ಬೆಂಗಳೂರಿಗೆ ಬರ್ತಿದ್ದಂತೆ ಬ್ರೇಕಿಂಗ್ ನ್ಯೂಸ್ ಕೊಟ್ಟ ಯಡಿಯೂರಪ್ಪ
Recommended Video
ಬೆಂಗಳೂರು, ಜನವರಿ 24 : ಕರ್ನಾಟಕಕ್ಕೆ ವಾಪಸ್ ಆದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಬ್ರೇಕಿಂಗ್ ನ್ಯೂಸ್ ಕೊಟ್ಟರು. ಆದರೆ, ಉಪ ಚುನಾವಣೆಯಲ್ಲಿ ಸೋತ ಮತ್ತು ಗೆದ್ದ ಅಭ್ಯರ್ಥಿಗಳಿಗೆ ಢವ-ಢವ ಶುರುವಾಗಿದೆ.
ಶುಕ್ರವಾರ ಮಧ್ಯಾಹ್ನ 3.30ರ ವೇಳೆಗೆ ದಾವೋಸ್ ಪ್ರವಾಸ ಮುಗಿಸಿ ಯಡಿಯೂರಪ್ಪ ಬೆಂಗಳೂರಿಗೆ ವಾಪಸ್ ಆದರು. ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ" ಎಂದು ಹೇಳಿದರು.
ಯಡಿಯೂರಪ್ಪ ರಾಜ್ಯಕ್ಕೆ ಮರಳುತ್ತಿದ್ದಂತೆ ಸಂಪುಟ ವಿಸ್ತರಣೆಯ ಚಟುವಟಿಕೆಗಳು ಗರಿಗೆದರಿದೆ. ಉಪ ಚುನಾವಣೆಯಲ್ಲಿ ಗೆದ್ದ 12 ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಮೂಲ ಬಿಜೆಪಿ ಶಾಸಕರು ಸಹ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷರಾದಿ ಜೆ. ಪಿ. ನಡ್ಡಾ ಅಧಿಕಾರ ಸ್ವೀಕರಿಸಿದ್ದಾರೆ. ಯಡಿಯೂರಪ್ಪ ನೂತನ ಅಧ್ಯಕ್ಷರನ್ನು ಭೇಟಿಯಾಗಲಿದ್ದು, ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ವರಿಷ್ಠರ ಭೇಟಿಗೆ ಇನ್ನೂ ಸಮಯಾವಕಾಶ ಸಿಕ್ಕಿಲ್ಲ.

ಯಡಿಯೂರಪ್ಪ ಹೇಳಿದ್ದೇನು?
"ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆಯೇ ಇಲ್ಲ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೇಳಿದರು.

ಎಂಟಿಬಿ ನಾಗರಾಜ್ ಅತಂತ್ರ
ಯಡಿಯೂರಪ್ಪ ಹೇಳಿಕೆಯಿಂದಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹೊಸಕೋಟೆ ಕ್ಷೇತ್ರದ ಮಾಜಿ ಶಾಸಕ ಎಂಟಿಬಿ ನಾಗರಾಜ್ಗೆ ಹಿನ್ನಡೆಯಾಗಿದೆ. ಹೊಸಕೋಟೆ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ವಿರುದ್ಧ ಎಂಟಿಬಿ ನಾಗರಾಜ್ ಸೋತಿದ್ದರು. ಆದರೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಎಚ್. ವಿಶ್ವನಾಥ್ ಕಥೆ ಏನು?
ಉಪ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಲ್ಲಿ ಎಚ್. ಪಿ. ಮಂಜುನಾಥ್ ವಿರುದ್ಧ ಸೋತಿರುವ ಎಚ್. ವಿಶ್ವನಾಥ್ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಅವರನ್ನು ಸಚಿವರನ್ನಾಗಿ ಮಾಡಿ ಬಳಿಕ ಪರಿಷತ್ಗೆ ನಾಮನಿರ್ದೇಶನ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಯಡಿಯೂರಪ್ಪ ಕೊಟ್ಟ ಬ್ರೇಕಿಂಗ್ ನ್ಯೂಸ್ನಿಂದಾಗಿ ಅವರಿಗೂ ಹಿನ್ನಡೆಯಾಗಿದೆ.

16 ಸ್ಥಾನಗಳು ಖಾಲಿ
ಯಡಿಯೂರಪ್ಪ ಸಂಪುಟದಲ್ಲಿ 16 ಸಚಿವ ಸ್ಥಾನಗಳು ಖಾಲಿ ಇವೆ. ಇವರಲ್ಲಿ ಉಪ ಚುನಾವಣೆಯಲ್ಲಿ ಗೆದ್ದ 12 ಶಾಸಕರು ಇದ್ದಾರೆ. ಮೂಲ ಬಿಜೆಪಿ ಶಾಸಕರು ಸಹ ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಯಾರಿಗೆ ಸಚಿವರಾಗುವ ಅದೃಷ್ಟವಿದೆ? ಎಂದು ಕಾದು ನೋಡಬೇಕು.












Click it and Unblock the Notifications