7 Pay Commission: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ; 7ನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್!
ಬೆಂಗಳೂರು,ಜುಲೈ 05: ಲೋಕಸಭೆ ಚುನಾವಣೆಯ ನೀತಿ ಸಂಹಿತಿ ಮುಗಿದ ನಂತರ ಏಳನೇ ವೇತನ ಆಯೋಗದ ಜಾರಿ ಕುರಿತು ಸರ್ಕಾರಿ ನೌಕರರು ಭಾರಿ ನಿರೀಕ್ಷೆಯಲ್ಲಿದ್ದರು. ಆದರೆ, ರಾಜ್ಯದಲ್ಲಿ ಏಳನೇ ವೇತನ ಆಯೋಗದ ಜಾರಿಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ (ಜುಲೈ 04) ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯದಲ್ಲಿ ಏಳನೇ ವೇತನ ಆಯೋಗದ ಜಾರಿ ಕುರಿತು ಚರ್ಚೆಯಾಗಲಿದೆ ಎನ್ನುವ ನಿರೀಕ್ಷೆ ಇತ್ತು. ಅದರಂತೆ ಕೆಲ ದಿನಗಳ ಹಿಂದೆಯಷ್ಟೇ ಈ ಸಂಬಂಧ ಸರ್ಕಾರಿ ನೌಕರರ ಸಂಘದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿತ್ತು. ಈ ವೇಳೆ ಏಳನೇ ವೇತನ ಆಯೋಗದ ಜಾರಿ ಅನುಷ್ಠಾನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಈ ಮೂಲಕ ಲೋಕಸಭೆ ಚುನಾವಣೆ ನಂತರ 7ನೇ ವೇತನ ಆಯೋಗ ಜಾರಿಗೆ ಬರುತ್ತೆ ಎಂದು ಕಾಯುತ್ತಿದ್ದ ಸರ್ಕಾರಿ ನೌಕರರಿಗೆ ಇದೀಗ ಮತ್ತೆ ಬೇಸರ ಮೂಡಿಸಿದೆ.
ಲೋಕಸಭೆ ನೀತಿ ಸಂಹಿತಿ ಮುಗಿದ ನಂತರ ಏಳನೇ ವೇತನ ಆಯೋಗದ ಜಾರಿ ಕುರಿತು ಸರ್ಕಾರಿ ನೌಕರರು ಭಾರಿ ನಿರೀಕ್ಷೆಯಲ್ಲಿದ್ದರು. ಈಗ ಲೋಕಸಭೆ ನೀತಿ ಸಂಹಿತಿ ಹಿಂಪಡೆದಿದ್ದು, ನೀತಿ ಸಂಹಿತೆ ಹಿಂದೆ ಪಡೆದ ನಂತರ ನಡೆದಿರುವ ಮೂರನೇ ಸಚಿವ ಸಂಫುಟ ಸಭೆಯಾಗಿದ್ದು, ಈ ಬಗ್ಗೆ ಚರ್ಚೆ ಮಾಡದಿರುವುದು ಸರ್ಕಾರಿ ನೌಕರರಿಗೆ ನಿರಾಸೆಯಾದಂತಾಗಿದೆ.
ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ನೀಡಿದರು.
ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಸಂಖ್ಯೆ: ಹಿಂವಕ 114 ಬಿಸಿಎ 2022 (ಭಾ-1) ದಿನಾಂಕ: 04.11.2023 ರಲ್ಲಿ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ "To bring all urban and Local Bodies Election wing under the control of DPAR" ಎಂಬ ಶಿಫಾರಸ್ಸನ್ನು ಕೈಬಿಡುವುದು.
ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲು ಸಚಿವ ಸಂಪುಟ ನಿರ್ಣಯಿಸಿದೆ.
ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, ದಿನಾಂಕ: 01.04.2018 ರಿಂದ 31.03.2020ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು; ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ: 01.04.2020 ರಿಂದ 31.03.2022 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ.












Click it and Unblock the Notifications