'ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ, ಯಾರೇ ಹೋದರೂ ಪಕ್ಷಕ್ಕೆ ನಷ್ಟವಾಗದು'
ಬೆಂಗಳೂರು, ಜನವರಿ 26: ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ನಷ್ಟವಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಅವರಿಗೆ ಪಕ್ಷದ ಟೆಕೆಟ್ ನೀಡಿದ್ದೆವು. 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೆಶನ ಮಾಡಿದ್ದೆವು. ಕಳೆದ 2-3 ತಿಂಗಳಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು. ಮೊನ್ನೆ ಕೂಡ ಬಿಜೆಪಿ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಆದರೆ ನಿನ್ನೆ ಏಕಾಏಕಿ ಪಕ್ಷ ತೊರೆದಿದ್ದಾರೆ.

ನಮ್ಮ ಪಕ್ಷ 136 ಸೀಟು ಗೆದ್ದಿದೆ. ನಮ್ಮ ತಪ್ಪಿನಿಂದ 6-7 ಸೀಟು ಸೋತಿದ್ದೇವೆ. ಈಗಲೂ ಬಹಳ ಮಂದಿ ನಮ್ಮ ಪಕ್ಷ ಸೇರಲು ಎದುರು ನೋಡುತ್ತಿದ್ದಾರೆ. ನಾವು ಸಿದ್ಧಾಂತ, ನೀತಿ ಮೇಲೆ ರಾಜಕಾರಣ ಮಾಡುವವರು. ಬೆಳಗಾವಿ ಹಾಗೂ ಇತರೆ ಭಾಗದ ನಾಯಕರು, ಕಾರ್ಯಕರ್ತರು ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಹೋಗಿದ್ದು ಒಳ್ಳೆಯದಾಯಿತು ಎಂದು ಹೇಳಿದ್ದಾರೆ. ದೂರದೃಷ್ಟಿ ಇಟ್ಟುಕೊಂಡು ಅವರಿಗೆ ನಾವು ಅವಕಾಶ ಮಾಡಿಕೊಟ್ಟಿದ್ದೆವು. ಅವರು ಬಿಜೆಪಿ ವಿರುದ್ಧ ಕೊಟ್ಟ ಹೇಳಿಕೆಗಳಿಗೆ ಈಗ ಅವರೇ ಉತ್ತರ ನೀಡಬೇಕು. ಅದರ ಬಗ್ಗೆ ನಾವು ಮಾತನಾಡುವ ಅಗತ್ಯವಿಲ್ಲ. ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಿಗೆ ನೀಡುತ್ತೇವೆ.
ರಾಜ್ಯದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಪವಿತ್ರ ಗ್ರಂಥ ಸಂವಿಧಾನ. ಇದು ನಮ್ಮ ರಾಷ್ಟ್ರೀಯ ಗ್ರಂಥ. ಸಂವಿಧಾನ ಎತ್ತಿಹಿಡಿಯುವುದು ನಮ್ಮ ಕರ್ತವ್ಯ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲಾ ವರ್ಗದ ಜನರೂ ಅಧಿಕಾರಕ್ಕೆ ಬಂದಂತೆ. ಕಾಂಗ್ರೆಸ್ ಎಲ್ಲಾ ವರ್ಗದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತದೆ.

ನಾವು ದೇಶದ ಚುನಾವಣೆಯ ಸಮೀಪದಲ್ಲಿದ್ದೇವೆ. ಮಾಧ್ಯಮಗಳಲ್ಲಿ ಅನೇಕ ಚರ್ಚೆ ಆಗುತ್ತಿವೆ. ಇಂಡಿಯಾ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತದೆ. ಕೆಲವರು ಪ್ರತ್ಯೇಕವಾಗಿ ಚುನಾವಣೆ ಎದುರಿಸುತ್ತೇವೆ ಎಂದು ನೀಡಿರುವ ಹೇಳಿಕೆಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇವೆ. ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದೆ.
ಮುಂದೆ ತತ್ವ ಸಿದ್ಧಾಂತ ನಂಬಿ ಬರುವವರನ್ನು ಮಾತ್ರ ಸೇರಿಸಿಕೊಳ್ಳುತ್ತೀರಾ ಎಂದು ಪ್ರಶ್ನೆಗೆ ಉತ್ತರಿಸಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ನಾವು ಬಿಜೆಪಿಯವರನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿ ಅವರಿಗೆ ಬೇಷರತ್ ಬೆಂಬಲ ನೀಡಿ ಮುಖ್ಯಮಂತ್ರಿ ಮಾಡಿದ್ದೆವು. ಆ ಸರ್ಕಾರವನ್ನು ಅವರು ಉಳಿಸಿಕೊಳ್ಳಲಿಲ್ಲ. ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸಿದವರ ಜತೆಗೆ ಅವರು ಇಂದು ನೆಂಟಸ್ತನ ಬೆಳೆಸಿದ್ದಾರೆ.
ಜೆಡಿಎಸ್ ಹಾಗೂ ಕುಮಾರಸ್ವಾಮಿ ಈಗ ಬಿಜೆಪಿಯ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರ ಬಿದ್ದಾಗ ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ಆಡಿದ ಮಾತುಗಳಿಗೆ ಈಗ ಅವರೇ ಉತ್ತರ ನೀಡಬೇಕು. ರಾಜಕಾರಣ ಹೀಗಿರುವಾಗ ಬಗ್ಗೆ ನಮಗೆ ನಾಚಿಕೆಯಾಗುತ್ತದೆ. ಅಧಿಕಾರ ಬರುತ್ತದೆ, ಹೋಗುತ್ತದೆ. ಆದರೂ ನಾವು ನೀತಿ, ಸಿದ್ಧಾಂತದ ಮೇಲೆ ರಾಜಕಾರಣ ಮಾಡಬೇಕು ಎಂದು ತಿಳಿಸಿದರು.












Click it and Unblock the Notifications