Nisha Yogeshwar: ಉಪಚುನಾವಣೆ: ಕಾಂಗ್ರೆಸ್ಗೆ ಸಿ ಪಿ ಯೋಗೇಶ್ವರ್; ಬಿಜೆಪಿಯತ್ತ ನಿಶಾ ಯೋಗೇಶ್ವರ್?
ಬೆಂಗಳೂರು, ಅಕ್ಟೋಬರ್ 23: ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ಸಿಗದೆ ಹಿನ್ನೆಲೆ ಸಿ ಪಿ ಯೋಗೇಶ್ವರ್ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಆದರೆ, ಇದೀಗ ಪುತ್ರಿ ನಿಶಾ ಯೋಗೇಶ್ವರ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಗುಸು ಗುಸು ಶುರುವಾಗಿದೆ.
ಈ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಿಶಾ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ರು. ಆದರೆ, ಈ ಬಗ್ಗೆ ಡಿ ಕೆ ಶಿವಕುಮಾರ್ ಹೆಚ್ಚು ಆಸಕ್ತಿವಹಿಸಿರಲಿಲ್ಲ. ಇದೀಗ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದ ಬಳಿಕ, ನಿಶಾ ಯೋಗೇಶ್ವರ್ ಅವರು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇನ್ನೂ ಕಾಂಗ್ರೆಸ್ ಸೇರ್ಪಡೆ ಬಳಿಕ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು ಮಾತನಾಡಿ, ನನ್ನ ರಾಜಕೀಯ ಜೀವನವನ್ನು ನಾವು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಆರಂಭಿಸಿದ್ದೆ. ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಅದೇ ಸಂದರ್ಭ ನನಗೆ ಬಂದಿದೆ.
ನಾನಿದ್ದ ಬಿಜೆಪಿ ಜತೆಗೆ ಜೆಡಿಎಸ್ ಪಕ್ಷ ಸೇರಿಕೊಂಡ ನಂತರ ಎನ್ಡಿಎ ಮೈತ್ರಿಕೂಟದಲ್ಲಿ ಇದ್ದ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕವಾಗಿರಲಿಲ್ಲ ಎಂದು ಮನಗಂಡು ಸ್ವಯಂಪ್ರೇರಿತವಾಗಿ ಬೇಷರತ್ತಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದು ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಹೇಳಿದ್ದಾರೆ.
ಮಾಧ್ಯಮಗಳಲ್ಲಿ ರಾತ್ರಿ 12 ಗಂಟೆಗೆ ಭೇಟಿ ಮಾಡಿದ್ದಾರೆ ಎಂದು ವರದಿಯಾಗಿರುವುದನ್ನು ನೋಡಿದೆ. ನನಗೆ ಅಂತಹ ಅವಶ್ಯಕತೆ ಇಲ್ಲ. ನಾನು ಬೆಳಗ್ಗೆ 8 ಗಂಟೆಗೆ ಡಿ.ಕೆ. ಶಿವಕುಮಾರ್ ಅವರ ಮನೆಗೆ ಹೋಗಿ ನನ್ನ ವಿಚಾರ ಚರ್ಚೆ ಮಾಡಿದೆ. ನಂತರ ಶಿವಕುಮಾರ್ ಅವರು ನನ್ನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಕರೆದುಕೊಂಡು ಹೋದರು. ಅಲ್ಲಿಯೂ ಮಾತನಾಡಿದೆವು. ನಂತರ ಸುರೇಶ್ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾತನಾಡಿಸಿದರು. ಅವರ ಆಶೀರ್ವಾದ ಪಡೆದು ನನ್ನ ಮೂಲ ಪಕ್ಷಕ್ಕೆ ಸೇರಿದ್ದೇನೆ. ಇದರಲ್ಲಿ ಬಹಳ ವಿಶೇಷವಿಲ್ಲ.
ನನ್ನ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದು ನಮ್ಮ ಗುರಿ. ಡಿ.ಕೆ. ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಅವರು ಕಳೆದ ಮೂರ್ನಾಲ್ಕು ತಿಂಗಳಲ್ಲಿ ತೆಗೆದುಕೊಂಡಿರುವ ಹತ್ತು ಹಲವು ಅಭಿವೃದ್ಧಿ ಯೋಜನೆಗಳನ್ನು ಮೆಚ್ಚಿ. ಇದರಲ್ಲಿ ನಾನು ಕೈಬಿಟ್ಟು ಹೋಗುತ್ತಿದ್ದೇನೆ ಎಂದು ನಮ್ಮ ಜಿಲ್ಲೆ ಅಭಿವೃದ್ಧಿಯಲ್ಲಿ ನಾನು ಪಾಲುದಾರನಾಗಬೇಕು. ಸರ್ಕಾರದ ಜತೆ ಕೈಜೋಡಿಸಿ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಲು ಈ ತೀರ್ಮಾನ ಮಾಡಿದ್ದೇನೆ.
ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಪೂರಕವಾಗಿ ನಾನು ಕೆಲಸ ಮಾಡುತ್ತೇನೆ. ಇಷ್ಟು ದಿನಗಳ ಕಾಲ ಕಾಂಗ್ರೆಸ್ ಪಕ್ಷ ಬೆಳೆಸಲು ಶ್ರಮಿಸಿದ ಎಲ್ಲಾ ಪದಾಧಿಕಾರಿಗಳು ಸೇರಿ ನಾವು ಒಟ್ಟಾಗಿ ಹೋಗೋಣ. ಒಟ್ಟಾಗಿ ಕೆಲಸ ಮಾಡೋಣ. ಜಿಲ್ಲೆಯ ಅಭಿವೃದ್ಧಿಗೆ ಒಟ್ಟಾಗಿ ದುಡಿಯೋಣ ಎಂದು ಮನವಿ ಮಾಡುತ್ತೇನೆ. ಇಷ್ಟು ದಿನ ನಮ್ಮ ನಡುವೆ ಇದ್ದ ಟೀಕೆ ಟಿಪ್ಪಣಿ ಅಭಿವೃದ್ಧಿ ಪೂರಕವಾಗಿದ್ದವು. ಇನ್ನು ಮುಪಂದೆ ಜಿಲ್ಲೆಯ ಅಭಿವೃದ್ದಿಗಾಗಿ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳುತ್ತೇನೆ.
ನಾನು ಇಂದು ಪಕ್ಷಕ್ಕೆ ಸೇರಿದ್ದು, ಮುಂದೆ ಪಕ್ಷದ ಕಾರ್ಯಕರ್ತನಿಗೆ ಶ್ರಮಿಸುತ್ತೇನೆ. ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಅವರು ರಾಜಕೀಯದ ಆರಂಭಿಕ ದಿನಗಳಿಂದಲೂ ನಾನು ಅವರ ಜತೆಗಿದ್ದೇನೆ. ಎರಡುಮೂರು ಬಾರಿ ಸುರೇಶ್ ಅವರ ಗೆಲುವಿನಲ್ಲಿಯೂ ನನ್ನ ಪಾತ್ರವಿದೆ. ಒಂದು ಬಾರಿ ಅವರ ಸೋಲಿನಲ್ಲೂ ನನ್ನ ಪಾತ್ರವಿದೆ. ಮುಂದಿನ ದಿನಗಳಲ್ಲಿ ಸುರೇಶ್ ಅವರ ಗೆಲುವಿಗೆ ನಾನು ಶ್ರಮಿಸುತ್ತೇನೆ. ರಾಜಕಾರಣದಲ್ಲಿ ಏರಿಳಿತಗಳು ಇರುತ್ತವೆ. ಪಕ್ಷ ಬಿಟ್ಟ ನಂತರ ಅನೇಕ ಟೀಕೆ ಟಿಪ್ಪಣಿ ಬಂದಿರುತ್ತವೆ ನಾನದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇನೆ.












Click it and Unblock the Notifications