ಲೋಕಸಭಾ ಚುನಾವಣೆ : ಕರ್ನಾಟಕ ಬಿಜೆಪಿ ಪಟ್ಟಿಯಲ್ಲಿ ಅಚ್ಚರಿಯೇ ಇಲ್ಲ
Recommended Video

ಬೆಂಗಳೂರು, ಮಾರ್ಚ್ 21 : 2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 21 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಆದರೆ, ಪಟ್ಟಿಯಲ್ಲಿ ಯಾವುದೇ ಅಚ್ಚರಿ ಇಲ್ಲ.
ಗುರುವಾರ ಕೇಂದ್ರ ಬಿಜೆಪಿ ಘಟಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಏಪ್ರಿಲ್ 18 ಮತ್ತು 23ರಂದು ಚುನಾವಣೆ ನಡೆಯಲಿದ್ದು, 21 ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಹಾಲಿ ಸಂಸದರಿಗೆ ಟಿಕೆಟ್ ನೀಡಲಾಗಿದ್ದು, ಬಿಜೆಪಿ ಪಟ್ಟಿಯಲ್ಲಿ ಯಾವುದೇ ಅಚ್ಚರಿಯ ಹೆಸರುಗಳು ಇಲ್ಲ. ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಕ್ಷೇತ್ರದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿತ್ತು. ಆದರೆ, ಹಾಲಿ ಸಂಸದರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ನಿಂದ ಬಿಜೆಪಿಗೆ ಬಂದ ಡಾ.ಉಮೇಶ್ ಜಾಧವ್, ಎ.ಮಂಜು ಅವರು ಟಿಕೆಟ್ ಪಡೆದಿದ್ದಾರೆ. ವಿದಾತ್ಮಕ ಹೇಳಿಕೆಗಳಿಂದ ಸುದ್ದಿ ಮಾಡಿದ್ದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಸಹ ಟಿಕೆಟ್ ಸಿಕ್ಕಿದೆ..

ಶೋಭಾ ಕರಂದ್ಲಾಜೆಗೆ ಟಿಕೆಟ್
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಅವರಿಗೆ ಟಿಕೆಟ್ ನೀಡಲು ಭಾರಿ ವಿರೋಧ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವೇ ನಡೆದಿತ್ತು. ಸ್ಥಳೀಯ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ, ಅಭಿವೃದ್ಧಿ ಮಾಡಿಲ್ಲ ಎಂಬ ವಿಚಾರ ಮುಂದಿಟ್ಟುಕೊಂಡು ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡುವುದು ಬೇಡ ಎಂದು ಒತ್ತಾಯಿಸಲಾಗಿತ್ತು.

ನಳೀನ್ ಕುಮಾರ್ ಕಟೀಲ್
ದಕ್ಷಿಣ ಕನ್ನಡ ಕ್ಷೇತ್ರದ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಬಾರದು ಎಂಬ ಒತ್ತಾಯ ಕೇಳಿಬಂದಿತ್ತು. ಆದರೆ, ಅವರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 'ಮತ್ತೊಮ್ಮೆ ಮೋದಿ ಓಕೆ ನಳೀನ್ ಏಕೆ?' ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆದಿತ್ತು. ಟಿಕೆಟ್ ಘೋಷಣೆಯಾಗುತ್ತಿದ್ದಂತೆ ನಳೀನ್ ಸೋಲಿಸಿ ಎಂಬ ಪೋಸ್ಟ್ಗಳು ವೈರಲ್ ಆಗುತ್ತಿವೆ. ಏಪ್ರಿಲ್ 18ರಂದು ದಕ್ಷಿಣ ಕನ್ನಡದಲ್ಲಿ ಮತದಾನ ನಡೆಯಲಿದೆ.

ಎ.ಮಂಜುಗೆ ಟಿಕೆಟ್ ಸಿಕ್ಕಿತು
ಮಾ.17ರ ಭಾನುವಾರ ಬಿಜೆಪಿ ಸೇರಿದ್ದ ಅರಕಲಗೋಡು ಮಂಜು ಅವರಿಗೆ ಹಾಸನ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿದ್ದ ಎ.ಮಂಜು ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ವಿರೋಧಿಸಿದ್ದರು. ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡಿದರೆ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡಿ ಎಂದು ಒತ್ತಾಯಿಸಿದ್ದರು. ಆದರೆ, ಪ್ರಜ್ವಲ್ ರೇವಣ್ಣ ಕಣಕ್ಕಿಳಿದಿದ್ದರಿಂದ ಅಸಮಾಧಾನಗೊಂಡು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು.

ಡಾ.ಉಮೇಶ್ ಜಾಧವ್
ಗುಲ್ಬರ್ಗ ಅಥವ ಕಲಬುರಗಿ ಕ್ಷೇತ್ರದಲ್ಲಿ ಡಾ.ಉಮೇಶ್ ಜಾಧವ್ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದ ಡಾ.ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಜಾಧವ್ ಅಭ್ಯರ್ಥಿಯಾಗಿದ್ದಾರೆ. ಶಾಸಕ ಸ್ಥಾನಕ್ಕೆ ಅವರು ನೀಡಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ.

ದೇವೇಂದ್ರಪ್ಪಗೆ ಬಿಜೆಪಿ ಟಿಕೆಟ್
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ದೇವೇಂದ್ರಪ್ಪ ಅವರಿಗೆ ಟಿಕೆಟ್ ಕೊಡಿಸಲು ಬಿ.ಶ್ರೀರಾಮುಲು ಅವರು ಯಶಸ್ವಿಯಾಗಿದ್ದಾರೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ತಮ್ಮ ಸಹೋದರ ಬಿ.ವೆಂಕಟೇಶ ಪ್ರಸಾದ್ಗೆ ಬಿಜೆಪಿ ಟಿಕೆಟ್ ಕೊಡಿಸಲು ಸಾಕಷ್ಟು ಪ್ರಯತ್ನಿಸಿದ್ದರು. ಉದ್ಯಮಿಯಾದ ಬಿ.ವೆಂಕಟೇಶ ಪ್ರಸಾದ್ ಈಗಾಗಲೇ ಬಿಜೆಪಿ ಸೇರಿದ್ದಾರೆ. ಆದರೆ, ಶ್ರೀರಾಮುಲು ಅವರು ದೇವೇಂದ್ರಪ್ಪ ಅವರ ಪರವಾಗಿ ಬ್ಯಾಟಿಂಗ್ ಮಾಡಿದ್ದು, ಟಿಕೆಟ್ ಕೊಡಿಸಿದ್ದಾರೆ.












Click it and Unblock the Notifications