ಡಿಕೆ ರವಿ ಪ್ರಕರಣ ಸಿಬಿಐ ತನಿಖೆ ಇಲ್ಲ : ಜಾರ್ಜ್
ಬೆಂಗಳೂರು, ಮಾ. 19 : ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಅಸಹಜ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಅವರು ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಜೆ ಜಾರ್ಜ್ ಅವರು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. [ಡಿಕೆ ರವಿ ಸಾವು, ರೆಡ್ಡಿ ವಿರುದ್ಧ ದೂರು]

ಸರ್ಕಾರ ಈಗಾಗಲೇ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಈ ಬಗ್ಗೆ ಎರಡೂ ಸದನದಲ್ಲಿಯೂ ಮಾಹಿತಿ ನೀಡಲಾಗಿದೆ. ತನ್ನ ನಿಲುವಿಗೆ ಸರ್ಕಾರ ಬದ್ಧವಾಗಿದ್ದು, ಸಿಬಿಐ ತನಿಖೆಗೆ ವಹಿಸುವುದಿಲ್ಲ ಎಂದು ಜಾರ್ಜ್ ಹೇಳಿದರು. ಈ ಮೂಲಕ ರಾಜ್ಯದ ಕೋಟ್ಯಾಂತರ ಜನರು ಬೇಡಿಕೆಯನ್ನು ಸರ್ಕಾರ ತಳ್ಳಿ ಹಾಕಿದೆ. [ಸರ್ಕಾರ ಸಿಬಿಐ ತನಿಖೆಗೆ ಏಕೆ ಹೆದರುತ್ತಿದೆ?]
ಸಭೆಯಲ್ಲಿ ಏನಾಯ್ತು : ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಸಚಿವರಲ್ಲಿ ಎರಡು ಬಣಗಳು ಸೃಷ್ಟಿಯಾಗಿವೆ. ಸಚಿವ ಸಂಪುಟ ಸಭೆಯಲ್ಲಿ ಒಂದು ಕಡೆ ಗೃಹ ಸಚಿವ ಕೆಜೆ ಜಾರ್ಜ್ ಸಿಬಿಐ ತನಿಖೆ ಬೇಡ ಎಂದು ಹೇಳಿದ್ದರು. ಆದರೆ, ರಾಜ್ಯಾದ್ಯಂತ ಬರುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸುವುದು ಉತ್ತಮ ಎಂದು ಹಲವು ಸಚಿವರು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದರು. [ಈ ಸಾವು ನ್ಯಾಯವೇ ಮತ ಹಾಕಿ]
ಅಂತಿಮವಾಗಿ ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಸಿದ್ದರಾಮಯ್ಯ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿ ಎಂದು ಎಲ್ಲಾ ಸಚಿವರು ಹೇಳಿದರು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಾರ್ಜ್ ಸಿಬಿಐ ತನಿಖೆಗೆ ಒಪ್ಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜನಾರ್ದನ ಪೂಜಾರಿ ಗರಂ : ಕರ್ನಾಟಕ ಸರ್ಕಾರ ಸಿಬಿಐ ತನಿಖೆಗೆ ವಹಿಸುವುದಿಲ್ಲ ಎಂದು ಹೇಳಿದರೆ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಹೇಳಿದ್ದಾರೆ. ಸಿಬಿಐ ತನಿಖೆಗೆ ವಹಿಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ.












Click it and Unblock the Notifications