ಎಸಿಬಿ ಎಫ್ಐಆರ್ : ಯಡಿಯೂರಪ್ಪ ತಾತ್ಕಾಲಿಕ ರಿಲೀಫ್
Recommended Video
ಬೆಂಗಳೂರು, ಸೆಪ್ಟೆಂಬರ್ 01 : ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ಅವರನ್ನು ಸೆ.4ರ ತನಕ ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಸೆ.4ರ ತನಕ ಬಂಧಿಸಬಾರದು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.
ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ 2 ಎಫ್ಐಆರ್, ಏನಿದು ಪ್ರಕರಣ?
ಎಸಿಬಿ ಪರವಾಗಿ ವಾದ ಮಂಡನೆ ಮಾಡಿದ ಹಿರಿಯ ವಕೀಲ ರವಿವರ್ಮ ಕುಮಾರ್, 'ಮಧ್ಯಂತರ ತಡೆ ನೀಡುವಂತೆ ಕೋರಿರುವ ಅರ್ಜಿದಾರರ ಮನವಿಯನ್ನು ಈ ಹಂತದಲ್ಲಿ ಮಾನ್ಯ ಮಾಡಬಾರದು' ಎಂದು ವಾದ ಮಂಡನೆ ಮಾಡಿದರು.
ಯಡಿಯೂರಪ್ಪ ವಿರುದ್ಧ ಎಫ್ಐಆರ್, ರಾಜ್ಯಪಾಲರಿಗೆ ಬಿಜೆಪಿ ದೂರು
ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಮಾಡಲು ಮೀಸಲಿಟ್ಟ ಭೂಮಿಯನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಡಿನೋಟಿಫೈ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಯಡಿಯೂರಪ್ಪ ವಿರುದ್ಧ ಡಾ.ಡಿ.ಅಯ್ಯಪ್ಪ ಎಸಿಬಿಗೆ ದೂರು ನೀಡಿದ್ದರು.
ಈ ದೂರಿನ ಅನ್ವಯ ಎಸಿಬಿ ಯಡಿಯೂರಪ್ಪ ವಿರುದ್ಧ 2 ಎಫ್ಐಆರ್ ದಾಖಲು ಮಾಡಿದೆ. ಈ ಎಫ್ಐಆರ್ ರದ್ದುಗೊಳಿಸಬೇಕು ಎಂದು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.