ಡಿಕೆ ಶಿವಕುಮಾರ್ ಕುಟುಂಬಕ್ಕೆ ಧೈರ್ಯ ಹೇಳಿದ ಸ್ವಾಮೀಜಿಗಳು
Recommended Video
ಬೆಂಗಳೂರು, ಸೆಪ್ಟೆಂಬರ್ 10 : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧನವಾಗಿದೆ. ಹಲವು ಸ್ವಾಮೀಜಿಗಳು, ರಾಜಕೀಯ ನಾಯಕರು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಪ್ಟೆಂಬರ್ 3ರಂದು ಡಿ. ಕೆ. ಶಿವಕುಮಾರ್ ಬಂಧಿಸಿದ್ದಾರೆ. ಸೆಪ್ಟೆಂಬರ್ 13ರ ತನಕ ಅವರನ್ನು ಇಡಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸದ್ಯ ಅವರು ನವದೆಹಲಿಯಲ್ಲಿದ್ದಾರೆ.
ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿಗಳು ಮುಂತಾದವರು ಡಿ. ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ಹೇಳಿದ್ದಾರೆ. ಸೆಪ್ಟೆಂಬರ್ 13ರಂದು ಡಿ. ಕೆ. ಶಿವಕುಮಾರ್ರನ್ನು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಜಾಮೀನು ಸಿಗಲಿದೆಯೇ? ಎಂದು ಕಾದು ನೋಡಬೇಕಿದೆ.
ಡಿ. ಕೆ. ಶಿವಕುಮಾರ್ ಬಂಧಿಸುವಂತ ಕೆಟ್ಟ ಕೆಲಸಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಇಳಿಯುತ್ತದೆ ಎನ್ನುವುದು ಅವರ ವರ್ತನೆಯಿಂದ ನಮಗೆ ತಿಳಿದಿತ್ತು. ರಾಜಕೀಯ ಪ್ರೇರಿತವಾದ ಈ ಬಂಧನವನ್ನು ನಾವು ಖಂಡಿಸುತ್ತೇವೆ ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಧೈರ್ಯ ತುಂಬಿದ ನಿರ್ಮಲಾನಂದ ಸ್ವಾಮೀಜಿ
ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್ರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ಡಿ. ಕೆ. ಶಿವಕುಮಾರ್ ಪತ್ನಿ ಉಷಾ ಮತ್ತು ಕುಟುಂಬ ಸದಸ್ಯರಿಗೆ ಧೈರ್ಯ ಹೇಳಿದರು. ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ, ಪುತ್ರ ಆಕಾಶ್ ಮುಂತಾದವರು ಉಪಸ್ಥಿತರಿದ್ದರು.

ನಂಜಾವಧೂತ ಸ್ವಾಮೀಜಿ ಭೇಟಿ
ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಡಿ. ಕೆ. ಶಿವಕುಮಾರ್ ನಿವಾಸಕ್ಕೆ ನಂಜಾವಧೂತ ಸ್ವಾಮೀಜಿ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದರು. ಡಿ. ಕೆ. ಶಿವಕುಮಾರ್ ತಾಯಿ ಗೌರಮ್ಮ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ಎಚ್.ಡಿ.ಕುಮಾರಸ್ವಾಮಿ ಭೇಟಿ
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಡಿ.ಕೆ. ಶಿವಕುಮಾರ್ ತಾಯಿಯನ್ನು ಭೇಟಿ ಮಾಡಿದ್ದರು. ಡಿ. ಕೆ. ಶಿವಕುಮಾರ್ ತಾಯಿ ನನಗೂ ತಾಯಿ ಇದ್ದಂತೆ. ಅವರ ಕಷ್ಟನಷ್ಟಗಳಲ್ಲಿ ನಾನು ಜೊತೆಗಿದ್ದೇನೆ. ಕೇಂದ್ರ ಸರ್ಕಾರದ ಕುತಂತ್ರ ರಾಜಕಾರಣವನ್ನು ಎದುರಿಸುವ ಸಾಮರ್ಥ್ಯ ಡಿ.ಕೆ ಶಿವಕುಮಾರ್ ಅವರಿಗಿದೆ ಎಂದು ಹೇಳಿದ್ದರು.

ಕಾಂಗ್ರೆಸ್ ಬೆಂಬಲ
ರಾಜಕೀಯ ದ್ವೇಷದಿಂದ ಡಿ.ಕೆ ಶಿವಕುಮಾರ್ ಅವರನ್ನು ಬಂಧಿಸಿರುವುದನ್ನು ಕರ್ನಾಟಕ ಕಾಂಗ್ರೆಸ್ ವಿರೋಧಿಸಿದೆ. ನಾಯಕರುಗಳು, ಕಾರ್ಯಕರ್ತರು, ಅಭಿಮಾನಿಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ, ಕಾನೂನು ಸುವ್ಯವಸ್ಥೆ ಹಾಳಾಗದಂತೆ ಶಾಂತ ರೀತಿಯಲ್ಲಿ ವರ್ತಿಸಬೇಕು ಎಂದು ಪಕ್ಷದ ವಿವಿಧ ನಾಯಕರು ಕರೆ ನೀಡಿದ್ದಾರೆ.












Click it and Unblock the Notifications