ಕೈ ತಪ್ಪಿದ ಸಚಿವ ಸ್ಥಾನ : ಯಾರು, ಏನು ಹೇಳಿದರು?
Recommended Video
ಬೆಂಗಳೂರು, ಆಗಸ್ಟ್ 20 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿದ್ದಾರೆ. 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಹಲವು ಶಾಸಕರಿಗೆ ನಿರಾಸೆಯಾಗಿದೆ.
ಯಡಿಯೂರಪ್ಪ ಆಂಡ್ ಟೀಂ: ಸಂಪುಟ ವಿಸ್ತರಣೆ ಸಂತಸದ ಚಿತ್ರಗಳು
ಒಟ್ಟು 2 ಹಂತದಲ್ಲಿ ಯಡಿಯೂರಪ್ಪ ಸಂಪುಟ ವಿಸ್ತರಣೆ ನಡೆಯಲಿದೆ. ಮಂಗಳವಾರ ಮೊದಲ ಹಂತದ ಸಂಪುಟ ವಿಸ್ತರಣೆಯಾಗಿದೆ. ಹಲವು ಹಿರಿಯ ನಾಯಕರಿಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ.
ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಅರವಿಂದ ಲಿಂಬಾವಳಿ, ಬಾಲಚಂದ್ರ ಜಾರಕಿಹೊಳಿ, ಎಸ್. ಎ. ರಾಮದಾಸ್ ಮುಂತಾದ ನಾಯಕರಿಗೆ ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ಸಹಜವಾಗಿ ಕೆಲವು ನಾಯಕರು ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾದ ಅನರ್ಹ ಶಾಸಕರಿಗೂ ಮೊದಲ ಹಂತದಲ್ಲಿ ಸಚಿವ ಸ್ಥಾನ ನೀಡಲಾಗಿಲ್ಲ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದರೂ ಸಹ ಲಕ್ಷ್ಮಣ ಸವದಿ ಸಚಿವರಾಗಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ಯಾರು, ಏನು ಹೇಳಿದರು? ನೋಡೋಣ ಬನ್ನಿ....

ಸುನೀಲ್ ಕುಮಾರ್
"ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಅಸಮಾಧಾನವಿಲ್ಲ. ಯಾರಿಗೆ ಸಚಿವ ಸ್ಥಾನ ಸಿಕ್ಕಿದೆ ಅವರ ಮೂಲಕ ನಮ್ಮ ಕ್ಷೇತ್ರ ಕೆಲಸ ಮಾಡಿಸಿಕೊಳ್ಳುತ್ತೇವೆ. ಸಮರ್ಥವಾಗಿ ಕೆಲಸ ಮಾಡಬಲ್ಲ ನಾಯಕರಿದ್ದಾರೆ. ಅಂತವರೆಲ್ಲಾ ಮಂತ್ರಿಗಳಾಗಿದ್ದಾರೆ" ಎಂದು ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್ ಹೇಳಿದರು.

ಹರತಾಳು ಹಾಲಪ್ಪ
"ಶಿವಮೊಗ್ಗ ಜಿಲ್ಲೆಯವನಾದ ಕಾರಣ ನನಗೆ ಸಚಿವ ಸ್ಥಾನ ಕೈತಪ್ಪಿ ಹೋಯಿತು. ಹಾಗೆಂದು ಅಸಮಾಧಾನವೇನಿಲ್ಲ. ಶಿವಮೊಗ್ಗ ಜಿಲ್ಲೆಯ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ. ಈಶ್ವರಪ್ಪ ಕೂಡಾ ಸಚಿವರಾಗಿದ್ದಾರೆ. ಹಾಗಾಗಿ ನಮಗೆ ಸಚಿವ ಸ್ಥಾನ ತಪ್ಪಿರಬಹುದು. ಆದರೆ, ಆರಗ ಜ್ಞಾನೇಂದ್ರ ಅವರಿಗಾದರೂ ಸಚಿವ ಸ್ಥಾನ ನೀಡಬೇಕಿತ್ತು" ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಹೇಳಿದರು.

ರಾಜೂ ಗೌಡ ಹೇಳಿಕೆ
"ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು, ಕುಟುಂಬದವರಿಗೆ, ಬೆಂಬಲಿಗರಿಗೆ ಸಾಕಷ್ಟು ನಿರಾಸೆಯಾಗಿದೆ. ಅವರನ್ನು ಸಮಾಧಾನ ಮಾಡುವುದು ಕಷ್ಟವಾಯಿತು. ಪಕ್ಷ ಮುಂದೆ ದೊಡ್ಡ ಅವಕಾಶ ನೀಡುದ ನಿರೀಕ್ಷೆ ಇದೆ. ಸಚಿವ ಸ್ಥಾನ ಸಿಗಲಿದೆ ಎಂಬ ಸುದ್ದಿ ಇತ್ತು, ಕೊನೆ ಕ್ಷಣದಲ್ಲಿ ಅವಕಾಶ ತಪ್ಪಿದೆ" ಎಂದು ಸುರಪುರ ಶಾಸಕ ರಾಜೂಗೌಡ ಹೇಳಿದರು.

ಉಮೇಶ್ ಕತ್ತಿ ಬೇಸರ
ಸಚಿವಸ್ಥಾನ ಕೈ ತಪ್ಪಿರುವುದಕ್ಕೆ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಸಹ ಬೇಸರ ವ್ಯಕ್ತಪಡಿಸಿದ್ದಾರೆ. "ಶಾಸಕರಲ್ಲದವರಿಗೂ ಸಚಿವ ಸ್ಥಾನ ನೀಡಲಾಗಿದೆ. ಲಕ್ಷ್ಮಣ ಸವದಿಗೆ ಸ್ಥಾನ ನೀಡಿ, ನನ್ನನ್ನು ಕೈ ಬಿಟ್ಟಿದ್ದಾರೆ. 8 ಬಾರಿ ಗೆದ್ದರೂ ನನ್ನನ್ನು ಕಡೆಗಣಿಸಲಾಗಿದೆ" ಎಂದು ಹೇಳಿದ್ದಾರೆ.












Click it and Unblock the Notifications