ಕೇಂದ್ರ ಬಜೆಟ್ನಿಂದ ಬೆಂಗಳೂರು ಮತ್ತು ಕರ್ನಾಟಕಕ್ಕೆ ಸಿಕ್ಕಿದ್ದೇನು?- ನಿರ್ಮಲಾ ಸೀತಾರಾಮನ್ ಏನಂದ್ರು?
ಬೆಂಗಳೂರು, ಜುಲೈ 29:ಕೇಂದ್ರ ಬಜೆಟ್ನಿಂದ ಬೆಂಗಳೂರು ಮತ್ತು ಕರ್ನಾಟಕ ರಾಜ್ಯಕ್ಕೆ ಗರಿಷ್ಠ ಪ್ರಯೋಜನ ಲಭಿಸಲಿದೆ. ಸಂಶೋಧನೆ ಮತ್ತು ಅಭಿವೃದ್ಧಿ ನೆರವಿನಿಂದ ಬೆಂಗಳೂರಿಗೆ ಗರಿಷ್ಠ ಪ್ರಯೋಜನ ಸಿಗಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಖಾಸಗಿ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಗೂ ಇದರಿಂದ ಪ್ರಯೋಜನ ಲಭಿಸುತ್ತದೆ. ಕೃಷಿ ಕ್ಷೇತ್ರದ ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (ಡಿಪಿಐ) ಬಳಕೆಗೆ ಬೆಂಗಳೂರು ಗರಿಷ್ಠ ಕೊಡುಗೆ ನೀಡಲಿದೆ ಎಂದು ಹೇಳಿದರು.

ಬಾಹ್ಯಾಕಾಶ ಕೇಂದ್ರಕ್ಕೆ ದೊಡ್ಡ ಮೊತ್ತದ ನಿಧಿ (ವೆಂಚರ್ ಕ್ಯಾಪಿಟಲ್) ಕೊಟ್ಟಿದ್ದು, ಇಸ್ರೋ ಸಂಬಂಧಿತ ಕೆಲಸಗಳು ಇಲ್ಲಿಯೂ ನಡೆಯುತ್ತಿವೆ. ಇದು ಬೆಂಗಳೂರಿಗೆ ದೊಡ್ಡ ಪ್ರಮಾಣದಲ್ಲಿ ನೆರವು ಕೊಡಲಿದೆ ಎಂದರು. ಸ್ಟಾರ್ಟಪ್ಗಳ ಮೇಲಿನ ಏಂಜೆಲ್ ಟ್ಯಾಕ್ಸ್ ರದ್ದು ಮಾಡಿದ್ದು, ಇದು ಗರಿಷ್ಠ ಸ್ಟಾರ್ಟಪ್ಗಳನ್ನು ಹೊಂದಿದ ಬೆಂಗಳೂರಿಗೆ ನೆರವು ಕೊಡಲಿದೆ. ಏಂಜೆಲ್ ಟ್ಯಾಕ್ಸ್ ಅನ್ನು ಯುಪಿಎ ಸರಕಾರ 2012ರಲ್ಲಿ ಜಾರಿ ಮಾಡಿತ್ತು. ಇದೀಗ ಅದನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದರು.
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ವಿಚಾರದಲ್ಲಿ ತಪ್ಪು ಮಾಹಿತಿ ಕೊಡಲಾಗುತ್ತಿದೆ. ಕೇಂದ್ರ ಸರಕಾರವು ಕರ್ನಾಟಕಕ್ಕೆ ಅದರ ಭಾಗವನ್ನು ಕೊಡುತ್ತಿಲ್ಲ ಎಂದು ತಿಳಿಸುತ್ತಿದ್ದು, ಇದು ಸಂಪೂರ್ಣ ಸುಳ್ಳು ಎಂದು ಆಕ್ಷೇಪಿಸಿದರು.
ಕರ್ನಾಟಕ ಸರಕಾರವು ಜನರಿಗೆ ಈ ವಿಷಯದಲ್ಲಿ ಸಮರ್ಪಕ ಮಾಹಿತಿ ಕೊಡುತ್ತಿಲ್ಲ ಎಂದ ಅವರು, 2004-14ರ ಯುಪಿಎ ಆಡಳಿತದಲ್ಲಿ ಕರ್ನಾಟಕವು 81,791 ಕೋಟಿ ತೆರಿಗೆ ಹಂಚಿಕೆ ನೆರವು ಪಡೆದಿತ್ತು. ಆದರೆ, ಎನ್ಡಿಎ ಆಡಳಿತದ ಅಡಿಯಲ್ಲಿ 2014-24ರಲ್ಲಿ 2,95,818 ಕೋಟಿ ನೆರವು ಗಳಿಸಿದೆ ಎಂದು ಅಂಕಿಅಂಶಗಳೊಂದಿಗೆ ಸಮರ್ಥಿಸಿಕೊಂಡರು.
ಯುಪಿಎ 10 ವರ್ಷಗಳ ಅವಧಿಯಲ್ಲಿ ಅನುದಾನ ನೆರವು 60,779 ಕೋಟಿ ಇದ್ದರೆ, ಮೋದಿಯವರ ನಾಯಕತ್ವದ 10 ವರ್ಷಗಳ ಅವಧಿಯಲ್ಲಿ 2,36,955 ಕೋಟಿ ಕರ್ನಾಟಕಕ್ಕೆ ಸಿಕ್ಕಿದೆ. 2024-25ರಲ್ಲಿ ಕರ್ನಾಟಕಕ್ಕೆ 45,485 ಕೋಟಿ ತೆರಿಗೆ ಹಂಚಿಕೆ ಸಿಕ್ಕಿದೆ ಎಂದರು. ಯುಪಿಎ ಅವಧಿಯಲ್ಲಿ ಒಂದು ವರ್ಷಕ್ಕೆ 8,179 ಕೋಟಿ ಸಿಗುತ್ತಿದ್ದುದು ಈಗ ಮೋದಿಯವರ ಅವಧಿಯಲ್ಲಿ 45,485 ಕೋಟಿಗೆ ಏರಿದೆ. ತಪ್ಪು ಪ್ರಚಾರ ಮಾಡುವವರನ್ನು ಮಾಧ್ಯಮದವರು ಪ್ರಶ್ನಿಸಬೇಕು ಎಂದು ಮನವಿ ಮಾಡಿದರು.
ಯೇ ಗಲತ್ ಪ್ರಚಾರ್ ಕ್ಯೋಂ ಹೋ ರಹಾ ಹೇ? ವೈ ಈಸ್ ದ ರಾಂಗ್ ಪ್ರಚಾರ್ ಗೋಯಿಂಗ್ ಆನ್ ಎಂದು ಕೇಳಿದ ಅವರು, ಅನುದಾನ ಹಂಚಿಕೆ ವಿಚಾರದಲ್ಲೂ ಹೀಗಾಗಿದೆ ಎಂದರು. ಯುಪಿಎ ಅವಧಿಯಲ್ಲಿ ಅನುದಾನ ನೆರವು ಪ್ರತಿವರ್ಷಕ್ಕೆ ಸರಾಸರಿ 6,077 ಕೋಟಿ ಇತ್ತು. ಆದರೆ, 2024-25ರಲ್ಲಿ ನಾವು 15,300 ಕೋಟಿ ಕೊಡಲಿದ್ದೇವೆ. ನಗರಗಳ ಯೋಜಿತ ಅಭಿವೃದ್ಧಿ ವಿಚಾರದಲ್ಲೂ ಬೆಂಗಳೂರಿಗೆ ಪ್ರಯೋಜನ ಸಿಗಲಿದೆ. ನಗರಗಳ ಮನೆ ನಿರ್ಮಾಣದಲ್ಲೂ ಬೆಂಗಳೂರು ವಿಶೇಷ ಲಾಭ ಪಡೆಯಲಿದೆ. ಮಹಿಳಾ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದು, ಕೆಲಸ ಮಾಡುತ್ತಿರುವ ಮಹಿಳೆಯರಿಗಾಗಿ ಮಹಿಳಾ ಹಾಸ್ಟೆಲ್ ನಿರ್ಮಿಸಲಾಗುತ್ತದೆ ಎಂದು ತಿಳಿಸಿದರು.
ಎಂಎಸ್ಎಂಇಗಳು ದುಡಿಯುವ ಬಂಡವಾಳಕ್ಕೆ ವಾಣಿಜ್ಯ ಬ್ಯಾಂಕ್ಗಳಿಂದ ಸಾಲ ಪಡೆಯುತ್ತಿದ್ದವು. ಬ್ಯಾಂಕ್ಗಳು ಇನ್ನು ಮುಂದೆ ಯಂತ್ರೋಪಕರಣ, ಪೂರಕ ಉಪಕರಣ ಖರೀದಿಗೆ ಸಾಲ ಕೊಡಲಿವೆ. ಇದಕ್ಕೆ ಭದ್ರತೆಯ ಅವಶ್ಯಕತೆ ಇರುವುದಿಲ್ಲ. ವಾಣಿಜ್ಯ ಬ್ಯಾಂಕ್ಗಳು ಎಂಎಸ್ಎಂಇಯ ಕಾಲಕಾಲದ ಹಣದ ಅಗತ್ಯವನ್ನು ಗಮನಿಸುವುದಿಲ್ಲ ಎಂಬ ದೂರುಗಳಿದ್ದು, ಈ ಸಮಸ್ಯೆಯನ್ನು ದೂರ ಮಾಡಲು ಸಿಡ್ಬಿಯು ಪೀಣ್ಯದಂಥ ಕೈಗಾರಿಕಾ ಪ್ರದೇಶದಲ್ಲಿ ಶಾಖೆ ತೆರೆಯುವಂತೆ ಮಾಡುತ್ತೇವೆ ಎಂದು ಹೇಳಿದರು.
ಎಂಎಸ್ಎಂಇಗಳಿಗೆ ರಫ್ತು ಹಬ್ ತೆರೆಯಲಾಗುತ್ತದೆ. ಇದು ಜಾಗತಿಕ ಮಾರುಕಟ್ಟೆ ಹುಡುಕಾಟ ಮತ್ತು ರಫ್ತಿಗೆ ಸಣ್ಣ ಕೈಗಾರಿಕೆದಾರರ ನೆರವಿಗೆ ಬರಲಿದೆ ಎಂದರು. ಕಿರು ಮತ್ತು ಸಣ್ಣ ಕೈಗಾರಿಕೆಗಳು ಸರಿಯಾಗಿ ಕೆಲಸ ಮಾಡದೆ ಇದ್ದಾಗ ಕೇವಲ 45 ದಿನಗಳಲ್ಲಿ ಅಂಥ ಕೈಗಾರಿಕೆಯನ್ನು ಒತ್ತಡ ನಿರ್ವಹಣಾ ಖಾತೆ (ಎಸ್ಎಂಎ) ಅಡಿಯಲ್ಲಿ ಇಡಲಾಗುತ್ತಿತ್ತು. ಇದರಿಂದ ಬ್ಯಾಂಕಿನಿಂದ ಹಣ ಪಡೆಯಲಾಗದ ಸ್ಥಿತಿ ಉದ್ಭವವಾಗುತ್ತಿತ್ತು. ಈ ಸಮಸ್ಯೆ ಪರಿಹರಿಸಲು ಮೋದಿಜೀ ಅವರ ನೇತೃತ್ವದ ಕೇಂದ್ರ ಸರಕಾರವು ವಿಶೇಷ ನಿಧಿಯನ್ನು ಆರಂಭಿಸುತ್ತಿದೆ ಎಂದು ತಿಳಿಸಿದರು.
ಯುವಜನರಿಗೆ ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ಕೊಡಲಾಗಿದೆ. ಮೊದಲ ಬಾರಿಗೆ ಉದ್ಯೋಗ ಪಡೆಯುವವರಿಗೆ, ಉದ್ಯೋಗದಾತರಿಗೆ ಪ್ರಯೋಜನ, ಈಗಾಗಲೇ ಉದ್ಯೋಗ ಹೊಂದಿದ್ದು, ಬೇರೆಡೆ ಉದ್ಯೋಗ ಪಡೆಯುವವರು, ಉದ್ಯೋಗದಾತರಿಗೆ ಕೊಡುಗೆಗಳನ್ನು ನೀಡಿದ್ದು, ಇವೆಲ್ಲವೂ ಭವಿಷ್ಯನಿಧಿ ಸಂಘಟನೆ (ಇಪಿಎಫ್ಒ) ಮೂಲಕ ಜಾರಿ ಆಗಲಿವೆ. ಆಧುನಿಕ ಕೌಶಲ್ಯ ವೃದ್ಧಿಗೆ ರಾಜ್ಯಗಳ ಸಹಯೋಗದಲ್ಲಿ ಐಟಿಐಗಳನ್ನು ಬಳಸಿಕೊಳ್ಳಲಿದ್ದೇವೆ. ದೇಶದ ಸರ್ವಶ್ರೇಷ್ಠ (ಟಾಪ್) 500 ಕಂಪೆನಿಗಳಲ್ಲಿ ಇಂಟರ್ನ್ಶಿಪ್ ಅವಕಾಶವನ್ನೂ ಕಲ್ಪಿಸಲಾಗುತ್ತದೆ. ಉನ್ನತ ಶಿಕ್ಷಣಕ್ಕೆ 10 ಲಕ್ಷ ರೂ. ಸಾಲ ಕೊಡಲಿದ್ದು, ಇದರಿಂದ ಮಧ್ಯಮ ವರ್ಗದವರಿಗೆ ಪ್ರಯೋಜನ ಸಿಗಲಿದೆ ಎಂದು ತಿಳಿಸಿದರು.
ಯುವಜನತೆ, ಎಂಎಸ್ಎಂಇ, ಸಂಶೋಧನೆ ಮತ್ತು ಅಭಿವೃದ್ಧಿ, ಕೃಷಿ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿ, ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ಪಬ್ಲಿಕ್ ಇನ್ಫ್ರಾಸ್ಟ್ರಕ್ಚರ್ (ಡಿಪಿಐ) ಬಳಕೆ, ಬಾಹ್ಯಾಕಾಶಕ್ಕೆ ಗರಿಷ್ಠ ಅನುದಾನ, ಮಧ್ಯಮ ವರ್ಗಕ್ಕೆ ಪ್ರಯೋಜನಗಳನ್ನು ಈ ಬಜೆಟ್ ಕೊಟ್ಟಿದೆ. ಇದು ಕೇಂದ್ರ ಆಯವ್ಯಯ ಪತ್ರದ ವಿಸ್ತøತ ರೂಪ ಎಂದು ವಿಶ್ಲೇಷಿಸಿದರು. ಇ ಎಂದರೆ ಎಂಪ್ಲಾಯ್ಮೆಂಟ್, ಎಂ ಫಾರ್ ಮಿಡಲ್ ಕ್ಲಾಸ್- ಹೀಗೆ ಎಂಪ್ಲಾಯ್ಮೆಂಟ್ ಶಬ್ದದ ಪ್ರತಿ ಅಕ್ಷರವೂ ಈಡೇರುತ್ತಿದೆ.
ನೀತಿ ಆಯೋಗದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸಿದ್ದಾರೆ. ಅವರ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ ಆದರೆ, ಅವರ ಮೈಕ್ ಕೇಳಿಸದಂತೆ (ಆಫ್) ಮಾಡಿದ್ದಾಗಿ ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟ ಅವರು, ವಿಪಕ್ಷ ನಾಯಕರು ಸೇರಿ ಕರ್ನಾಟಕದ ಮುಖ್ಯಮಂತ್ರಿಯವರು ಅಲ್ಲಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಬೇಕಿತ್ತು. ಮಾತನಾಡುವ, ಅಭಿಪ್ರಾಯ ತಿಳಿಸುವ ಅವಕಾಶವನ್ನು ಬಳಸಿಕೊಳ್ಳಬೇಕಿತ್ತು ಎಂದು ಎಂದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications