ಲೋಕಾ ಹೆಸರು ಬದಲಾವಣೆ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಲೋಕಾಯುಕ್ತ ನೇಮಕ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ, ನ್ಯಾ. ವಿಶ್ವನಾಥ ಶೆಟ್ಟಿ ಅವರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ.
ಬೆಂಗಳೂರು ಜನವರಿ 20: ಲೋಕಾಯುಕ್ತ ನೇಮಕ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ, ನ್ಯಾ. ವಿಶ್ವನಾಥ ಶೆಟ್ಟಿ ಅವರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ, ಇನ್ನು ಎರಡು ದಿನಗಳಲ್ಲಿ ಸ್ಪಷ್ಟನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ಹುದ್ದೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನ್ಯಾ ವಿಶ್ವನಾಥ್ ಶೆಟ್ಟಿ ಹೆಸರು ಅಂತಿಮಗೊಳಿಸಿ ಜನವರಿ 9ರಂದು ರಾಜ್ಯಪಾಲರಿಗೆ ಶಿಫಾರಸು ಕಳಿಸಲಾಗಿತ್ತು.
ಉನ್ನತಾಧಿಕಾರ ಸಮಿತಿ ಶಿಫಾರಸಿನ ಮೇರೆಗೆ ರಾಜ್ಯಪಾಲರು ಅಂತಿಮ ಘೋಷಣೆ ಹೊರಡಿಸುವ ನಿರೀಕ್ಷೆ ಇತ್ತು. ಆದರೆ, ಆಯ್ಕೆ ಬಗ್ಗೆ ವಜುಭಾಯಿ ವಾಲ ಅವರು ಪ್ರಶ್ನೆ ಎತ್ತಿದ್ದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಲೋಕಾಯುಕ್ತ ಹುದ್ದೆಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿ ಆನಂದ್ ಬೈರಾರೆಡ್ಡಿ, ನಿವೃತ್ತ ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ಹಾಗೂ ಸಿ.ವಿಶ್ವನಾಥ್ ಶೆಟ್ಟಿ ಅವರ ಹೆಸರು ಪ್ರಸ್ತಾಪವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವನಾಥ್ ಶೆಟ್ಟಿ ಪರ ಒಲವು ತೋರಿದ್ದು , ಇದಕ್ಕೆ ವಿರೋಧ ಪಕ್ಷಗಳು ಸಹಮತ ವ್ಯಕ್ತಪಡಿಸಿದವು.