ನಟಿ ತಮನ್ನಾಗೆ ₹6 ಕೋಟಿ, ರಾಜ್ಯದ ಅಭಿವೃದ್ಧಿಗೆ ಅನುದಾನವಿಲ್ಲ: ವಿಜಯೇಂದ್ರ ತರಾಟೆ
ಮೈಸೂರು ಸ್ಯಾಂಡಲ್ ಸೋಪ್ಗೆ ಕೋಟಿಗಟ್ಟಲೆ ಸಂಭಾವನೆ ನೀಡಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿ ಮಾಡಿರುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ರಾಜ್ಯ ಸರ್ಕಾರಕ್ಕೆ ಅಭಿವೃದ್ದಿಗೆ ಅನುದಾನ ಕೊಡುವ ಯೋಗ್ಯತೆ ಇಲ್ಲ, ಆದರೆ ಬಾಲಿವುಡ್ ನಟಿಗೆ 6 ಕೋಟಿ ರೂಪಾಯಿ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ʼಮೈಸೂರು ಸ್ಯಾಂಡಲ್ ಸಂಸ್ಥೆ 1916ರಲ್ಲಿ ನಾಲ್ವಡಿ ಮಹಾರಾಜರು ಹುಟ್ಟು ಹಾಕಿದ್ದರು. ಅಂತಹ ಸಂಸ್ಥೆಗೆ ಬಾಲಿವುಡ್ ತಾರೆಯರನ್ನು ಕರೆತಂದ ಸರ್ಕಾರಕ್ಕೆ ಏನು ಹೇಳಬೇಕು? ಎಂದು ಪ್ರಶ್ನಿಸಿದ್ದಾರೆ. ತಮನ್ನಾ ಅವರನ್ನು ರಾಯಭಾರಿ ಮಾಡುವುದು ಅನಿವಾರ್ಯ ಎಂದು ಸಚಿವರು ಹೇಳುತ್ತಾರೆ. ಆದರೆ ಈ ಅನಿವಾರ್ಯ ಮೈಸೂರು ಸ್ಯಾಂಡಲ್ ಸಂಸ್ಥೆಗೆ ಇದೆಯೋ ಅಥವಾ ಇನ್ಯಾರಿಗಾದರೂ ಇದೆಯೋ ಎಂಬ ಬಗ್ಗೆ ನಾಡಿನ ಜನ ಪ್ರಶ್ನೆ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಿಗರೇ ಹೆಚ್ಚಾಗಿ ಬಳಸುತ್ತಿರುವುದು
ತಮನ್ನಾಗೆ ಭಾರಿ ಸಂಭಾವನೆ ನೀಡಿರುವ ಬಗ್ಗೆ ಮೈಸೂರು ರಾಜವಂಶಸ್ಥ ಹಾಗೂ ಬಿಜೆಪಿ ಸಂಸದ ಯದುವೀರ್ ಒಡೆಯರ್ ಕೂಡ ಖಂಡಿಸಿದ್ದಾರೆ. ಮೈಸೂರು ಸಂಸ್ಥಾನದ ಅರಸರಾಗಿದ್ದ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಕೂಡ ಒಂದು. ಈ ಸಂಸ್ಥೆಗೆ ಪರಭಾಷೆ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿದ್ದು ಅತ್ಯಂತ ಅಸಂಬದ್ಧ ಹಾಗೂ ಬೇಜವಾಬ್ದಾರಿಯುತ ನಿರ್ಧಾರ ಎಂದು ಗುಡುಗಿದ್ದಾರೆ.
1916ರಲ್ಲಿ ನಮ್ಮ ಮೈಸೂರು ಸಂಸ್ಥಾನದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಈ ಸಂಸ್ಥೆ ಕಟ್ಟಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸೋಪ್ ದಶಕಗಳಿಂದಲೂ ಎಲ್ಲರ ಮನೆಯಲ್ಲಿ ಸ್ಥಾನ ಪಡೆದಿತ್ತು ಅಲ್ಲದೆ ಈ ಸಂಸ್ಥೆಯ ಬಹುತೇಕ ವಸ್ತುಗಳನ್ನು ಬಳಸುತ್ತಿದ್ದವರೇ ಕನ್ನಡಿಗರು ಎಂದಿದ್ದಾರೆ. ಇಂತಹ ಸಂಸ್ಥೆಗೆ ಪರಭಾಷೆ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಆರು ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ನೀಡಿ ರಾಯಭಾರಿ ಮಾಡಿರುವುದು ಅಕ್ಷಮ್ಯ ಎಂದು ಟೀಕಿಸಿದ್ದಾರೆ.
ಈ ಸಂಸ್ಥೆಗೆ ರಾಯಭಾರಿಯನ್ನು ಮಾಡಲೇಬೇಕು ಎಂದಿದ್ದರೆ ಕನ್ನಡದ ಜನಪ್ರಿಯ ಹಾಗೂ ಪ್ರತಿಭಾವಂತ ನಟಿಯರನ್ನು ನೇಮಿಸಿಕೊಳ್ಳಬೇಕಾಗಿತ್ತು. ತಮನ್ನಾ ಭಾಟಿಯಾ ಅವರಿಗೆ ಮಣೆ ಹಾಕುವ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಸಾವಿರಾರು ಕೋಟಿ ರೂಪಾಯಿಗಳನ್ನು ಜನರಿಗೆ ನೀಡದೇ ಮಾತು ತಪ್ಪಿದೆ. ಈಗ ಪರಭಾಷೆ ನಟಿಗೆ ಮಣೆ ಹಾಕುವುದನ್ನು ಕೂಡಲೇ ನಿಲ್ಲಿಸಬೇಕು. ರಾಜ್ಯ ಸರ್ಕಾರ ಈ ಕೂಡಲೇ ಈ ನೇಮಕವನ್ನು ತಕ್ಷಣವೇ ರದ್ದುಗೊಳಿಸಿ ಕನ್ನಡಿಗರ 6.20 ಕೋಟಿ ರೂಪಾಯಿಯನ್ನು ಉಳಿಸಬೇಕು ಎಂದು ಯದುವೀರ್ ಆಗ್ರಹಿಸಿದ್ದಾರೆ. ಆದರೆ ಸರ್ಕಾರವು ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿರುವ ವಿಚಾರವಾಗಿ ಸಮರ್ಥನೆ ಮಾಡಿಕೊಳ್ಳುತ್ತಿದೆ.












Click it and Unblock the Notifications