ಕರ್ನಾಟಕ ಸಿಎಂ ಕುರ್ಚಿ ಬದಲಾವಣೆ ಆಟಕ್ಕೆ ಬಿಗ್ ಟ್ವಿಸ್ಟ್; ಹೊರಬಿತ್ತು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ
ದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ವದಂತಿ ಹಾಗೂ ದೆಹಲಿ ಮಟ್ಟದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಪೂರ್ಣವಿರಾಮ ಇಟ್ಟಿದೆ. ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಮಾಧ್ಯಮಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ಬರುತ್ತಿರುವುದೆಲ್ಲಾ ಕೇವಲ ವದಂತಿ ಅಷ್ಟೇ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ
ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಅವರು ಮಾಧ್ಯಮಗಳಿಗೆ ಈ ವಿಷಯ ತಿಳಿಸಿದರು. ಇಂದು ನಡೆದ ಹೈವೋಲ್ಟೇಜ್ ಸಭೆಯ ವಿವರ ನೀಡಿದ ಕೆ.ಸಿ.ವೇಣುಗೋಪಾಲ್, "ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ನಾವು ಸುದೀರ್ಘ ಮತ್ತು ವಿವರವಾದ ಸಭೆ ನಡೆಸಿದ್ದೇವೆ. ಈ ಪ್ರಮುಖ ಚರ್ಚೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಹಾಗೂ ನಾನು ಭಾಗಿಯಾಗಿದ್ದೆವು" ಎಂದರು.

ಚರ್ಚೆಯಾಗಿದ್ದೇನು?
"ಸಭೆಯ ಸಂಪೂರ್ಣ ಚರ್ಚೆಯು ಕೇವಲ ಕರ್ನಾಟಕದಲ್ಲಿ ಮುಂಬರುವ ರಾಜ್ಯಸಭಾ ಚುನಾವಣೆ ಮತ್ತು ವಿಧಾನ ಪರಿಷತ್ (ಕೌನ್ಸಿಲ್) ಚುನಾವಣೆಗಳ ಮೇಲೆ ಮಾತ್ರ ಕೇಂದ್ರೀಕೃತವಾಗಿತ್ತು. ಇದನ್ನು ಬಿಟ್ಟು ಸಿಎಂ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ. ನೀವು ಮಾಡುತ್ತಿರುವ ಊಹಾಪೋಹಗಳಲ್ಲಿ ಯಾವುದೇ ಸತ್ಯಾಂಶವಿಲ್ಲ, ವಾಸ್ತವದಲ್ಲಿ ಅದಕ್ಕೆ ಯಾವುದೇ ಆಧಾರವಿಲ್ಲ" ಎಂದು ಮಾಧ್ಯಮಗಳ ಪ್ರಶ್ನೆಗೆ ವೇಣುಗೋಪಾಲ್ ಖಡಕ್ ಆಗಿ ಉತ್ತರಿಸಿದರು.
ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಕರ್ನಾಟಕದ ರಾಜ್ಯಸಭಾ ಸೀಟುಗಳ ಅಭ್ಯರ್ಥಿಗಳ ಹೆಸರನ್ನು ಇತರ ರಾಜ್ಯಗಳ ಪಟ್ಟಿಯ ಜೊತೆಯಲ್ಲೇ ಹೈಕಮಾಂಡ್ ಅಧಿಕೃತವಾಗಿ ಪ್ರಕಟಿಸಲಿದೆ. ಇಂದಿನ ಸಭೆಯಲ್ಲಿ ಕೇವಲ ಈ ಮುಂಬರುವ ಚುನಾವಣೆಗಳ ಕಾರ್ಯತಂತ್ರ ಮತ್ತು ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಮಾತ್ರ ತೀರ್ಮಾನ ಕೈಗೊಳ್ಳಲಾಗಿದೆಯೇ ಹೊರತು, ಬೇರೆ ಯಾವುದೇ ವಿಷಯ ಪ್ರಸ್ತಾಪವಾಗಿಲ್ಲ ಎಂದು ಹೇಳುವ ಮೂಲಕ ಕರ್ನಾಟಕ ಕಾಂಗ್ರೆಸ್ನ ನಾಯಕತ್ವ ಬದಲಾವಣೆ ವಿವಾದಕ್ಕೆ ದೆಹಲಿ ನಾಯಕರು ಸದ್ಯಕ್ಕೆ ಬ್ರೇಕ್ ಹಾಕಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇತ್ತೀಚೆಗಷ್ಟೇ ಮೂರು ವರ್ಷಗಳ ಅವಧಿಯನ್ನು ಪೂರೈಸಿದೆ. ಸರ್ಕಾರ ರಚನೆಯಾದ ದಿನದಿಂದಲೂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರ ನಡುವೆ 'ಅಧಿಕಾರ ಹಂಚಿಕೆ' ಮತ್ತು 2.5 ವರ್ಷಗಳ ನಂತರ ಸಿಎಂ ಬದಲಾವಣೆ ಕುರಿತು ಸದ್ದಿಲ್ಲದೆ ಶೀತಲ ಸಮರ ನಡೆಯುತ್ತಲೇ ಇದೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ನಿಂದ ಕರೆ ಬಂದಿತ್ತು. ಅವರು ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚಿಸಲು ಸಮಯ ಕೇಳಿದ್ದರು ಎನ್ನಲಾಗಿದ್ದರೂ, ದಿಢೀರ್ ಆಗಿ ಇಬ್ಬರೂ ನಾಯಕರನ್ನು ದೆಹಲಿಗೆ ಕರೆಸಿಕೊಂಡಿದ್ದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಕರ್ನಾಟಕದಿಂದ ತೆರವಾಗಲಿರುವ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ ಆರಾಮವಾಗಿ 3 ಸ್ಥಾನಗಳನ್ನು ಗೆಲ್ಲಬಹುದಾಗಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬ ಕುರಿತು ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.













Click it and Unblock the Notifications