Budget 2024: ಎನ್ ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್ ಮಂಡಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಜುಲೈ 23: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್ ಡಿಎ ಸರ್ಕಾರ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದಾಗಿದೆ. ಕರ್ನಾಟಕಕ್ಕೆ ಯಾವುದೇ ನೆರವು ನೀಡದೆ ಅವರ ಮೇಲಿದ್ದ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕೇಂದ್ರ ಬಜೆಟ್ ವಿಚಾರವಾಗಿ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, "ಈ ಬಜೆಟ್ ನಲ್ಲಿ ನಿರ್ಮಲಾ ಸೀತರಾಮನ್ ಅವರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲು ಬಿಹಾರ ಹಾಗೂ ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದು ಅತ್ಯಂತ ನಿರಾಶಾದಾಯಕ ಬಜೆಟ್. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ದೇಶವನ್ನು ಒಂದಾಗಿ ನೋಡಿಲ್ಲ ಎಂದು ಹೇಳಿದರು.

ಇಂಡಿಯಾ ಮೈತ್ರಿಕೂಟದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳನ್ನು ಕಡೆಗಣಿಸಿದ್ದಾರೆ. ಇದು ಕೇವಲ ಬಿಜೆಪಿ ಹಾಗೂ ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ನೆರವು ನೀಡುವ ಬಜೆಟ್ ಆಗಿದೆ. ಈ ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದೆ. ಇದು ಖಂಡನೀಯ ಡಿ ಕೆ ಶಿವಕುಮಾರ್ ಅವರು ಎಂದು ಟೀಕಿಸಿದರು.
ಪ್ರಧಾನಮಂತ್ರಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ನಾನು ಬಹಳಷ್ಟು ವಿಶ್ವಾಸ ಇಟ್ಟುಕೊಂಡಿದ್ದೆ. ಇಡೀ ವಿಶ್ವ ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಿದೆ. ಬೆಂಗಳೂರು ಹಾಗೂ ಕರ್ನಾಟಕ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡಿ ಜಾಗತಿಕ ಮಟ್ಟದಲ್ಲಿ ತನ್ನದೇ ಚಾಪು ಮೂಡಿಸಿದೆ. ಹೀಗಾಗಿ ಪ್ರಧಾನಮಂತ್ರಿಗಳು ಬೆಂಗಳೂರಿಗೆ ಮೂಲಸೌಕರ್ಯ ನೆರವು ಹಾಗೂ ಕರ್ನಾಟಕಕ್ಕೆ ಸಹಾಯ ಮಾಡುವ ಭರವಸೆ ಇಟ್ಟುಕೊಂಡಿದ್ದೆ.
ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕವನ್ನು ಪ್ರತಿನಿಧಿಸಿದ್ದು, ತಮ್ಮ ರಾಜ್ಯಕ್ಕೆ ಆದ್ಯತೆ ನೀಡುತ್ತಾರೆ. ಕರ್ನಾಟಕದ ಹಿತ ರಕ್ಷಣೆ ಮಾಡುತ್ತಾರೆ, ಬಾಕಿ ಇರುವ ಯೋಜನೆಗಳಿಗೆ ಅನುದಾನ ನೀಡುತ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೇಂದ್ರದ್ದು ತಾರತಮ್ಯ ಬಜೆಟ್ ರಾಜ್ಯದ ಪಾಲಿಗೆ ನಿರಾಸೆ
ಕರ್ನಾಟಕದ ರಾಜ್ಯಸಭಾ ಸದಸ್ಯೆಯೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ರಾಜ್ಯದ ನಿರೀಕ್ಷೆಯನ್ನು ಹುಸಿಗೊಳಿಸಿದ್ದು, ಇದೊಂದು ತಾರತಮ್ಯ ಬಜೆಟ್ ಆಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಕೇಂದ್ರ ಬಜೆಟ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಒಂದು ಕಣ್ಣಿಗೆ ಬೆಣ್ಣಿ, ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವಂತೆ ಬಜೆಟ್ ನಲ್ಲಿ ಕೆಲ ಅಂಶಗಳು ಬಿಂಬಿತವಾಗಿವೆ. ಎನ್ ಡಿಎ ಸರ್ಕಾರದ ಭಾಗವಾಗಿರುವ ಆಂಧ್ರ ಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಭರಪೂರ ಯೋಜನೆಗಳನ್ನು ಘೋಷಿಸಲಾಗಿದೆ. ಆದರೆ, ಕರ್ನಾಟಕ ಸೇರಿದಂತೆ ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳ ನಿರೀಕ್ಷೆ ಹುಸಿಯಾಗಿದೆ. ಕರ್ನಾಟಕದ ಬಾಕಿ ಇರುವ ಯೋಜನೆಗಳಿಗೂ ಅನುದಾನ ನೀಡಿಲ್ಲ ಎಂದು ತಿಳಿಸಿದ್ದಾರೆ.
ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ ನಡೆಸುತ್ತಿದೆ. ಆದರೂ, ಮತ್ತೆ ಮತ್ತೆ, ನಿರುದ್ಯೋಗ ಸಮಸ್ಯೆ ನಿವಾರಿಸುವ ಘೋಷಣೆಗಳು ಮರುಕಳಿಸುತ್ತಲೇ ಇವೆ. ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ 10 ಲಕ್ಷದವರೆಗೆ ಸಾಲ ಸೌಲಭ್ಯ ಘೋಷಿಸಲಾಗಿದೆ. ಆದರೆ, ಇದು ಬರೀ ಸಾಲದ ಮೊತ್ತ ಹೆಚ್ಚಳ ಮಾಡಲಾಗಿದೆ ಅಷ್ಟೇ. ರೈತರಿಗೆ ಘೋಷಿಸಲಾಗಿರುವ ಕಿಸಾನ್ ಕ್ರೆಡಿರ್ಟ್ ಕಾರ್ಡ್ ನಿಂದ ಯಾವುದೇ ಉಪಯೋಗವಿಲ್ಲ ಎಂದು ಸಚಿವರು ಹೇಳಿದ್ದಾರೆ.
ಪ್ರಮುಖವಾಗಿ ಕೇಂದ್ರ ಬಜೆಟ್ ನಲ್ಲಿ ಲೋಕಸಭಾ ಚುನಾವಣೆ ವೇಳೆ ನಮ್ಮ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಚುನಾವಣಾ ಪ್ರಣಾಳಿಕೆಯ ಅಂಶಗಳೇ ಹೆಚ್ಚಿವೆ. ನಮ್ಮ ಪ್ರಣಾಳಿಕೆಯನ್ನು ಅಂಶಗಳನ್ನು ಕೇಂದ್ರದ ಎನ್ ಡಿಎ ಸರ್ಕಾರ ಕಳವು ಮಾಡಿದೆ. ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಂತಹ ತುರ್ತು ಸಮಸ್ಯೆಗಳಿಗೆ ಸ್ಪಂದನೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.












Click it and Unblock the Notifications