿರಂಜನಾನಂದಪುರಿ ಶ್ರೀಗಳು
ಬೆಂಗಳೂರು, ಜೂನ್ 29: ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಪರ ಮಠಾಧೀಶರು ದನಿಯೆತ್ತುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಸರಾಗವಾಗಿ ನಡೆಯಬೇಕಾದರೆ, ಸಿದ್ದರಾಮಯ್ಯ ಅವರ ಸಹಕಾರ ಅಗತ್ಯ, ಸರ್ಕಾರದಲ್ಲಿ ಸಿದ್ದರಾಮಯ್ಯ ಅವರನ್ನು ನಿರ್ಲಕ್ಷ್ಯ ಮಾಡಬಾರದು. ಇಲ್ಲದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕಾಗಿನೆಲೆ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿರಂಜನಾನಂದಪುರಿ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.
ಹರಿಹರ ತಾಲೂಕಿನ ಬೆಳ್ಳೂಡಿ ಕನಕ ಮಠದಲ್ಲಿ ಮಾತನಾಡಿ, ಸಿದ್ದರಾಮಯ್ಯರನ್ನು ನಿರ್ಲಕ್ಷ್ಯ ಮಾಡಿದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ 15 ಸೀಟೂ ಬರುವುದಿಲ್ಲ. ಇದನ್ನು ಹೈಕಮಾಂಡ್ ಮತ್ತು ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅರ್ಥ ಮಾಡಿಕೊಳ್ಳಬೇಕು. ಇದು ಹೀಗೇ ಮುಂದುವರಿದರೆ ನಾವು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಸರ್ಕಾರದಲ್ಲಿ ಕುರುಬ ಸಮುದಾಯದವರಿಗೆ ಸೂಕ್ತ ಸಚಿವ ಸ್ಥಾನ ಸಿಕ್ಕಿಲ್ಲ. ಸಿದ್ದರಾಮಯ್ಯ ಸುಮ್ಮನೆ ಇದ್ದಾರೆ ಎಂದರೆ ಬೇರೆ ಅರ್ಥ ಇದೆ. ಮುಂದಿನ ಹೆಜ್ಜೆ ಇಡಲು ಟಗರು ರೆಡಿಯಾಗುತ್ತಿದೆ ಎಂದು ಅರ್ಥ. ಕುರುಬ ಸಮುದಾಯದ ಅಧಿಕಾರಿಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದ ನಂತರ ಕುರುಬ ಸಮುದಾಯದ ಅಧಿಕಾರಿಗಳನ್ನು ಗುರಿಯಾಗಿಟ್ಟುಕೊಂಡು ವರ್ಗಾವಣೆ ಮಾಡಲಾಗುತ್ತಿದೆ. ಒಂದು ಜಾತಿ ಜನಾಂಗದ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಕೈಗೊಂಡಿರುವ ದ್ವೇಷದ ಪ್ರಕ್ರಿಯೆ ಖಂಡನೀಯ. ಈ ಕಾರ್ಯವನ್ನು ಕೈ ಬಿಟ್ಟು ಸಾಮರಸ್ಯದಿಂದ ಆಡಳಿತ ನಡೆಸಿದರೆ ಸರ್ಕಾರಕ್ಕೆ ಒಳ್ಳೆಯದು. ಇಲ್ಲವಾದರೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.