'ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲ'
ಬಾಗಲಕೋಟೆ, ಆ.21 : '2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಪಕ್ಷವಾಗಿ ಚುನಾವಣೆ ಎದುರಿಸಲಿದೆ. ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಸೋಮವಾರ ಬಾಗಲಕೋಟೆಯಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ಏನು ಮಾಡಿದೆ ಎಂಬುದು ಗೊತ್ತಿದೆ. ಬಿಜೆಪಿಗೆ ಕುಮಾರಸ್ವಾಮಿ ಬೆಂಬಲ ಕೊಟ್ಟಾಗ ಏನು ಮಾಡಿದೆ? ಎಂಬುದು ತಿಳಿದಿದೆ' ಎಂದರು.

'ನನಗಿನ್ನು ಛಲವಿದೆ, ಪಕ್ಷವನ್ನು ಸಂಘಟನೆ ಮಾಡಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ದೇವರು ಶಕ್ತಿ ಕೊಟ್ಟಿದ್ದಾನೆ, ಸ್ವತಂತ್ರವಾಗಿ ಸ್ಪರ್ಧಿಸಿ, ಬಹುಮತ ಪಡೆಯುತ್ತೇವೆ. ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ' ಎಂದು ದೇವೇಗೌಡರು ಸ್ಪಷ್ಟಪಡಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಹೊರಟ್ಟಿ ಅವರು, 'ಜಮೀರ್ ಅಹಮದ್ ಮತ್ತು ಟೀಮ್ ಪಕ್ಷ ಬಿಟ್ಟು ಹೋದರೆ ನಷ್ಟವಿಲ್ಲ. ಪರ್ಯಾಯ ಮುಖಂಡರು ಇದ್ದಾರೆ. ಅವರಿಗೆ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ನೀಡುತ್ತೇವೆ' ಎಂದು ತಿಳಿಸಿದರು.
ಜೆಡಿಎಸ್ ಈ ಬಾರಿ ಉತ್ತರ ಕರ್ನಾಟಕದ ಭಾಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ. ಕುಮಾರಸ್ವಾಮಿ ಮತ್ತು ಎಚ್.ಡಿ.ದೇವೇಗೌಡ ಇಬ್ಬರೂ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಉತ್ತರ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದ್ದು, ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದಾರೆ.












Click it and Unblock the Notifications