ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಬಗ್ಗೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಬೆಂಗಳೂರು, ಜೂ. 16: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಅವಶ್ಯಕತೆ ಇಲ್ಲ, ಹೀಗಾಗಿ ಲಾಕ್ಡೌನ್ ಜಾರಿ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಯಡಿಯೂರಪ್ಪ ಹೇಳಿಕೆ ಕೊಟ್ಟಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ಶಂಕರಮಠದಲ್ಲಿ ಲೋಕ ಕಲ್ಯಾಣಾರ್ಥವಾಗಿ ವಿಶ್ವ ಹಿಂದು ಪರಿಷತ್ ಹಾಗೂ ವಿವೇಕಾನಂದ ಸೇವಾ ಸಂಸ್ಥೆ ನಡೆಸಿರುವ ಧನ್ವಂತರಿ ಹೋಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ಇದೆ. ಜನರು ಜೀವನ ನಡೆಸಲು ಅನುಕೂಲ ಮಾಡಿ ಕೊಡಲು ಹಾಗೂ ಆರ್ಥಿಕ ಸುಧಾರಣೆಗೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕೋವಿಡ್ ಮುಕ್ತವಾಗಬೇಕು
ಕೋವಿಡ್ ನಿಂದ ರಾಜ್ಯ ಮುಕ್ತವಾಗಬೇಕು. ಜನರು ನೆಮ್ಮದಿಯಿಂದ ಜೀವನ ನಡೆಸಬೇಕು. ಈ ನಿಟ್ಟಿನಲ್ಲಿ ಇಂದು ದೇವರಲ್ಲಿ ಪೂಜೆ ಸಲ್ಲಿಸಿದ್ದೇನೆ ಎಂದಿದ್ದಾರೆ. ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಸರಿ ಇಲ್ಲ. ಆದರೂ 1000 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇನೆ. ರೈತರಿಗೆ 2000 ರೂಪಾಯಿ ಕೊಡುವ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಿಂದ ರಾಜ್ಯದ 50 ಲಕ್ಷ ರೈತರಿಗೆ ಅನುಕೂಲ ಆಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ತೀವ್ರಗೊಂಡ ಸೋಂಕು: ಕ್ವಾರಂಟೈನ್ ನಿಯಮಾವಳಿ ಬದಲಿಸಿದ ರಾಜ್ಯ ಸರ್ಕಾರ
ಸಂಕಷ್ಟದಲ್ಲಿ ರೈತ
ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲದೆ ಇದ್ದರೂ ರೈತರು ನೆಮ್ಮದಿಯಾಗಿ ಬದುಕಬೇಕು. ಮಳೆಗಾಲದ ಸಂದರ್ಭದಲ್ಲಿ ಆ ಹಣ ರೈತನಿಗೆ ಸಿಗಬೇಕು. ಅದಕ್ಕಾಗಿ ಈ ಹಣ ಬಿಡುಗಡೆ ಮಾಡಿದ್ದೇನೆ. ಕೋವಿಡ್ ಕಾಟದಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಪ್ರಯತ್ನ ಮಾಡಬೇಕೋ ಅದೆಲ್ಲವೂ ನಾವು ಮಾಡ್ತಿದ್ದೇವೆ. ಬಹಳ ಬಿಗಿಯಾದ ಕ್ರಮಗಳನ್ನು ಕೂಡ ತೆಗೆದು ಕೊಳ್ಳುತ್ತಿದ್ದೇವೆ. ನಮ್ಮೆಲ್ಲಾ ಸ್ನೇಹಿತರ ಜೊತೆಗೂಡಿ ಕೊವಿಡ್ ತಡೆಯಲು ಶಕ್ತಿ ಮೀರಿ ಕೆಲಸ ಮಾಡ್ತಿದ್ದೇವೆ ಎಂದು ಯಡಿಯುರಪ್ಪ ಭರವಸೆ ಕೊಟ್ಟಿದ್ದಾರೆ.
ಹೆಚ್ಚೆಚ್ಚು ಕೋವಿಡ್ ಪರೀಕ್ಷೆ
ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ಕಡಿಮೆ ಮಾಡಿಲ್ಲ. ಇನ್ನೂ ಟೆಸ್ಟಿಂಗ್ ಹೆಚ್ಚಿಗೆ ಮಾಡುತ್ತಿದ್ದೇವೆ. ನಿರೀಕ್ಷೆಗೂ ಮೀರಿ ಕೊರೊನಾ ವೈರಸ್ ಪರೀಕ್ಷೆ ಮಾಡುವುದನ್ನು ಹೆಚ್ಚು ಮಾಡುತ್ತಿದ್ದೇವೆ. ದೇಶದಲ್ಲಿ ಅತಿ ಹೆಚ್ಚು ಟೆಸ್ಟಿಂಗ್ ಮಾಡ್ತಿರೋ ಯಾವುದಾದರೂ ರಾಜ್ಯ, ಅಂದರೆ ಅದು ಕರ್ನಾಟಕ ಮಾತ್ರ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ಕೊಟ್ಟಿದ್ದಾರೆ.
ಗುರುವಾರ ರಾಜ್ಯಾದ್ಯಂತ ಮಾಸ್ಕ್ ಡೇ ಆಚರಣೆ: ಬಿಎಸ್ವೈ
ರಾಜ್ಯದಲ್ಲಿ ಈ ವರೆಗೆ ಒಟ್ಟು 4,49,331 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದ್ದು, ಅದರಲ್ಲಿ 4,32,346 ವರದಿಗಳು ನೆಗೆಟಿವ್ ಎಂದು ಬಂದಿವೆ.
ಸೋಂಕಿತರು ಗುಣಮುಖ
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,213ಕ್ಕೆ ಏರಿಕೆ ಆಗಿದ್ದರೂ ಗುಣಮುಖರಾದವರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಸೋಂಕಿನಿಂದ ಬಳಲುತ್ತಿದ್ದ 4,135 ಜನರು ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳಲ್ಲಿ 2,987 ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ಆದರೂ ಕೊರೊನಾ ವೈರಸ್ ಸೋಂಕಿನಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 56 ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ವರೆಗೆ ಕೊರೊನಾ ವೈರಸ್ಗೆ 88 ಜನರು ಬಲಿಯಾಗಿದ್ದಾರೆ.