ಲೋಕ ಸಮರಕ್ಕೂ ಮುನ್ನವೇ ನಾಪತ್ತೆಯಾದ ರಮೇಶ್ ಜಾರಕಿಹೊಳಿ, ನಾಗೇಂದ್ರ
Recommended Video
ಬೆಂಗಳೂರು, ಮಾರ್ಚ್ 16: ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಬಿಜೆಪಿ ಸೇರಿದ ಬೆನ್ನಲ್ಲೇ ರಮೇಶ್ ಜಾರಕಿಹೊಲಿ, ನಾಗೇಂದ್ರ ಹಾಗೂ ಮಹೇಶ್ ಕುಮಟಳ್ಳಿ ಕಾಂಗ್ರೆಸ್ ತೊರೆಯಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.
ಆದರೆ ಚುನಾವಣೆ ಘೋಷಣೆಯಾದ ಬಳಿಕ ನಾಗೇಂದ್ರ ಹಾಗೂ ರಮೇಶ್ ಜಾರಕಿಹೊಳಿ ನಾಪತ್ತೆಯಾಗಿದ್ದಾರೆ. ಉಮೇಶ್ ಜಾಧವ್ ಬಿಜೆಪಿಗೆ ಸೇರುವ ಸಂದರ್ಭದಲ್ಲಿ ಅತೃಪ್ತ ಶಾಸಕರೆಲ್ಲರೂ ಸಭೆ ನಡೆಸಿದ್ದರು. ಬಳಿಕ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅತೃಪ್ತ ಶಾಸಕರ ಮನವೊಲಿಸಲು ಪ್ರಯತ್ನ ನಡೆಸಿದ್ದರು. ಅದಾದ ಬಳಿಕ ಇಬ್ಬರೂ ಕಣ್ಣಿಗೆ ಕಾಣುತ್ತಿಲ್ಲ.
ಕಾಂಗ್ರೆಸ್ ಅತೃಪ್ತರಿಗೆ ಮಾರ್ಚ್ 12ರಂದು ಬುಲಾವ್, ಅನರ್ಹತೆಯ ಭಯ
ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗದೆ ವಿಪ್ ಉಲ್ಲಂಘಿಸಿದ್ದಕ್ಕೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕಮಟಳ್ಳಿ, ಉಮೇಶ್ಜಾಧವ್ ಅವರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಜರುಗಿಸುವಂತೆ ಸ್ಪೀಕರ್ ಅವರಿಗೆ ದೂರು ನೀಡಿದ್ದರು. ಸ್ಪೀಕರ್ ವಿಚಾರಣೆಯನ್ನು ಮುಂದೂಡಿದ್ದರು.
ಈ ನಾಲ್ವರು ಅತೃಪ್ತರ ಪೈಕಿ ಉಮೇಶ್ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಲಬುರ್ಗಿ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸ್ಪರ್ಧಿಸಲು ಮುಂದಾಗಿದ್ದಾರೆ. ಶಾಸಕ ಮಹೇಶ್ಕಮಟಳ್ಳಿ ತಮ್ಮೆಲ್ಲಾ ಅಸಮಾಧಾನಗಳನ್ನು ಬದಿಗಿಟ್ಟು ಲೋಕಸಭೆ ಚುನಾವಣೆ ಸಿದ್ಧತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕಾಂಗ್ರೆಸ್ನ ಅತೃಪ್ತ ಶಾಸಕರ ವಿಚಾರಣೆ ಮುಂದೂಡಿದ ಸ್ಪೀಕರ್ ರಮೇಶ್ ಕುಮಾರ್
ಉಮೇಶ್ ಜಾಧವ್ ಅವರ ರಾಜೀನಾಮೆ ಅಂಗೀಕಾರಗೊಂಡು ಅವರಿಗೆ ಕಾಂಗ್ರೆಸ್ ಪಕ್ಷದಿಂದ ಬಿಡುಗಡೆಗೊಂಡರೆ, ರಮೇಶ್ ಜಾರಕಿಹೊಳಿ ಮತ್ತು ನಾಗೇಂದ್ರ ಅವರು ಕೂಡ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಿದ್ದಾರೆ ಎಂಬ ವದಂತಿಗಳಿವೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಈ ಇಬ್ಬರು ಹೆಚ್ಚು ತಲೆ ಕೆಡಿಸಿಕೊಳ್ಳದೆ ಅವರ ಪಾಡಿಗೆ ಅವರಿದ್ದಾರೆ.
ಬೆಳಗಾವಿ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಬಳ್ಳಾರಿ ಕ್ಷೇತ್ರದ ಶಾಸಕ ನಾಗೇಂದ್ರ ಈವರೆಗೂ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಲೋಕಸಭೆ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಬಳ್ಳಾರಿಯಲ್ಲಿ ನಾಗೇಂದ್ರ ಅವರ ಅನುಪಸ್ಥಿತಿ ಎದ್ದು ಕಾಣುತ್ತಿದ್ದು, ಅವರೊಂದಿಗೆ ಇನ್ನೊಬ್ಬ ಶಾಸಕ ಜೆ.ಎನ್.ಗಣೇಶ್ ಅವರೂ ಕೂಡ ಗೈರಾಗಿದ್ದಾರೆ.